ಚಿಕ್ಕೋಡಿ ಲೋಕಸಭಾ ಬಿಜೆಪಿ ಟಿಕೆಟ್ಗಾಗಿ ಭಾರೀ ಕಸರತ್ತು; ತ್ರಿಮೂರ್ತಿಗಳ ಮಧ್ಯೆ ಶುರುವಾಯ್ತು ಫೈಟ್: ಯಾರಿಗೆ ಟಿಕೆಟ್?
ಬೆಳಗಾವಿ, ಅಕ್ಟೋಬರ್ 11: 2024 ರ ಲೋಕಸಭಾ ಚುನಾವಣೆಗೆ ಆಡಳಿತರೂಢ ಕಾಂಗ್ರೆಸ್ ಪಾಳಯದಲ್ಲಿ 20 ಸ್ಥಾನಗಳನ್ನ ಗೆಲ್ಲುವ ನಿಟ್ಟಿನಲ್ಲಿ ಭರ್ಜರಿ ತಯಾರಿ ನಡೆಯುತ್ತಿದ್ದು, ಇತ್ತ ಕಾಂಗ್ರೆಸ್ ಗೆ ಠಕ್ಕರ್ ಕೊಡಲು ಬಿಜೆಪಿ ಹಾಗೂ ಮೈತ್ರಿಯಾಗಿ ಒಗ್ಗಟ್ಟಿನ ತಂತ್ರಗಾರಿಕೆಯನ್ನ ನಡೆಸಿದೆ. ಇನ್ನೂ ಈ ಬಾರೀ ಬಿಜೆಪಿ ಪಾಳಯದಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದ್ದು, ಟಿಕೆಟ್ ಗಾಗಿ ಭಾರೀ ಲಾಭಿ ನಡೆಯುತ್ತಿದೆ.
ಹೌದು, 2024 ರ ಲೋಕಸಭಾ ಚುನಾವಣೆಗೆ ಕೆಲ ತಿಂಗಳು ಮಾತ್ರ ಬಾಕಿ ಉಳಿದಿದ್ದು, ಚಿಕ್ಕೋಡಿ ಲೋಕಸಭಾ ಚುನಾವಣೆಗಾಗಿ ಕಮಲ ಪಾಳಯದಲ್ಲಿ ಟಿಕೆಟ್ ಗಾಗಿ ಮೂವರು ನಾಯಕರು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ. ಈಗಾಗಲೇ ಹಾಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಅವರು ಮುಂದಿನ ಚುನಾವಣೆಗಾಗಿ ಭರ್ಜರಿ ತಯಾರಿ ಆರಂಭಿಸಿದ್ದಾರೆ.

ಇತ್ತ ಚಿಕ್ಕೋಡಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಾದ ಮಾಜಿ ಸಂಸದ ಹಾಗೂ ದಿವಂಗತ ಉಮೇಶ ಕತ್ತಿ ಸಹೋದರ ರಮೇಶ್ ಕತ್ತಿ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯರಾದ ಮಹಾಂತೇಶ ಕವಟಗಿಮಠ ಸಹ ಈಗಾಗಲೇ ಬಹಿರಂಗವಾಗಿ ಚಿಕ್ಕೋಡಿ ಕ್ಷೇತ್ರದ ಟಿಕೆಟ್ ಗಾಗಿ ಬೇಡಿಕೆ ಇಟ್ಟಿದ್ದು, ಹಲವು ಹೈಕಮಾಂಡ್ ನಾಯಕರ ಮೂಲಕವೂ ಟಿಕೆಟ್ ಗಾಗಿ ಲಾಬಿ ನಡೆಸಿದ್ದು, ಈ ಬಾರೀ ಯಾರಿಗೆ ಹೈಕಮಾಂಡ್ ಮಣೆ ಆಗುತ್ತೆ ಎನ್ನುವ ಲೆಕ್ಕಾಚಾರ ಶುರುವಾಗಿದೆ. ಅಲ್ಲದೇ ಹಾಲಿ ಸಂಸದರಾಗಿರುವ ಅಣ್ಣಾ ಸಾಹೇಬ ಜೊಲ್ಲೆ ಅವರಿಗೆ ಈ ಬಾರೀ ಟಿಕೆಟ್ ಸಿಗುತ್ತಾ ಎನ್ನುವ ಪ್ರಶ್ನೆ ಹುಟ್ಟಿಕೊಂಡಿದೆ.
ಲೋಕಸಮರಕ್ಕೆ ತಯಾರಿ; ಅಣ್ಣಾಸಾಹೇಬ್ ಜೊಲ್ಲೆ ಶಕ್ತಿಪ್ರದರ್ಶನ
ಚುನಾವಣೆ ಹತ್ತಿರವಾಗುತ್ತಿದ್ದಂತೆ ಹಾಲಿ ಸಂಸದರಾದ ಅಣ್ಣಾಸಾಹೇಜ್ ಜೊಲ್ಲೆ ಅವರು ಚುನಾವಣಾ ತಯಾರಿಯನ್ನ ನಡೆಸುತ್ತಿದ್ದು, ಚಿಕ್ಕೋಡಿಯಲ್ಲಿ 61 ನೇ ಜನ್ಮದಿನವನ್ನ ಅದ್ದೂರಿಯಾಗಿ ಆಚರಿಸಿಕೊಳ್ಳುವ ಮೂಲಕ ಶಕ್ತಿಪ್ರದರ್ಶನಕ್ಕೆ ಮುಂದಾಗಿದ್ದಾರೆ. ಈಗಾಗಲೇ ಕ್ಷೇತ್ರದಲ್ಲೂ ಓಡಾಟ ಶುರು ಮಾಡಿರುವ ಅಣ್ಣಾಸಾಹೇಬ್ ಜೊಲ್ಲೆ ಕ್ಕೋಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಚಾರ ಕಾರ್ಯ ಆರಂಭಿಸಿದ್ದಾರೆ.
ಇನ್ನೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಆಕಾಂಕ್ಷಿಯಾಗಿರುವ ಮಾಜಿ ಸಂಸದ ರಮೇಶ್ ಕತ್ತಿ ಹಾಗೂ ಮಾಜಿ ಎಂಎಲ್ಸಿ ಮಹಾಂತೇಶ್ ಕವಟಗಿಮಠ ಸಹ ಟಿಕೆಟ್ ಗಾಗಿ ಪ್ರಯತ್ನಿಸುತ್ತಿದ್ದಾರೆ. ಅಲದೇ ಕೆಲ ದಿನಗಳ ಹಿಂದೆ ಹಾಲಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಅವರ ಜನ್ಮ ದಿನದ ಆಚರಣೆಯಲ್ಲಿ ಈ ಇಬ್ಬರು ನಾಯಕರು ಅಂತರವನ್ನ ಕಾಯ್ದುಕೊಂಡಿರುವುದು ಹಲವು ಪ್ರಶ್ನೆಗಳು ಹುಟ್ಟು ಹಾಕುವಂತೆ ಮಾಡಿದೆ.
ಅಲ್ಲದೇ ಆಹ್ವಾನ ಪತ್ರಿಕೆಯಲ್ಲಿ ಪ್ರಮುಖ ಉಪಸ್ಥಿತಿ ಎಂದು ಹುಕ್ಕೇರಿ ಬಿಜೆಪಿ ಶಾಸಕ ನಿಖಿಲ್ ಕತ್ತಿ, ಮಾಜಿ ಸಂಸದ ರಮೇಶ್ ಕತ್ತಿ, ಮಾಜಿ ಎಂಎಲ್ಸಿ ಮಹಾಂತೇಶ್ ಕವಟಗಿಮಠ ಹೆಸರಿದ್ದರೂ ಮೂವರು ನಾಯಕರು ಗೈರಾಗಿದ್ದಾರೆ. ಇನ್ನೂ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಮಾಜಿ ಶಾಸಕ ಪಿ ರಾಜೀವ್ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಅಣ್ಣಾಸಾಹೇಬ್ ಜೊಲ್ಲೆ ಅವರನ್ನ ಗೆಲ್ಲಿಸುವಂತೆ ಮನವಿ ಮಾಡುವ ಮೂಲಕ ಅಣ್ಣಾಸಾಹೇಬ್ ಜೊಲ್ಲೆ ಪರ ಬ್ಯಾಟ್ ಬೀಸಿದ್ದಾರೆ.
ಒಟ್ನಾಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಚಿಕ್ಕೋಡಿ ಕ್ಷೇತ್ರದ ಟಿಕೆಟ್ ಗಾಗಿ ಮೂರು ನಾಯಕರ ನಡುವೆ ಪೈಪೋಟಿ ಶುರುವಾಗಿದ್ದು, ಈ ಬಾರಿಯೂ ಸಹ ಅಣ್ಣಾಸಾಹೇಬ್ ಜೊಲ್ಲೆ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ. ಏಕೆಂದರೆ ಬಿಜೆಪಿ ಹೈಕಮಾಂಡ್ ನಾಯಕರ ಜೊತೆಗೆ ಅಣ್ಣಾಸಾಹೇಬ್ ಜೊಲ್ಲೆ ಉತ್ತಮ ಸಂಬಂಧವನ್ನ ಹೊಂದಿದ್ದಾರೆ. ಇನ್ನೂ ರಮೇಶ್ ಕತ್ತಿಯೂ ಸಹ ಈ ಟಿಕೆಟ್ ಗಾಗಿ ಬಾರೀ ಲಾಬಿ ಕಸರತ್ತು ನಡೆಸಿದ್ದು, ಈ ಬಾರೀ ಹೈಕಮಾಂಡ್ ಯಾರಿಗೆ ಮಣೆ ಹಾಕುತ್ತೆ ಅಂತ ಕಾದುನೋಡ್ಬೇಕಾಗಿದೆ.












Click it and Unblock the Notifications