ಬಿಜೆಪಿಯ ಮಂಗಳೂರು ಚಲೋ: ಗೃಹಸಚಿವರ ಕುತೂಹಲಕಾರಿ ಹೇಳಿಕೆ
ಬಿಜೆಪಿ ಯುವ ಮೋರ್ಚಾ ಆಯೋಜಿಸಿರುವ ಮಂಗಳೂರು ಚಲೋ ಬೈಕ್ ಜಾಥಾಗೆ ಅನುಮತಿ ನೀಡಬೇಕೋ, ಬೇಡವೋ ಎನ್ನುವುದನ್ನು ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ಮುಖ್ಯಸ್ಥರು ನಿರ್ಧರಿಸಲಿದ್ದಾರೆಂದು ಗೃಹಸಚಿವ ರಾಮಲಿಂಗಾ ರೆಡ್ಡಿ ಹೇಳಿಕೆ
ಬೆಂಗಳೂರು, ಸೆ 4: ಬಿಜೆಪಿ ಯವಮೋರ್ಚಾ ಆಯೋಜಿಸಿರುವ ಬೈಕ್ ಜಾಥಾ ಬಗ್ಗೆ ನೂತನ ರಾಜ್ಯ ಗೃಹಸಚಿವ ರಾಮಲಿಂಗಾ ರೆಡ್ಡಿ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಬೈಕ್ ಜಾಥಾಗೆ ಅನುಮತಿ ನೀಡಬೇಕೋ, ಬೇಡವೋ ಎನ್ನುವುದನ್ನು ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ಮುಖ್ಯಸ್ಥರು ನಿರ್ಧರಿಸಲಿದ್ದಾರೆ ಎನ್ನುವ ಮೂಲಕ, ಸಚಿವರು ಅಡ್ಡಗೋಡೆಯ ಮೇಲೆ ದೀಪವಿಟ್ಟಿದ್ದಾರೆ.

ಬೈಕ್ ಜಾಥಾ ಬಗ್ಗೆ ಬಿಜೆಪಿ, ಗೃಹ ಸಚಿವಾಲಯದ ಅನುಮತಿಯನ್ನು ಕೋರಿದೆ, ಬೈಕ್ ಜಾಥಾ ಬೇಡ ಕಾಲ್ನಡಿಗೆ ಜಾಥಾ ನಡೆಸಿ ಎಂದು ಬಿಜೆಪಿ ಮುಖಂಡರಲ್ಲಿ ಮನವಿ ಮಾಡಿದ್ದೇವೆ. ಆದರೆ, ಅದಕ್ಕೆ ಬಿಜೆಪಿ ಮುಖಂಡರು ಒಪ್ಪುತ್ತಿಲ್ಲ ಎಂದು ಗೃಹ ಸಚಿವರು ಪ್ರತಿಕ್ರಿಯಿಸಿದ್ದಾರೆ.
ನಾವೂ ಈ ಹಿಂದೆ ಬಿಜೆಪಿ ಸರಕಾರದ ವಿರುದ್ದ ಬಳ್ಳಾರಿಗೆ ಪಾದಯಾತ್ರೆ ನಡೆಸಿದ್ದೆವು. ಬೈಕ್ ರ್ಯಾಲಿ ನಡೆಸಿದರೆ ಟ್ರಾಫಿಕ್ ಸಮಸ್ಯೆ ಉಂಟಾಗುತ್ತದೆ. ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಗಮನದಲ್ಲಿ ಇಟ್ಟುಕೊಂಡು, ಮಂಗಳೂರು ಎಸ್ಪಿ ಜಾಥಾಗೆ ಅನುಮತಿ ನೀಡುವುದರ ವಿಚಾರದಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಬಿಜೆಪಿ ಯುವ ಮೋರ್ಚಾ ಹಮ್ಮಿಕೊಂಡಿರುವ ಮಂಗಳೂರು ಚಲೋ ಪ್ರತಿಭಟನಾ ಬೈಕ್ ಜಾಥಾವನ್ನು ರಾಜ್ಯ ಸರ್ಕಾರ ಹತ್ತಿಕ್ಕುವ ಯತ್ನ ಮಾಡುತ್ತಿದೆ . ಪೊಲೀಸ್ ಇಲಾಖೆಯ ಮೂಲಕ ಬೆದರಿಕೆ ಹಾಕಿ ಕಾರ್ಯಕ್ರಮಕ್ಕೆ ತಡೆಯೊಡ್ಡಲು ಪ್ರಯತ್ನಿಸುತ್ತಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದರು.
ಬಿಜೆಪಿ 'ಮಂಗಳೂರು ಚಲೋ' ಮೂಲಕ ಮತ್ತೊಮ್ಮೆ ಕರಾವಳಿಯಲ್ಲಿ ಗಲಭೆ ಸೃಷ್ಟಿಸಿ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಯತ್ನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದರು.
ರಾಜ್ಯದಲ್ಲಿ ಈವರೆಗೆ ನಡೆದಿರುವ ಹಿಂದೂಪರ ಸಂಘಟನೆಯ ಕಾರ್ಯಕರ್ತರು, ಮುಖಂಡರ ಹತ್ಯೆ ಖಂಡಿಸಿ, ಎಲ್ಲಾ ಪ್ರಕರಣಗಳನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿ ಜೊತೆಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಮಂಗಳೂರು ಚಲೋ ಪ್ರತಿಭಟನೆಯನ್ನು ಸೆಪ್ಟಂಬರ್ ಏಳರಂದು ಹಮ್ಮಿಕೊಂಡಿದೆ.
ಮಂಗಳೂರು ಚಲೋ ಸಮಾವೇಶಕ್ಕೆ ಹುಬ್ಬಳ್ಳಿ, ಶಿವಮೊಗ್ಗ, ಮೈಸೂರು, ಬೆಂಗಳೂರು, ಚಿಕ್ಕಮಗಳೂರಿನಿಂದ ಬೈಕ್ ಜಾಥಾ ಸೆಪ್ಟೆಂಬರ್ 5, 6 ರಂದು ಹೊರಡಲಿದ್ದು, ಸೆಪ್ಟೆಂಬರ್ 7 ರಂದು ಮಂಗಳೂರು ತಲುಪಲಿದೆ. ಈ ಜಾಥಾದಲ್ಲಿ ಸುಮಾರು ಹತ್ತು ಸಾವಿರ ಬೈಕುಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ.












Click it and Unblock the Notifications