ಹೈಕಮಾಂಡ್ ನಾಯಕರ ಸೂಚನೆಗಾಗಿ ಕಾದು ಕುಳಿತ ಯಡಿಯೂರಪ್ಪ!
Recommended Video
ಬೆಂಗಳೂರು, ಜುಲೈ 24 : ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ವಿಶ್ವಾಸಮತದಲ್ಲಿ ಸೋಲು ಕಂಡಿದೆ. ಮುಖ್ಯಮಂತ್ರಿಯಾಗಿದ್ದ ಎಚ್. ಡಿ. ಕುಮಾರಸ್ವಾಮಿ ರಾಜೀನಾಮೆ ಸಲ್ಲಿಸಿದ್ದಾರೆ. ಕರ್ನಾಟಕದ ರಾಜಕೀಯ ಮುಂದೇನು?.
ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್. ಯಡಿಯೂರಪ್ಪ ಸರ್ಕಾರ ರಚನೆ ಮಾಡಲಿ ರಾಜ್ಯಪಾಲರ ಬಳಿ ಹಕ್ಕು ಮಂಡನೆ ಮಾಡಲಿದ್ದಾರೆ. ಆದರೆ, ಅವರು ಹೈಕಮಾಂಡ್ ನಾಯಕರ ಸೂಚನೆಗಾಗಿ ಕಾದು ಕುಳಿತಿದ್ದಾರೆ.
ಕರ್ನಾಟಕ ಬಿಜೆಪಿ ವಲಯದಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದೆ. ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ನಿವಾಸ 'ಧವಳಗಿರಿ' ಕಾರ್ಯಕರ್ತರಿಂದ, ನಾಯಕರಿಂದ ತುಂಬಿ ಹೋಗಿದೆ. ಯಡಿಯೂರಪ್ಪ ಎಂದು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ? ಎಂಬುದು ಸದ್ಯದ ಪ್ರಶ್ನೆ.
ದೆಹಲಿಯಲ್ಲಿ ಬುಧವಾರ ಸಂಜೆ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದೆ. ಕರ್ನಾಟಕದ ಬೆಳವಣಿಗೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ಬಳಿಕ ಸರ್ಕಾರ ರಚನೆ ಎಂದು ಮಾಡಬೇಕು? ಎಂದು ತೀರ್ಮಾನ ಕೈಗೊಳ್ಳಲಾಗುತ್ತದೆ.

ನಮ್ಮದೇ ಆದ ನಿಯಮ ಪಾಲಿಸಬೇಕು
ಬುಧವಾರ ಯಡಿಯೂರಪ್ಪ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಜೆ.ಸಿ.ಮಾಧುಸ್ವಾಮಿ, "ನಮ್ಮದು ರಾಷ್ಟ್ರೀಯ ಪಕ್ಷವಾಗಿದ್ದು, ನಮ್ಮದೇ ಆದ ಕೆಲ ನಿಯಮಗಳನ್ನು ಪಾಲನೆ ಮಾಡಬೇಕಾಗುತ್ತದೆ. ಆದ್ದರಿಂದ, ಅವರ ಸೂಚನೆಗೆ ಎದುರು ನೋಡುತ್ತಿದ್ದೇವೆ. ಪಕ್ಷದ ಅಧ್ಯಕ್ಷ ಅಮಿತ್ ಶಾ ಅವರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ" ಎಂದು ಹೇಳಿದರು.

ದೆಹಲಿಯಿಂದ ವೀಕ್ಷಕರು ಆಗಮಿಸುತ್ತಾರೆ
ಸಂಸದೀಯ ಮಂಡಳಿ ಸಭೆಯಲ್ಲಿ ಸರ್ಕಾರ ರಚನೆ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ. ಬಳಿಕ ಶಾಸಕಾಂಗ ಪಕ್ಷದ ಸಭೆ ನಡೆಸಲು ಸೂಚನೆ ನೀಡಲಾಗುತ್ತದೆ. ದೆಹಲಿಯಿಂದ ವೀಕ್ಷಕರು ಆಗಮಿಸಿದ ಬಳಿಕ ಅವರ ಸಮ್ಮುಖದಲ್ಲಿಯೇ ಶಾಸಕಾಂಗ ಪಕ್ಷದ ಸಭೆ ನಡೆಸಲಾಗುತ್ತದೆ.

1 ರಿಂದ 2 ದಿನದಲ್ಲಿ ಅಂತಿಮ ತೀರ್ಮಾನ
1 ಅಥವ 2 ದಿನದಲ್ಲಿ ಸರ್ಕಾರ ರಚನೆ, ಪ್ರಮಾಣ ವಚನದ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಗುರುವಾರ ರಾಜ್ಯಪಾಲರನ್ನು ಬಿ. ಎಸ್. ಯಡಿಯೂರಪ್ಪ ಭೇಟಿ ಮಾಡಿ ಸರ್ಕಾರ ರಚನೆ ಮಾಡುವ ಹಕ್ಕು ಮಂಡನೆ ಮಾಡುವ ನಿರೀಕ್ಷೆ ಇದೆ.

ಯಡಿಯೂರಪ್ಪ ದೆಹಲಿಗೆ
ಬಿ. ಎಸ್. ಯಡಿಯೂರಪ್ಪ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಇಂದು ಸಂಜೆ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಅವರು ಭೇಟಿಯಾಗಲಿದ್ದಾರೆ ಎಂಬ ಮಾಹಿತಿ ಇದೆ. ಸದ್ಯ ಅವರು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಆರ್ಎಸ್ಎಸ್ ಕಚೇರಿಯಲ್ಲಿದ್ದಾರೆ.












Click it and Unblock the Notifications