ಉಗ್ರನ ಜೊತೆ ಸಿಎಂ ಸಿದ್ದರಾಮಯ್ಯ: ದೊಡ್ಡ ಮಟ್ಟದ ವಿವಾದ ಸೃಷ್ಟಿಸಿದ ಬಸನಗೌಡ ಪಾಟೀಲ್ ಯತ್ನಾಳ್!
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ, ಅದರಲ್ಲೂ 'ಸಿಎಂ ಸಿದ್ದರಾಮಯ್ಯ ಐಸಿಸ್ ಬೆಂಬಲಿಗನ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ' ಎಂದಿದ್ದರು ಬಸನಗೌಡ ಪಾಟೀಲ್ ಯತ್ನಾಳ್. ಇದೀಗ ತಮ್ಮ ಆರೋಪಕ್ಕೆ ಸಾಕ್ಷಿಯನ್ನು ನೀಡಿದ್ದಾರೆ. ಹಾಗಾದ್ರೆ ಸಿಎಂ ಸಿದ್ದರಾಮಯ್ಯ ಅವರು ISIS ಉಗ್ರ ಸಂಘಟನೆ ಬೆಂಬಲಿಗನ ಜೊತೆಯಲ್ಲಿ ವೇದಿಕೆ ಹಂಚಿಕೊಂಡಿದ್ದು ನಿಜಾನ?
ಅಂದಹಾಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮುಸ್ಲಿಂ ಸಮುದಾಯದ ಮುಖಂಡರು ಗರಂ ಆಗಿದ್ದಾರೆ. ಯತ್ನಾಳ್ ಬಾಯಿಗೆ ಬಂದಂತೆ ಮಾತನಾಡುತ್ತಾರೆ ಅಂತಾ ಆಕ್ರೋಶ ಹೊರಹಾಕುತ್ತಿದ್ದಾರೆ. ಇಷ್ಟೆಲ್ಲಾ ಆರೋಪದ ನಡುವೆ ಈಗ ಬಸನಗೌಡ ಪಾಟೀಲ್ ಯತ್ನಾಳ್ 'ಎಕ್ಸ್' ಖಾತೆ ಅಂದ್ರೆ ಟ್ವಿಟ್ಟರ್ನಲ್ಲಿ ಸ್ಫೋಟಕ ಆರೋಪ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಮ್ಮೆ ಗಂಭೀರ ಆರೋಪ ಮಾಡಿದ್ದಾರೆ ಯತ್ನಾಳ್! ಅರೆರೆ, ಏನದು ಆರೋಪ? ಉಗ್ರರ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹೆಸರನ್ನು ಯತ್ನಾಳ್ ಈಗ ಎಳೆದು ತಂದಿದ್ದು ಏಕೆ? ಅನ್ನೋ ಪ್ರಶ್ನೆಗೆ ಉತ್ತರ ಇಲ್ಲಿದೆ ಮುಂದೆ ಓದಿ.
ಶಾಸಕ ಯತ್ನಾಳ್ VS ಸಿಎಂ ಸಿದ್ದರಾಮಯ್ಯ
ಈ ಬಗ್ಗೆ ಟ್ವೀಟ್ ಮಾಡಿರುವ ಬಸನಗೌಡ ಪಾಟೀಲ್ ಯತ್ನಾಳ್, 'ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹುಬ್ಬಳ್ಳಿಯ ಕಾರ್ಯಕ್ರಮದಲ್ಲಿ ಐಸಿಸ್ ಭಯೋತ್ಪಾದಕರ ಬೆಂಬಲಿಗನೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ. ತನ್ವಿರ್ ಪೀರಾ ಎಂಬ ಮುಸ್ಲಿಂ ಮೌಲ್ವಿ ಯೆಮೆನ್, ಸೌದಿ ಹಾಗು ಮಧ್ಯ ಪ್ರಾಚ್ಯ ದೇಶಗಳ ಪ್ರವಾಸಗಳ ವೇಳೆ ಭಯೋತ್ಪಾದಕ ಸಂಘಟನೆಗಳ ಪ್ರಮುಖರನ್ನು ಭೇಟಿಯಾಗಿರುವ ಚಿತ್ರಗಳು ಇಲ್ಲಿವೆ.' ಎಂದು ಒಂದು ಟ್ವೀಟ್ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
ಮಧ್ಯಪ್ರಾಚ್ಯ ದೇಶಗಳಿಂದ ಹಣವನ್ನು ಭಾರತಕ್ಕೆ...
ತಮ್ಮ ಆರೋಪವನ್ನು ಮುಂದುವರಿಸಿದ ಯತ್ನಾಳ್ ಅವರು, 'ಈ ಭಯೋತ್ಪಾದಕ ಬೆಂಬಲಿಗೆ ಹಿಂದೆಯೂ ಹಲವಾರು ಬಾರಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದ. ಕೆಲವೇ ದಿನಗಳಲ್ಲಿ ತನ್ವಿರ್ ಪೀರಾ ಎಂಬ ಭಯೋತ್ಪಾದಕ ಬೆಂಬಲಿಗನ ಇನ್ನಷ್ಟು ವಿವರಗಳನ್ನು ಬಹಿರಂಗಗೊಳಿಸುತ್ತೇನೆ.

ಈತನು ಮಧ್ಯಪ್ರಾಚ್ಯ ದೇಶಗಳಿಂದ ಹಣವನ್ನು ಭಾರತಕ್ಕೆ ತರುವ ಹಾಗು ಭಾರತದ ಚಟುವಟಿಕಗಳ ಮಾಹಿತಿಯನ್ನು ಅರಬ್ ದೇಶಗಳಿಗೆ ರವಾನಿಸುವ ಕೆಲಸ ಮಾಡುತ್ತಿದ್ದಾನೆ.' ಎಂದು ಸ್ಫೋಟಕ ಆರೋಪ ಮಾಡಿದ್ದಾರೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್.
ಕೇಂದ್ರೀಯ ತನಿಖಾ ಸಂಸ್ಥೆಗಳು...
ಹಾಗೇ ಮತ್ತೊಂದು ಟ್ವೀಟ್ನಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ ಸಿದ್ದರಾಮಯ್ಯ ಕುರಿತು ಆರೋಪ ಮಾಡುತ್ತಾ, 'ಇಂದು ಬೆಳಗಾವಿಯಲ್ಲಿ ಮುಂಜಾನೆ ನಾನು ಮುಖ್ಯಮಂತ್ರಿಗಳು ಐಸಿಸ್ ಬೆಂಬಲಿಗನ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಹೇಳಿದ್ದೆ. ರಾಜ್ಯ ಪೊಲೀಸ್, ಕೇಂದ್ರೀಯ ತನಿಖಾ ಸಂಸ್ಥೆಗಳು ಈ ಕುರಿತು ವಿಚಾರಣೆ ಮಾಡಬೇಕು ಎಂದು ಆಗ್ರಹಿಸುತ್ತಿದ್ದೇನೆ.' ಎಂದಿದ್ದಾರೆ.
ಒಟ್ನಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಆರೋಪ ಈಗ ಕರ್ನಾಟಕ ರಾಜಕೀಯದಲ್ಲಿ ಸಂಚಲನ ಸೃಷ್ಟಿ ಮಾಡಿದೆ. ಕಾಂಗ್ರೆಸ್ ನಾಯಕರು ಈ ಹೇಳಿಕೆಯ ಬಗ್ಗೆ ಆಕ್ರೋಶ ಹೊರಹಾಕುತ್ತಿದ್ದಾರೆ. ಆದರೆ ಯತ್ನಾಳ್ ಹಲವು ಫೋಟೋಗಳ ಮೂಲಕ ಇದೀಗ ಟ್ವೀಟ್ ಮಾಡಿರುವುದು ತಿಕ್ಕಾಟವನ್ನು ಮತ್ತಷ್ಟು ಹೆಚ್ಚಿಸಿದೆ.












Click it and Unblock the Notifications