ನಮ್ಮ ಒತ್ತಡಕ್ಕೆ ಮಣಿದು ಪಿಎಸ್ಐ ಆಯ್ಕೆ ಪಟ್ಟಿ ರಿಲೀಸ್: ಯತ್ನಾಳ್ ಅಭಿನಂದನೆ
ಕರ್ನಾಟಕ ರಾಜ್ಯ ಸರ್ಕಾರವು ಪಿಎಸ್ಐ ಅಭ್ಯರ್ಥಿಗಳಿಗೆ ಸಿಹಿಸುದ್ದಿ ನೀಡಿದೆ. ಭಾರಿ ಅಕ್ರಮ ನಡೆದ ಬಳಿಕ ಮರು ಪರೀಕ್ಷೆ ನಡೆಸಿದ್ದ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪಟ್ಟಿಯನ್ನು ಸರ್ಕಾರ ಇಂದು ಬಿಡುಗಡೆ ಮಾಡಿದೆ. ಇದಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಅಭ್ಯರ್ಥಿಗಳಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಪಿಎಸ್ಐ 545ರ ಮರು ಪರೀಕ್ಷೆ ನಡೆದು ಸುಮಾರು 9 ತಿಂಗಳಾದರೂ ಆಯ್ಕೆ ಪಟ್ಟಿ ಪ್ರಕಟಿಸದೆ ಹೊಣೆಗೇಡಿತನ ಪ್ರದರ್ಶಿಸುತ್ತಿದ್ದ ರಾಜ್ಯ ಸರ್ಕಾರ ಇಂದು ಅಭ್ಯರ್ಥಿಗಳ ಹಾಗೂ ನಮ್ಮೆಲ್ಲರ ಒತ್ತಡಕ್ಕೆ ಮಣಿದು ಇಂದು ಪಟ್ಟಿ ಬಿಡುಗಡೆ ಮಾಡಿದೆ. ಪಿ.ಎಸ್.ಐ ಆಗಿ ಆಯ್ಕೆಯಾದ ಎಲ್ಲ ಅಭ್ಯರ್ಥಿಗಳಿಗೂ ಅಭಿನಂದನೆಗಳು ಎಂದು ಯತ್ನಾಳ್ ಹೇಳಿದ್ದಾರೆ.

ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಯ ಫಲಿತಾಂಶವನ್ನು ಪರೀಕ್ಷೆ ನಡೆದ 100 ದಿನಗಳಲ್ಲಿ ಪ್ರಕಟಿಸಬೇಕು.
ಅನಾವಶ್ಯಕವಾಗಿ, ಪರೀಕ್ಷಾರ್ಥಿಗಳಿಗೆ ಗೊಂದಲ ಮೂಡಿಸಬಾರದು. ಪರೀಕ್ಷೆ ನಡೆಸುವ ಸಕ್ಷಮ ಪ್ರಾಧಿಕಾರ ಹಾಗೂ ಸರ್ಕಾರ ಎಚ್ಚೆತ್ತುಕೊಳ್ಳಲಿ. ಈ ವ್ಯವಸ್ಥೆ ಪರೀಕ್ಷಾರ್ಥಿ ಸ್ನೇಹಿಯಾಗಿರಬೇಕೇ ಹೊರತು ಪಟ್ಟಭದ್ರರ ಪರವಾಗಿರಬಾರದು ಎಂದು ಸರ್ಕಾರಕ್ಕೆ ಕಿವಿಮಾತು ಹೇಳಿದ್ದಾರೆ.
ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದ್ದ ಅಕ್ರಮವು ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿತ್ತು. ಬಳಿಕ ಹೈಕೋರ್ಟ್ ಸೂಚನೆ ಮೇರೆಗೆ ಕರ್ನಾಟಕ ರಾಜ್ಯ ಸರ್ಕಾರವು ಮತ್ತೆ ಮರು ಪರೀಕ್ಷೆ ನಡೆಸಿತ್ತು. ಆದರೆ ಫಲಿತಾಂಶ ಹೊರಬಿಟ್ಟು, ಅಭ್ಯರ್ಥಿಗಳ ಆಯ್ಕೆ ಪಟ್ಟಿ ಪ್ರಕಟಿಸಿರಲಿಲ್ಲ. ಈ ಬಗ್ಗೆ ಅಭ್ಯರ್ಥಿಗಳು ಕೂಡ ಬೀದಿಗಿಳಿದು ಪ್ರತಿಭಟನೆಯೂ ಮಾಡಿದ್ದರು.
ಇತ್ತೀಚೆಗೆ ಪಿಎಸ್ಐ ಹುದ್ದೆಯ ಆಕಾಂಕ್ಷಿಗಳು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅಭ್ಯರ್ಥಿಗಳ ಆಯ್ಕೆ ಪಟ್ಟಿ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ರಕ್ತದಲ್ಲಿ ಪತ್ರವೂ ಬರೆದಿದ್ದರು. ಇದರ ಬೆನ್ನಲ್ಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಅಭ್ಯರ್ಥಿಗಳ ಪರವಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡಿದ್ದರು. ಜಾತಿ ಗಣತಿ ವರದಿ ಬಿಡುಗಡೆಗೆ ಆತುರ ತೋರುವ ರಾಜ್ಯ ಸರ್ಕಾರ, ಪಿಎಸ್ಐ ನೇಮಕಾತಿ ಆಯ್ಕೆ ಪಟ್ಟಿ ಬಿಡುಗಡೆ ಮಾಡಲು ಯಾಕೆ ಸತಾಯಿಸುತ್ತಿದೆ? ಎಂದು ಪ್ರಶ್ನಿಸಿದ್ದರು.

ಇದೀಗ ರಾಜ್ಯ ಸರ್ಕಾರ ಪಿಎಸ್ಐ ನೇರ ನೇಮಕಾತಿಗಳ ಸುತ್ತೋಲೆಯ ಅನ್ವಯ ಆಯ್ಕೆ ಪಟ್ಟಿ ಪ್ರಕಟಿಸಿದೆ. 2020ರ ಸುತ್ತೋಲೆ ಅನ್ವಯ ಆಯ್ಕೆ ಪಟ್ಟಿಯಿಂದ ಹೊರಗುಳಿಯುವ 40 ಕಲ್ಯಾಣ ಕರ್ನಾಟಕ ವೃಂದದ ಅಭ್ಯರ್ಥಿಗಳಿಗನುಗುಣವಾಗಿ 40 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ವೃಂದದಲ್ಲಿ ಕಾಯ್ದಿರಿಸಿ, ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ. ಈ ಆಯ್ಕೆ ಪಟ್ಟಿಯು ಮಾನ್ಯ ಉಚ್ಚ ನ್ಯಾಯಾಲಯವು ರಿಟೊ ಪಿಟೀಷನ್ನ ಅಂತಿಮ ತೀರ್ಪಿಗೆ ಒಳಪಟ್ಟಿದೆ. ಅಲ್ಲದೇ ಈ ಆಯ್ಕೆ ಪಟ್ಟಿಯ ವೃಂದ ಬದಲಾವಣೆ, ಮೀಸಲಾತಿ ಪ್ರಚಾರ ಬದಲಾವಣೆ, ಅರ್ಹತಾ ಸ್ಥಾನ ಮತ್ತು ಘಟಕಗಳ ಬದಲಾವಣೆ ಆಗುವ ಸಾಧ್ಯತೆಗಳಿರುವ ಷರತ್ತುಗಳನ್ನು ವಿಧಿಸುತ್ತದೆ ಎಂದು ಸರ್ಕಾರ ಸ್ಪಷ್ಟವಾಗಿ ತಿಳಿಸಿದೆ.












Click it and Unblock the Notifications