ಕರ್ನಾಟಕ ಬಿಜೆಪಿ ಮಹತ್ವದ ಸಭೆಗೆ ಮಾರ್ಗಸೂಚಿ ಅಡ್ಡಿ?
ಬೆಂಗಳೂರು, ಜನವರಿ 05; ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಹಲವಾರು ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ. ಬುಧವಾರ ರಾತ್ರಿ 10 ಗಂಟೆಯಿಂದ ಹೊಸ ನಿಯಮಗಳು ಜಾರಿಗೆ ಬರಲಿವೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಜ್ಞರ ಜೊತೆ ಮೂರು ತಾಸಿಗೂ ಹೆಚ್ಚು ಕಾಲ ಮಂಗಳವಾರ ಸಭೆ ನಡೆಸಿದರು. ಸಭೆಯ ಬಳಿಕ ಕಂದಾಯ ಸಚಿವ ಆರ್. ಅಶೋಕ, ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೊಸ ನಿಯಮಗಳ ಕುರಿತು ಮಾಹಿತಿ ನೀಡಿದರು.
ನೈಟ್ ಕರ್ಫ್ಯೂ ವಿಸ್ತರಣೆ, ವಾರಾಂತ್ಯದ ಕರ್ಫ್ಯೂ ಜಾರಿ, ಶಾಲೆಗಳು ಬಂದ್, ಶೇ 50ರಷ್ಟು ಸೀಟು ಭರ್ತಿ ನಿಯಮ, ರಾಜಕೀಯ ಸಭೆ-ಸಮಾರಂಭ, ಪ್ರತಿಭಟನಾ ಜಾಥಾಗಳನ್ನು ನಿರ್ಬಂಧಿಸಲಾಗಿದೆ.

ಹೊಸ ಮಾರ್ಗಸೂಚಿ ಈಗಾಗಲೇ ಬಿಡುಗಡೆಯಾಗಿದ್ದು, ಬುಧವಾರ ರಾತ್ರಿ 10 ಗಂಟೆಯಿಂದ ಈ ನಿಯಮಗಳು ಜಾರಿಗೆ ಬರಲಿವೆ. ರಾಜಕೀಯ ಸಭೆ-ಸಮಾರಂಭ, ಜಾಥಾಗಳನ್ನು ನಿರ್ಬಂಧ ಮಾಡಿದ್ದು ಇದು ಪಾಲನೆಯಾಗಲಿದೆಯೇ? ಎಂಬ ಪ್ರಶ್ನೆ ಜನರದ್ದು.
ರಾಜಕೀಯ ಪಕ್ಷಗಳ ಕಾರ್ಯಕ್ರಮ; "ಹೊರಾಂಗಣದಲ್ಲಿ ಮದುವೆಗಳಿದ್ದರೆ 200 ಜನ, ಒಳಾಂಗಣದಲ್ಲಿ ಇದ್ದರೆ 100 ಜನ ಮಾತ್ರ ಪಾಲ್ಗೊಳ್ಳಬಹುದು" ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ.
ರಾಜಕೀಯ ಸಭೆ-ಸಮಾರಂಭ, ಜಾಥಾಗಳನ್ನು ನಿರ್ಬಂಧಿಸಿದ್ದು ಕಾಂಗ್ರೆಸ್ ಮತ್ತು ಬಿಜೆಪಿಯ ಎರಡು ಪ್ರಮುಖ ಕಾರ್ಯಕ್ರಮಗಳು ನಡೆಯಲಿವೆಯೇ? ಎಂಬ ಪ್ರಶ್ನೆ ಹುಟ್ಟು ಹಾಕಿದೆ.
ಕರ್ನಾಟಕ ಕಾಂಗ್ರೆಸ್ ಮೇಕೆದಾಟು ಯೋಜನೆಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಸರ್ಕಾರವನ್ನು ಆಗ್ರಹಿಸಲು ಜನವರಿ 9 ರಿಂದ 19ರ ವರೆಗೆ ಮೇಕೆದಾಟುವಿನಿಂದ ಬೆಂಗಳೂರು ತನಕ ಪಾದಯಾತ್ರೆ ಹಮ್ಮಿಕೊಂಡಿದೆ.
ಈ ಪಾದಯಾತ್ರೆಗೆ ಈಗಾಗಲೇ ಕಾಂಗ್ರೆಸ್ ಪಕ್ಷ ಭಾರೀ ತಯಾರಿ ಮಾಡಿಕೊಂಡಿದೆ. ಈಗ ಸರ್ಕಾರದ ಮಾರ್ಗಸೂಚಿ ಅನ್ವಯ ಇಂತಹ ಕಾರ್ಯಕ್ರಮ ಮಾಡುವಂತಿಲ್ಲ. ವಾರಾಂತ್ಯದ ಕರ್ಫ್ಯೂ ದಿನಗಳಲ್ಲಿ ಸಂಚಾರ ಸಹ ನಡೆಸುವಂತಿಲ್ಲ.
ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ಕರ್ನಾಟಕ ಬಿಜೆಪಿ ನಾಯಕರ ಮಹತ್ವದ ಸಭೆ ಜನವರಿ 7 ರಿಂದ 9ರ ತನಕ ನಿಗದಿಯಾಗಿದೆ. 2023ರ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಈ ಸಭೆ ನಡೆಯಲಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಸಹ ಸಭೆಯಲ್ಲಿ ಪಾಲ್ಗೊಳ್ಳಬೇಕಿತ್ತು.
ಬಿಜೆಪಿ ಸರ್ಕಾರ ಮತ್ತು ಪಕ್ಷದ ಕುರಿತು ಹಲವಾರು ವಿಚಾರಗಳನ್ನು ಚರ್ಚಿಸಲು ಬಿಜೆಪಿ ಸಭೆ ನಿಗದಿಯಾಗಿತ್ತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ. ಎಲ್. ಸಂತೋಷ್, ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸಭೆಯಲ್ಲಿ ಪಾಲ್ಗೊಳ್ಳಬೇಕಿತ್ತು. ನಂದಿ ಗಿರಿಧಾಮದಲ್ಲಿ ಸಭೆ ನಡೆಸುವುದಕ್ಕೆ ಪ್ರವಾಸಿಗರು ಸಹ ವಿರೋಧ ಮಾಡಿದ್ದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಸಚಿವರು, ಪಕ್ಷದ ಪದಾಧಿಕಾರಿಗಳು ಜನವರಿ 7 ರಿಂದ 9ರ ತನಕ ನಡೆಯುವ ಸಭೆಯಲ್ಲಿ ಭಾಗವಹಿಸಬೇಕಿತ್ತು.
ಮಾರ್ಗಸೂಚಿ ಅನ್ವಯ 50 ಜನಕ್ಕಿಂತ ಹೆಚ್ಚು ಜನರು ಸೇರಿ ಯಾವುದೇ ಸಭೆ-ಸಮಾರಂಭ ನಡೆಸುವಂತಿಲ್ಲ. ಇದರಿಂದಾಗಿ ಬಿಜೆಪಿ ಸಭೆ ಸಹ ಮುಂದೂಡಿಕೆಯಾಗುವ ಸಾಧ್ಯತೆ ಇದೆ. ಕಾಂಗ್ರೆಸ್ ನಾಯಕರು ಪಾದಯಾತ್ರೆ ಮುಂದೂಡಿಕೆ ಬಗ್ಗೆ ಅಧಿಕೃತವಾದ ಹೇಳಿಕೆ ನೀಡಿಲ್ಲ.
ಮಂಗಳವಾರ ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ಮುಂತಾದ ನಾಯಕರು ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಿದ್ದರು. ಒಂದು ವೇಳೆ ಕಠಿಣ ನಿಯಮಗಳು ಜಾರಿಯಾದರೆ ಮುಂದೆ ಏನು ಮಾಡಬೇಕು ಎಂದು ಚರ್ಚೆ ಮಾಡಿದ್ದರು.
ಸಿದ್ದರಾಮಯ್ಯ ಮಾಧ್ಯಮಗಳ ಜೊತೆ ಮಾತನಾಡಿ, "ಸರ್ಕಾರದ ನಿಯಮಗಳು ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಯೋಗಿ ಆದಿತ್ಯನಾಥ್ಗೆ ಅನ್ವಯ ಆಗುವುದಿಲ್ಲವಾ?. ಉತ್ತರ ಪ್ರದೇಶದಲ್ಲಿ ಸಭೆ, ಸಮಾರಂಭಗಳನ್ನು ನಡೆಸಿ ಚುನಾವಣಾ ಪ್ರಚಾರ ನಡೆಸುತ್ತಿಲ್ಲವಾ?" ಎಂದು ಪ್ರಶ್ನಿಸಿದ್ದರು.












Click it and Unblock the Notifications