'ಲೋಕಾಯುಕ್ತ'ದ ಮೇಲೆ ಗರಂ ಆದ ಯತ್ನಾಳ್; ಯಾಕೆ?
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಪ್ರಕರಣವು ರಾಜ್ಯ ಸರ್ಕಾರಕ್ಕೆ ಒಂದು ರೀತಿಯಲ್ಲಿ ಬುಡಕ್ಕೆ ಬೆಂಕಿ ಇಟ್ಟಿದೆ. ಇದೀಗ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದ್ದು, ಮುಡಾ ಮಾಜಿ ಅಧ್ಯಕ್ಷ ಒಂದೇ ದಿನದಲ್ಲಿ ಸುಮಾರು 800ಕ್ಕೂ ಹೆಚ್ಚು ಸೈಟುಗಳಿಗೆ ಕಾನೂನು ಬಾಹಿರವಾಗಿ ಖಾತೆ ಮಾಡಿಕೊಟ್ಟಿದ್ದಾರೆ ಎಂದು ಹೇಳಲಾಗಿದೆ.
ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ಒಂದೇ ದಿನದಲ್ಲಿ ಬರೋಬ್ಬರಿ 848 ನಿವೇಶನಗಳ ಖಾತೆ ಮಾಡಿಸಿಕೊಂಡಿದ್ದಾರೆ ಎಂಬ ವಿಚಾರವು ಮುಡಾ ಪ್ರಕರಣಕ್ಕೆ ಮತ್ತೊಂದು ತಿರುವು ನೀಡಿದೆ. ಈ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಆಕ್ರೋಶ ಹೊರಹಾಕಿದ್ದು, ʼಮುಡಾ ಅಕ್ರಮ ಬಗೆದಷ್ಟು ಹೊರಬರುತ್ತಿದೆ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಒಂದೇ ದಿನದಲ್ಲಿ ಸುಮಾರು 800ಕ್ಕೂ ಹೆಚ್ಚು ಸೈಟುಗಳಿಗೆ ಕಾನೂನು ಬಾಹಿರವಾಗಿ ಖಾತೆ ಮಾಡಿರುವುದು ಲೋಕಾಯುಕ್ತ ಪೊಲೀಸರಿಗೆ ಇನ್ನು ಕಿವಿಗೆ ಕೇಳಿಸಿಲ್ಲʼ ಎಂದು ಪ್ರಶ್ನೆ ಎತ್ತಿದ್ದಾರೆ.

ʼಲೋಕಾಯುಕ್ತ ಪೊಲೀಸರು ಕಾಂಗ್ರೆಸ್ ಸರ್ಕಾರದ ಕಾವಲು ಪಡೆಯಂತೆ ವರ್ತಿಸುತ್ತಿರುವುದು ಆಘಾತಕಾರಿ ವಿಷಯವಾಗಿದೆ. ಲೋಕಾಯುಕ್ತ ಪೊಲೀಸರು ಇಂತಹ ಗಂಭೀರ ವಿಷಯಗಳ ತನಿಖೆಯನ್ನು ನಡೆಸಲಾಗದಾಗ, ಲೋಕಾಯುಕ್ತವನ್ನು ವಿಸರ್ಜಿಸುವುದು ಒಳ್ಳೆಯದುʼ ಎಂದು ಯತ್ನಾಳ್ ಕೆಂಡಾಮಂಡಲವಾಗಿದ್ದಾರೆ.
ಇನ್ನು ಮೈಸೂರು ಜ್ಞಾನ ಗಂಗಾ ಗೃಹ ನಿರ್ಮಾಣ ಸಹಕಾರ ಸಂಘದಿಂದ ಕೇರ್ಗಳ್ಳಿ, ನಗರ್ತಳ್ಳಿ ಮತ್ತು ಬಲ್ಲಹಳ್ಳಿ ಗ್ರಾಮದ ಒಟ್ಟು 252 ಎಕರೆ 10 ಗುಂಟೆ ಪ್ರದೇಶದಲ್ಲಿ ಲೇಔಟ್ ನಿರ್ಮಿಸಲಾಗಿದ್ದು, ಈ ಸಹಕಾರ ಸಂಘಕ್ಕೆ ರಾಜೀವ್ ಅವರೇ ಅಧ್ಯಕ್ಷರಾಗಿದ್ದಾರೆ. ಅಲ್ಲದೆ ನಗರಾಭಿವೃದ್ಧಿ ಪ್ರಾಧಿಕಾರದ 2018ರ ಆದೇಶದ ವಿರುದ್ಧವಾಗಿ ಈ ಲೇಔಟ್ ನಿರ್ಮಿಸಲಾಗಿದೆ ಎನ್ನುವ ಆರೋಪವೂ ಇದೆ.

252 ಎಕರೆ ಜಾಗದ ಕೆಲವು ಸರ್ವೆ ನಂಬರ್ಗಳ ತಕರಾರು ಕೋರ್ಟ್ನಲ್ಲಿದೆ. ಆದ್ದರಿಂದ ಆ ಬಡವಾಣೆಗಳ ನಿವೇಶನ ಹಕ್ಕುಗಳನ್ನು ಮುಡಾ ಯಾವ ಕಾರಣಕ್ಕೂ ವರ್ಗಾವಣೆ ಮಾಡಬಾರದು ಎಂಬ ಆದೇಶವೂ ಇದೆ. ಹೀಗಿದ್ದರೂ ಕೂಡ ರಾಜೀವ್ 848 ನಿವೇಶನಗಳನ್ನ ಒಂದೇ ದಿನದಲ್ಲಿ ಮುಡಾದಿಂದ ಬಿಡುಗಡೆಗೊಳಿಸಿ, ಖಾತೆ ಮಾಡಿಸಿಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ.
ಅಲ್ಲದೆ ಆಯುಕ್ತರ ಅನುಮೋದನೆ ಇಲ್ಲದೇ ಇದ್ದರೂ ತಾಂತ್ರಿಕ ಶಾಖೆಯ ಅಧಿಕಾರಿಗಳ ಮೇಲೆ ಒತ್ತಡ ಹೇರಿ, ಈ ನಿವೇಶನಗಳನ್ನು ಬಿಡುಗಡೆ ಮಾಡಿಸಿಕೊಂಡಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ವಿವರಣೆ ನೀಡುವಂತೆ ಸರ್ಕಾರದ ನಗರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗೆ ಮುಡಾದ ಹಿಂದಿನ ಆಯುಕ್ತ ನಟೇಶ್ ಕೂಡ ಪತ್ರ ಬರೆದಿದ್ದರು ಎನ್ನಲಾಗಿದೆ.












Click it and Unblock the Notifications