ವಿಜಯೇಂದ್ರ ಬದಲು ಯತ್ನಾಳ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ?
ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ಒಂದೆಡೆಯಾದರೆ ಮತ್ತೊಂದೆಡೆ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯ ಕೂಗು ಜೋರಾಗಿ ಬರುತ್ತಿದೆ. ಈ ಬಗ್ಗೆ ಹೈಕಮಾಂಡ್ ಕೂಡ ಇತ್ತೀಚೆಗೆ ಸುಳಿವು ನೀಡಿದ್ದು, ರಾಜ್ಯಾಧ್ಯಕ್ಷರ ಬದಲಾವಣೆಗೆ ಚುನಾವಣೆ ನಡೆಸುವುದಾಗಿ ಹೇಳಿದೆ. ಈಗಾಗಲೇ ಬಿ.ವೈ.ವಿಜಯೇಂದ್ರ ಅವರು ರಾಜ್ಯಾಧ್ಯಕ್ಷ ಸ್ಥಾನದಲ್ಲಿರುವಾಗ ಒಂದು ವೇಳೆ ಅವರನ್ನೇ ಮುಂದುವರಿಸುವಂತಿದ್ದರೆ ಚುನಾವಣೆಯ ಮೊರೆ ಹೋಗುತ್ತಿರಲಿಲ್ಲ. ವಿಜಯೇಂದ್ರ ಅವರನ್ನು ಒಪ್ಪಿಕೊಳ್ಳದ ಕಾರಣ ಬಿಜೆಪಿಯಲ್ಲಿ ಬಣಗಳು ಹುಟ್ಟಿಕೊಂಡಿರುವ ಕಾರಣ ಬೇರೊಬ್ಬರಿಗೆ ರಾಜ್ಯಾಧ್ಯಕ್ಷ ಹುದ್ದೆ ನೀಡಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ.
ಹೈಕಮಾಂಡ್ ನಿರ್ಧಾರವನ್ನು ಬಿಜೆಪಿ ನಾಯಕರೆಲ್ಲ ಸ್ಪಷ್ಟವಾಗಿ ಅರ್ಥ ಮಾಡಿಕೊಂಡಿದ್ದಾರೆ. ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಮುಂದುವರಿಯುವುದು ಬೇಡ ಎನ್ನುವ ಹಲವು ನಾಯಕರ ಆಕ್ಷೇಪ ಬಿಜೆಪಿಯಲ್ಲೇ ಇದೆ. ಇನ್ನು ಬಸವನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ಸೇರಿದಂತೆ ಹಲವರು ವಿಜಯೇಂದ್ರ ಅವರ ಬಗ್ಗೆ ವೇದಿಕೆಗಳಲ್ಲೇ ವಿರೋಧ ವ್ಯಕ್ತಪಡಿಸುತ್ತಲೇ ಇದ್ದಾರೆ. ಮತ್ತೊಂದೆಡೆ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಹಲವರು ಕಣ್ಣಿಟ್ಟಿದ್ದು, ಬಹುತೇಕ ಹೊಸ ನಾಯಕನೇ ಸಾರಥ್ಯ ವಹಿಸಲಿದ್ದಾರೆ ಎಂದು ಚರ್ಚೆಗಳು ನಡೆಯುತ್ತಿವೆ.

ಮತ್ತೊಂದೆಡೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯಾರು ಸೂಕ್ತ? ಎಂಬ ಪ್ರಶ್ನೆಗೆ ಹಲವು ಬಿಜೆಪಿ ನಾಯಕರ ಹೆಸರುಗಳು ಮುನ್ನೆಲೆಗೆ ಬರುತ್ತಿವೆ. ಈ ಪೈಕಿ ಬಿಜೆಪಿ ಶಾಸಕ, ಹಿಂದೂ ಹುಲಿ ಎಂದು ಕರೆಸಿಕೊಳ್ಳುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಮುಂದಿನ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅರ್ಹರು ಎಂದು ಸ್ವಪಕ್ಷ ನಾಯಕರೇ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.
ಹರಿಹರ ಶಾಸಕ ಬಿ.ಪಿ.ಹರೀಶ್ ಅವರು ಕೂಡ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಅರ್ಹರು ಎಂದು ಬ್ಯಾಟಿಂಗ್ ಮಾಡಿದ್ದಾರೆ. ಇದಕ್ಕೆ ಸೂಕ್ತ ಕಾರಣವನ್ನೂ ಅವರು ನೀಡಿದ್ದಾರೆ. ಬಿ.ವೈ.ವಿಜಯೇಂದ್ರ ಅವರಿಗೆ ಅನುಭವದ ಕೊರತೆ ಸಾಕಷ್ಟಿದೆ. ಈ ಹಿನ್ನೆಲೆ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ ಆಗಲೇಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್ ಅಂತವರು ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಇರಬೇಕು, ಇಲ್ಲವೇ ವಿಪಕ್ಷ ನಾಯಕರಾಗಿ ಇದ್ದರೆ ಒಳ್ಳೆಯದು. ಇನ್ನು ಬಿಜೆಪಿಯಲ್ಲಿ ರಮೇಶ್ ಜಾರಕಿಹೊಳಿ ಅವರಿಗೆ ರಾಜ್ಯಾಧ್ಯಕ್ಷರು ಹೆದರಿಸುವಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರು ಎಲ್ಲೇ ಸಂಚರಿಸಿದರೂ ಬಿ.ಎಸ್.ಯಡಿಯೂರಪ್ಪ ಅವರ ಅಭಿಮಾನಿಗಳು ಘೇರಾವ್ ಹಾಕುತ್ತಾರೆ ಎಂದು ಭಯದ ವಾತಾವರಣ ಸೃಷ್ಟಿಸುತ್ತಿದ್ದಾರೆ ಎಂದು ಶಾಸಕ ಬಿ.ಪಿ.ಹರೀಶ್ ಆತಂಕ ವ್ಯಕ್ತಪಡಿಸಿದ್ದಾರೆ.
ಅಂದು ರಮೇಶ್ ಜಾರಕಿಹೊಳಿ ಅವರೇ 17 ಶಾಸಕರನ್ನು ಕರೆತಂದು ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಿದರು. ಈಗ ಪೂಜ್ಯ ತಂದೆಯೇ ಬೇಡ ಎಂದು ಬಿಎಸ್ವೈ ಅವರನ್ನ ಮನೆಗೆ ಕಳಿಸಿ, ವಿಜಯೇಂದ್ರ ಅವರಿಗೆ ಅಧಿಕಾರ ಕೊಟ್ಟಿದ್ದಾರೆ. ಆದರೆ, ವಿಜಯೇಂದ್ರ ಅವರ ಸಾಧನೆ ಏನಿಲ್ಲ, ಕಳೆದ ಶಿಕಾರಿಪುರ ಎಲೆಕ್ಷನ್ನಲ್ಲಿ ಭಿಕ್ಷೆ ಕೊಟ್ಟಿದ್ದಾಗಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ. ಮೊದಲು ಇದಕ್ಕೆ ವಿಜಯೇಂದ್ರ ಉತ್ತರ ಕೊಡಲಿ ಎಂದೂ ಗುಡುಗಿದ್ದಾರೆ. ಒಟ್ಟಾರೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯತ್ನಾಳ್ ಅವರ ಹೆಸರು ಚರ್ಚೆಯಲ್ಲಿದೆ.












Click it and Unblock the Notifications