ಬಿಜೆಪಿ ಸಂಸದೀಯ ಮಂಡಳಿಗೆ ಬಿಎಸ್ವೈ ನೇಮಕ: ಸಿಎಂ, ಸಚಿವರ ಶುಭಾಶಯ
ಬೆಂಗಳೂರು ಆಗಸ್ಟ್ 17: ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾಗಿ ಕರ್ನಾಟದಕ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ನೇಮಕ ಮಾಡಿದ್ದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಸಚಿವರು ಹರ್ಷ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ ಅವರಿಗೆ ಶುಭ ಕೋರಿದ್ದಾರೆ.
ಬಿ.ಎಸ್.ಯಡಿಯೂರಪ್ಪ ಅವರ ನೇಮಕಾತಿ ಆದೇಶ ಪ್ರಕಟವಾಗುತ್ತಿದ್ದಂತೆ ಅವರಿಗೆ ದೂರವಾಣಿ ಕರೆ ಮಾಡಿದ ಬಸವರಾಜ ಬೊಮ್ಮಾಯಿ ಶುಭಾಶಯ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಸವರಾಜ ಬೊಮ್ಮಾಯಿ ಅವರು, ನಿಕಟಪೂರ್ವ ಮುಖ್ಯಮಂತ್ರಿ ಹಾಗೂ ರೈತ ನಾಯಕ ಬಿ. ಎಸ್. ಯಡಿಯೂರಪ್ಪ ಅವರು ಭಾರತೀಯ ಜನತಾ ಪಕ್ಷದ ಸಂಸದೀಯ ಮಂಡಳಿ ಸಭೆಯ ಸದಸ್ಯರಾಗಿರುವುದಕ್ಕೆ ಅತೀವ ಸಂತೋಷವಾಗಿದೆ. ಬಿಜೆಪಿಯ ಅತ್ಯಂತ ಉನ್ನತ ಸ್ಥಾನ ಎನಿಸಿರುವ ಸಂಸದೀಯ ಮಂಡಳಿಗೆ ನೇಮಕ ಮಾಡುವ ಮೂಲಕ ಬಿಜೆಪಿ ಯಡಿಯೂರಪ್ಪ ಅವರಿಗೆ ಅತಿ ದೊಡ್ಡ ಗೌರವದ ಸ್ಥಾನ ನೀಡಿದೆ ಎಂದು ತಿಳಿಸಿದ್ದಾರೆ.
ಹೈಕಮಾಂಡ್ ಸಂದೇಶ; ಯಡಿಯೂರಪ್ಪ ಸೈಡ್ಲೈನ್ ಮಾಡಿಲ್ಲ!
ತಾವು ಈ ಹುದ್ದೆಗೆ ಏರಿರುವುದರಿಂದ ಕರ್ನಾಟಕ ಬಿಜೆಪಿಗೆ ಆನೆ ಬಲ ಬಂದಂತಾಗಿದೆ. ಕರ್ನಾಟಕ ಬಿಜೆಪಿಗೆ ಅಭೂತಪೂರ್ವ ಬೆಂಬಲ ಸಿಕ್ಕಂತಾಗಿದೆ. 2023ರಲ್ಲಿ ರಾಜ್ಯ ವಿಧಾನಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ. ಯಡಿಯೂರಪ್ಪ ಅವರನ್ನು ಈ ಹುದ್ದೆಗೆ ನೇಮಕ ಮಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ದಾ ಅವರಿಗೆ ಬೊಮ್ಮಾಯಿ ವಂದನೆ ತಿಳಿಸಿದ್ದಾರೆ.
ಸಂತಸಪಟ್ಟ ನಳೀನ್ ಕುಮಾರ್ ಕಟೀಲ್
ಸಂಸದೀಯ ಮಂಡಳಿಯಲ್ಲಿ ಬಿ.ಎಸ್ ಯಡಿಯೂರಪ್ಪ ಸೇರಿ ಇಬ್ಬರಿಗೆ ಕೇಂದ್ರ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡಿರುವುದು ಸಂತೋಷದ ಸಂಗತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೇಂದ್ರದ ನಿರ್ಧಾರವನ್ನು ಸ್ವಾಗತಿಸಿದರು.
ಕರ್ನಾಟಕದಲ್ಲಿ ಬಿಜೆಪಿಯ ಹಿರಿಯ ನಾಯರಕು, ಮಾರ್ಗದರ್ಶಕರು ಹಾಗೂ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಸಂಸದೀಯ ಮಂಡಳಿಯಲ್ಲಿ ಸೇರಿಸಿರುವುದು ಮಹತ್ವದ ಕ್ರಮವಾಗಿದೆ ಎಂದರು.
ದೇಶದೆಲ್ಲೆಡೆ ಬಿಜೆಪಿ ಸಂಘಟನೆ ಮತ್ತು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳುವ ದೃಷ್ಟಿಯಿಂದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಉತ್ತಮ ನಿರ್ಧಾರ ಕೈಗೊಂಡಿದ್ದಾರೆ. ಅವರಿಗೆ ಕರ್ನಾಟಕ ಬಿಜೆಪಿ ಘಟಕದ ಪರವಾಗಿ ಹಾಗೂ ವೈಯಕ್ತಿಕವಾಗಿ ಕಟೀಲ್ ಧನ್ಯವಾದ ಅರ್ಪಿಸಿದ್ದಾರೆ.
ರಾಜ್ಯವನ್ನು ಸಮರ್ಥವಾಗಿ ಪ್ರತಿನಿಧಿಸುತ್ತಾರೆ
ಈ ಕುರಿತು ಪ್ರತಿಕ್ರಿಯಿಸಿದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು, ರೈತ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಬಿಜೆಪಿಯ ನೀತಿ ನಿರೂಪಕ ಅಂಗವಾದ ಕೇಂದ್ರ ಸಂಸದೀಯ ಮಂಡಳಿಯ ಸದಸ್ಯರಾಗಿದ್ದು ನಾಡಿನ ಜನರಲ್ಲಿ ಹಾಗೂ ವೈಯಕ್ತಿಕವಾಗಿ ನನ್ನಲ್ಲಿ ಅತೀವ ಹರ್ಷಕ್ಕೆ ಕಾರಣವಾಗಿದೆ. ಯಡಿಯೂರಪ್ಪ ಅವರು ಕರ್ನಾಟಕ ಸಮರ್ಥವಾಗಿ ಪ್ರತಿನಿಧಿಸುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಬಿಎಸ್ವೈಗೆ ಅಗಾಧ ರಾಜಕೀಯ ಜ್ಞಾನವಿದೆ: ನಿರಾಣಿ
ಬಿಜೆಪಿಯ ಉನ್ನತ ಸ್ಥಾನಕ್ಕೆ ನೇಮಕವಾದ ಯಡಿಯೂರಪ್ಪ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಅವರ ಅಗಾಧ ರಾಜಕೀಯ ಜ್ಞಾನ, ಜನರ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸುವ ಗುಣ, ಯೋಜನೆಗಳನ್ನು ಸಮರ್ಪಕವಾಗಿ ಸಾಕಾರಗೊಳಿಸುವ ಬಗೆ, ಅವರ ಅನುಭವವು ಮಂಡಳಿಗೆ ಅಪಾರ ಪ್ರಯೋಜನ ನೀಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ತಿಳಿಸಿದ್ದಾರೆ.
ಆರಗ ಜ್ಞಾನೇಂದ್ರ ಅಭಿನಂದನೆ
ಬಿಜೆಪಿಯ ಸಂಸದೀಯ ಮಂಡಳಿ ಮತ್ತು ಕೇಂದ್ರೀಯ ಚುನಾವಣಾ ಸಮಿತಿಯ ಸದಸ್ಯರಾಗಿ ನೇಮಕಗೊಂಡ ಬಿ.ಎಸ್.ಯಡಿಯೂರಪ್ಪ ಹಾಗೂ ಬಿ.ಎಲ್.ಸಂತೋಷ್ ಅವರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹಾರ್ಧಿಕ ಅಭಿನಂದನೆ ತಿಳಿಸಿದ್ದಾರೆ. ಇವರ ಜತೆಗೆ ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್, ಸಾರಿಗೆ ಸಚಿವ ಬಿ.ಶ್ರೀರಾಮುಲು ಸೇರಿದಂತೆ ರಾಜ್ಯದ ಅನೇಕ ಗಣ್ಯರು, ಬಿಜೆಪಿ ನಾಯಕರು ಯಡಿಯೂರಪ್ಪ ಅವರಿಗೆ ಶುಭಾಶಯ ತಿಳಿಸಿದ್ದಾರೆ.