ಕೋವಿಡ್ ಸಂದರ್ಭದಲ್ಲಿ ಹೆಣದ ಮೇಲೆ ಹಣ ಮಾಡಿದ ಬಿಜೆಪಿ: ಅಚ್ಚರಿ ಹೇಳಿಕೆ ಬಿಚ್ಚಿಟ್ಟ ಡಿ ಕೆ ಶಿವಕುಮಾರ್
ಬಳ್ಳಾರಿ, ನವೆಂಬರ್06: ಬಿಜೆಪಿ ಸರ್ಕಾರ ಕೋವಿಡ್ ಸಮಯದಲ್ಲಿ ಹೆಣದ ಮೇಲೆ ಹಣ ಲೂಟಿ ಮಾಡಿತ್ತು. ಈ ಹಿಂದೆ ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಇಡೀ ಬಳ್ಳಾರಿ ಜಿಲ್ಲೆ ಜನ ಭಯದಿಂದ ಜೀವನ ಮಾಡುತ್ತಿದ್ದರು. ಈಗ ಜಿಲ್ಲೆ ಜನ ನೆಮ್ಮದಿಯ ಬದುಕು ನಡೆಸುತ್ತಿದ್ದಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದ ಬಿಜೆಪಿ ಆಡಳಿತ ಹೇಗಿತ್ತು ಎಂದು ನೀವು ನೋಡಿದ್ದೀರಿ. ಕೋವಿಡ್ ಸಮಯದಲ್ಲಿ ಹೆಣದ ಮೇಲೆ ಹಣ ಹೊಡೆದರು. ಕೋವಿಡ್ ಸಮಯದಲ್ಲಿ ಯಾವುದೇ ಸಮುದಾಯಕ್ಕೆ ಬಿಜೆಪಿ ಸರ್ಕಾರ ನೆರವು ನೀಡಲಿಲ್ಲ. ನಿರ್ಮಲಾ ಸೀತರಾಮನ್ ಅವರು 20 ಲಕ್ಷ ಕೋಟಿ ಪ್ಯಾಕೇಜ್ ಘೋಷಿಸಿದರು. ಅದರಲ್ಲಿ ನಿಮಗೆ ಯಾವುದಾದರೂ ಬಂತಾ? ಬಡವರಿಗೆ ಸಹಾಯ ಮಾಡದಿದ್ದರೆ ಅಂತಹ ಸರ್ಕಾರ ಯಾಕೆ ಬೇಕು.

ಕೋವಿಡ್ ಅಕ್ರಮದ ವರದಿ ಬಂದಿದೆ. ಅದನ್ನು ನೋಡಿ ನನಗೆ ಕೋವಿಡ್ ಬಂದಷ್ಟು ಭಯವಾಗಿದೆ. ಈ ಹಿಂದೆ ಬಳ್ಳಾರಿ ಜನ ಭಯದಿಂದ ಬದುಕು ನಡೆಸುವ ಪರಿಸ್ಥಿತಿ ಇತ್ತು. ಸಿದ್ದರಾಮಯ್ಯ ಅವರು ಬಂದರೆ ಅಧಿಕಾರಿಗಳ ಭೇಟಿಗೂ ಅವಕಾಶ ನೀಡುತ್ತಿರಲಿಲ್ಲ. ಆಗ ನಾನು ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ನಾಯಕರು ಪಾದಯಾತ್ರೆ ಮಾಡಿದೆವು. ನಾನು ಕೂಡ ಈ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದೆ. ನಿಮ್ಮ ಊರನ್ನು ನ್ಯೂಯಾರ್ಕ್ ಬೀಜಿಂಗ್ ಮಾಡುತ್ತೇವೆ ಎಂದು ನಾನು ಹೇಳುವುದಿಲ್ಲ. ನೀವು ನೆಮ್ಮದಿಯ ಬದುಕು ಸಾಗಿಸಬೇಕು. ಅದು ನಮ್ಮ ಗುರಿ. ಬಳ್ಳಾರಿ ಜಿಲ್ಲೆಯಲ್ಲಿ ಸಂಡೂರನ್ನು ನೆಮ್ಮದಿಯಾಗಿ ಬದುಕು ನಡೆಸುವ ಕ್ಷೇತ್ರವನ್ನಾಗಿ ಮಾಡಿದ್ದೇವೆ.
ನಾನು ಕನಕಪುರ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿಗಿಂತ ಹೆಚ್ಚು ಕೆಲಸವನ್ನು ತುಕಾರಾಂ ಅವರು ಸಂಡೂರು ಕ್ಷೇತ್ರದಲ್ಲಿ ಮಾಡಿ, ಇಲ್ಲಿನ ಜನರ ಮನ ಗೆದ್ದಿದ್ದಾರೆ. ಚುನಾವಣೆ ಪ್ರಕಟವಾಗುವ ಮುನ್ನ ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಡೂರಿಗೆ ಬಂದು ಅನೇಕ ಅಭಿವೃದ್ಧಿ ಕೆಲಸಗಳ ಬಗ್ಗೆ ಘೋಷಣೆ ಮಾಡಿದ್ದೆವು. ಇಲ್ಲಿನ ಅಭಿವೃದ್ಧಿ ಕೆಲಸ ನೋಡಿದಾಗ ನಾನು ಕನಕಪುರದಲ್ಲಿ ಮಾಡಿರುವ ಕೆಲಸಕ್ಕಿಂತ ಹೆಚ್ಚು ಕೆಲಸ ಇಲ್ಲಿ ಆಗಿದೆ. 200 ಹಾಸಿಗೆಗಳ ಆಸ್ಪತ್ರೆ, ₹35 ಕೋಟಿ ಮೊತ್ತದ ತಾಲೂಕು ಕಚೇರಿ ಕಟ್ಟಡ ನಿರ್ಮಾಣ ಮಾಡಿದ್ದಾರೆ. ಸಣ್ಣ ಪುಟ್ಟ ಹಳ್ಳಿಯಲ್ಲೂ ಕಾಂಕ್ರೀಟ್ ರಸ್ತೆ ಹಾಕಿಸಿದ್ದಾರೆ.
ಸಂಡೂರಿನಲ್ಲಿ ನಿಮ್ಮ ಶಾಸಕರು ಸೋಲಿಲ್ಲದ ಸರದಾರ. ನಾವು ಅವರನ್ನು ಸಂಸತ್ತಿಗೆ ಕಳುಹಿಸಲು ತೀರ್ಮಾನಿಸಿದೆವು. ಅವರಿಗೆ ಈ ಕ್ಷೇತ್ರ ಬಿಟ್ಟುಹೋಗಲು ಇಷ್ಟವಿಲ್ಲ. ಅವರು ಈ ಕ್ಷೇತ್ರದಲ್ಲೇ ಇರಬೇಕು ಎಂದು ಬಯಸಿದ್ದರು. ಆದರೂ ನಾನೂ, ಸಿದ್ದರಾಮಯ್ಯ ಹಾಗೂ ಪಕ್ಷದ ಮುಖಂಡರು ಚರ್ಚೆ ಮಾಡಿ ಸಂಸತ್ತಿಗೆ ಕಳುಹಿಸಿದ್ದೇವೆ. ನೀವು ಸತತವಾಗಿ ನಾಲ್ಕು ಬಾರಿ ಅವರನ್ನು ಆರಿಸಿ ಗೆಲ್ಲಿಸಿದ್ದೀರಿ ಎಂದರು.
ಯಡಿಯೂರಪ್ಪ, ಅವರ ಮಗ, ಅಶೋಕಣ್ಣ ಅವರು ತಮ್ಮ ಅಧಿಕಾರ ಅವಧಿಯಲ್ಲಿ ಇಂತಹ ಯಾವುದಾದರೂ ಒಂದು ಕಾರ್ಯಕ್ರಮ ನೀಡಿದ್ದಾರಾ? ನಾವು ಚುನಾವಣೆಗಾಗಿ ಈ ಯೋಜನೆ ಜಾರಿ ಮಾಡಿಲ್ಲ. ನಿಮ್ಮ ಬದುಕು ಸುಧಾರಿಸುವುದು ನಮ್ಮ ಗುರಿ. ನಾವು ಭಾವನೆ ಮೇಲೆ ರಾಜಕಾರಣ ಮಾಡುತ್ತಿಲ್ಲ. ಬದುಕಿನ ಮೇಲೆ ರಾಜಕಾರಣ ಮಾಡುತ್ತಿದ್ದೇವೆ. ನಾಗೇಂದ್ರ ಅವರಿಗೆ ಬಿಜೆಪಿಯವರು ಏನೇ ತೊಂದರೆ ಕೊಟ್ಟರೂ ಮೇಲೆ ದೇವರೊಬ್ಬ ಇದ್ದಾನೆ. ಅವರಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಹೇಳಿದರು.












Click it and Unblock the Notifications