ಡಿಕೆ ಶಿವಕುಮಾರ್ ಜೊತೆ ಯತ್ನಾಳ್ಗೂ ಆತ್ಮೀಯ ಸಂಬಂಧವಿದೆ, ಆಗಾಗ ಸಹಿ ಮಾಡಿಸಿಕೊಳ್ತಾರೆ: ಅಚ್ಚರಿ ಹೇಳಿಕೆ ನೀಡಿದ ಡಿ ಕೆ ಸುರೇಶ್
ಬೆಂಗಳೂರು, ಡಿಸೆಂಬರ್ 02: ಡಿಸಿಎಂ ಡಿಕೆ ಶಿವಕುಮಾರ್ ಜೊತೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೂ ಆತ್ಮೀಯವಾದ ಸಂಬಂಧ ಇದೆ. ವಿಜಯೇಂದ್ರ ಒಬ್ಬರೇ ಅಲ್ಲ. ಯತ್ನಾಳರು ಆಗಾಗ ಸಹಿ ಮಾಡಿಸಿಕೊಳ್ತಾರೆ. ಡಿಕೆಶಿ ಜೊತೆ ಯತ್ನಾಳ್ ಉತ್ತಮ ಸಂಬಂಧ ಇಟ್ಟುಕೊಂಡಿದ್ದಾರೆ. ಕೇವಲ ವಿಜಯೇಂದ್ರ ಬಗ್ಗೆ ಯಾಕೆ ಹೇಳಿದ್ದಾರೆ ಗೊತ್ತಿಲ್ಲ. ನನಗೆ ಅವರ ಆಂತರಿಕ ವಿಚಾರ ಅಗತ್ಯವಿಲ್ಲ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದರು.
ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಮಾತನಾಡಿ, ಸದ್ಯಕ್ಕೆ ಕೆಪಿಸಿಸಿಯಲ್ಲಿ ಯಾವುದೇ ಹುದ್ದೆ ಖಾಲಿ ಇಲ್ಲ. ಅಧ್ಯಕ್ಷ ಸ್ಥಾನಕ್ಕೆ ಆಸೆ, ದುರಾಸೆ ನನ್ನಲ್ಲಿಲ್ಲ. ಒಂದಷ್ಟು ಜನರು ನನ್ನನ್ನು ಖುಷಿಪಡಿಸಲು, ಮತ್ತೆ ಕೆಲವರು ಇನ್ನೊಬ್ಬರನ್ನು ಖುಷಿ ಪಡಿಸಲು ಹಾಗೂ ತಮ್ಮ ಅನುಕೂಲಕ್ಕಾಗಿ ಈ ರೀತಿ ಹೆಸರುಗಳನ್ನು ಹೇಳುತ್ತಿರುತ್ತಾರೆ. ನಾನು ಪ್ರಸ್ತುತ ವಿಶ್ರಾಂತಿಯಲ್ಲಿದ್ದೇನೆ. ಜನರು ಕೊಟ್ಟ ತೀರ್ಪನ್ನು ಪ್ರಸಾದ ಎಂದು ಸ್ವೀಕರಿಸಿ ಕೆಲಸ ಮಾಡುವವನು ನಾನು. ಯಾವುದೇ ಸ್ಥಾನ ಸಿಗಬೇಕು ಅಂತಾದರೆ ಸಿಕ್ಕೇ ಸಿಗುತ್ತದೆ. ಇಲ್ಲದಿದ್ದರೆ ಸಿಗುವುದಿಲ್ಲ. ಯಾವುದೂ ಇಲ್ಲಿ ಸ್ವಂತ ಸ್ವತ್ತಲ್ಲ. ಸಾರ್ವಜನಿಕವಾದ ಹುದ್ದೆಗಳಿವು ಎಂದು ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧ ಎನ್ನುವ ಕೆ.ಎನ್.ರಾಜಣ್ಣ ಅವರ ಹೇಳಿಕೆ ಬಗ್ಗೆ ಕೇಳಿದಾಗ, "ಸರ್ವಪಕ್ಷಗಳ ಹಿರಿಯ ನಾಯಕರಾದ ರಾಜಣ್ಣ ಅವರು ಹೆಚ್ಚು ಶಕ್ತಿ ಇರುವ ನಾಯಕರು. ಅವರ ನೇತೃತ್ವದಲ್ಲಿ ಪಕ್ಷ ಇನ್ನಷ್ಟು ಉತ್ತಮವಾಗಿ ಸಂಘಟನೆಯಾಗುತ್ತದೆ ಎನ್ನುವ ವಿಶ್ವಾಸ ಅವರಿಗಿದೆ. ಅವರಿಗೆ ಜನತಾದಳ, ಬಿಜೆಪಿಯವರ ಜೊತೆ ಒಳ್ಳೆ ಸಖ್ಯವನ್ನಿಟ್ಟುಕೊಂಡಿದ್ದಾರೆ. ಅಲ್ಲಿಂದ ಒಂದಷ್ಟು ಜನರನ್ನು ಕರೆದುಕೊಂಡು ಬರಬಹುದು ಎನಿಸುತ್ತದೆ. ಹೀಗಾಗಿ ಅವರು ಪಕ್ಷದ ನೇತೃತ್ವವಹಿಸಲು ತುಡಿತದಲ್ಲಿದ್ದಾರೆ. ಅವರಿಗೆ ಹೈಕಮಾಂಡ್ ಜವಾಬ್ದಾರಿ ವಹಿಸಿದರೆ ನಾವು ಸಹಕಾರ ನೀಡಲು ಸಿದ್ಧ" ಎಂದು ತಿಳಿಸಿದರು.
ಚುನಾವಣೆ ದೃಷ್ಟಿಯಿಂದ ಪೂರ್ಣಪ್ರಮಾಣದ ಅಧ್ಯಕ್ಷರ ಅವಶ್ಯಕತೆಯಿದೆಯೇ ಎಂದು ಕೇಳಿದಾಗ "ಸಂಘಟನೆ ಸೇರಿದಂತೆ ಎಲ್ಲ ರಂಗಗಳಲ್ಲೂ ಕೆಲಸ ಮಾಡುವ ಅವಶ್ಯಕತೆ ಪಕ್ಷಕ್ಕಿದೆ. ಜವಾಬ್ದಾರಿ ಹೊತ್ತುಕೊಳ್ಳಲು ಯಾರೇ ಮುಂದೆ ಬಂದರೂ, ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧವಾಗಿ ಎಲ್ಲಾ ನಾಯಕರು, ಕಾರ್ಯಕರ್ತರು ಒಪ್ಪಿಕೊಳ್ಳುತ್ತೇವೆ, ಇದರಲ್ಲಿ ಯಾವುದೇ ಅಪಸ್ವರವಿಲ್ಲ" ಎಂದರು.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ರಾಮನಗರದ ಎಲ್ಲಾ ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, "ಅವರು ಉತ್ತಮವಾದ ಆಶಾಭಾವನೆ ಇಟ್ಟುಕೊಂಡಿದ್ದಾರೆ. ಜಿಲ್ಲೆಯ ಕಾಂಗ್ರೆಸ್ ಶಾಸಕರು ಜನರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಕುಮಾರಸ್ವಾಮಿ ಅವರ ಹೇಳಿಕೆಯನ್ನು ಸವಾಲು ಹಾಗೂ ಪ್ರತಿಷ್ಟೆಯಾಗಿ ಸ್ವೀಕರಿಸಿ, ನಾಲ್ಕು ಶಾಸಕರು ಜಿಲ್ಲೆಯ ಜನರ ಋಣ ತೀರಿಸುವಂತೆ ಕೆಲಸ ಮಾಡಬೇಕು ಎಂದು ವಿನಯಪೂರ್ವಕ ಮನವಿ ಮಾಡುತ್ತೇವೆ" ಎಂದು ತಿಳಿಸಿದರು.
ಕನಕಪುರವನ್ನು ಗೆಲ್ಲುತ್ತೇವೆ ಎಂದು ಹೇಳಿದ್ದಾರೆ ಎಂದು ಕೇಳಿದಾಗ, "ಮತದಾರರ ತೀರ್ಪು ಅಂತಿಮ. ನಾನು ಈ ರೀತಿ ಕೂತಿದ್ದೇನೆ ಎಂದರೆ ಅದು ಮತದಾರರ ತೀರ್ಪು. ಅದನ್ನು ಪ್ರಶ್ನೆ ಮಾಡಲು ಸಾಧ್ಯವೇ? ಎಂದು ಮಾಜಿ ಸಂಸದ ಡಿ ಕೆ ಸುರೇಶ್ ಅವರು ಕೇಳಿದರು.
ಚನ್ನಪಟ್ಟಣದ ಗೆಲುವಿನ ನಂತರ ದೇವಸ್ಥಾನಕ್ಕೆ ಹೋಗಿ ಹರಕೆ ತೀರಿಸಿದ್ದೀರಿ ಎಂದು ಕೇಳಿದಾಗ, "ಅನೇಕ ದಿನಗಳಿಂದ ನಮ್ಮ ಸ್ನೇಹಿತರು ಆ ದೇವಾಲಯಕ್ಕೆ ಭೇಟಿ ನೀಡುವಂತೆ ಆಹ್ವಾನ ನೀಡುತ್ತಿದ್ದರು. ಸಮಯ ಸಿಕ್ಕಿರಲಿಲ್ಲ. ಈಗ ಸಮಯ ಸಿಕ್ಕಿತು ಹಾಗಾಗಿ ಹೋಗಿ ಬಂದೆ. ನಾನು ಅಧಿಕಾರದಲ್ಲಿದ್ದಷ್ಟು ದಿನ ಜನರನ್ನೇ ದೇವರು ಎಂದು ಭಾವಿಸಿದ್ದೆ. ಅವರು ನನ್ನ ದೂರ ಮಾಡಿದರು. ಈಗ ಎಲ್ಲರೂ ದಿನಬೆಳಗಾದರೇ ಹೋಮ ಹವನ, ದೇವಾಲಯದಲ್ಲಿ ಪೂಜೆ ಮಾಡುತ್ತಿರುತ್ತಾರೆ. ಹೀಗಾಗಿ ನಾನು ಕೂಡ ಜನರನ್ನು ಬಿಟ್ಟು ದೇವರ ಕಡೆ ಮುಖ ಮಾಡಿದ್ದೇನೆ ಎಂದು ತಿಳಿಸಿದರು.
ಚನ್ನಪಟ್ಟಣದಲ್ಲಿ ಕೃತಜ್ಞತಾ ಸಮಾರಂಭ ಯಾವಾಗ ಎಂದು ಕೇಳಿದಾಗ, ಡಿ.14ರಂದು ಕೃತಜ್ಞತಾ ಸಮಾರಂಭವನ್ನು ಇಟ್ಟುಕೊಂಡಿದ್ದೇವೆ. ಸಿಎಂ ಹಾಗೂ ಡಿಸಿಎಂ ಕೂಡ ಈ ದಿನಾಂಕ ಕೊಟ್ಟಿದ್ದಾರೆ. ಆದರೆ ಕೆಲವು ಶಾಸಕರು ಅಧಿವೇಶನ ಮುಕ್ತಾಯದ ಬಳಿಕ ಮಾಡಿ ಎಂದು ಕೇಳುತ್ತಿದ್ದು, ಅಧಿವೇಶನದ ಬಳಿಕ ಭಾನುವಾರದಂದು ಈ ಸಮಾರಂಭ ಮಾಡುತ್ತೇವೆ ಎಂದು ತಿಳಿಸಿದರು.
ಸ್ವಾಭಿಮಾನಿ ಸಮಾವೇಶದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಇದು ಕಾಂಗ್ರೆಸ್ ಪಕ್ಷದ ಸಮಾವೇಶ. ಇದನ್ನು ರಾಜ್ಯದ ಮೂರ್ನಾಲ್ಕು ಕಡೆಗಳಲ್ಲಿ ಮಾಡುವ ಉದ್ದೇಶವಿದ್ದು, ಮೊದಲು ಹಾಸನದಲ್ಲಿ ಮಾಡಲಾಗುತ್ತಿದೆ. ಈ ಸಮಾವೇಶದಲ್ಲಿ ರಾಜ್ಯ ಹಾಗೂ ರಾಷ್ಟ್ರ ನಾಯಕರು ಭಾಗವಹಿಸಲಿದ್ದಾರೆ. ಕೆಲವರು ಹೇಳಿಕೆ ನೀಡುವಾಗ ಅವರನ್ನು ಓಲೈಸಿಕೊಳ್ಳಲು ಈ ರೀತಿ ಹೇಳಿಕೆ ನೀಡುತ್ತಾರೆ. ಆದರೆ ಎಲ್ಲರಿಗಿಂತ ಪಕ್ಷ ಮೊದಲು ಎಂದು ಅರಿತಿದ್ದಾರೆ ಎಂದು ಭಾವಿಸಿದ್ದೇನೆ ಎಂದು ತಿಳಿಸಿದರು.












Click it and Unblock the Notifications