ಶೈಕ್ಷಣಿಕ ಪ್ರವಾಸಗಳ ಆಯೋಜನೆ ಕುರಿತು ಮಹತ್ವದ ಸಲಹೆ ಕೊಟ್ಟ ಯತ್ನಾಳ್, ಏನದು?
ಮುರುಡೇಶ್ವರದಲ್ಲಿ ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ಕೋಲಾರ ಜಿಲ್ಲೆಯ ನಾಲ್ವರು ವಿದ್ಯಾರ್ಥಿ ನೀರುಪಾಲಾಗಿ ಮೃತಪಟ್ಟಿರುವ ಘಟನೆ ಸದ್ಯ ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಈ ಘಟನೆ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಶೈಕ್ಷಣಿಕ ಪ್ರವಾಸಗಳನ್ನು ಆಯೋಜಿಸುವ ಸಂಬಂಧ ಮಹತ್ವದ ಸಲಹೆಯೊಂದನ್ನು ಸರ್ಕಾರಕ್ಕೆ ನೀಡಿದ್ದಾರೆ.
ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನೀರುಪಾಲಾಗಿರುವುದು ನಿಜಕ್ಕೂ ನೋವಿನ ಸಂಗತಿ ಎಂದು ಯತ್ನಾಳ್ ಸಂತಾಪ ಸೂಚಿಸಿದ್ದಾರೆ.

ಪ್ರವಾಸ ಆಯೋಜನೆ ಮಾಡುವಾಗ ಕನಿಷ್ಠ ಸುರಕ್ಷತೆ ಹಾಗೂ ಮಾರ್ಗಸೂಚಿಗಳನ್ನು ಪಾಲಿಸದೆ ಮಕ್ಕಳನ್ನು ಬೇಕಾಬಿಟ್ಟಿ ಬಿಟ್ಟು ಹೋದದ್ದು ಶಿಕ್ಷಕರ ಬೇಜವಾಬ್ದಾರಿ ತೋರಿಸುತ್ತದೆ. ನೀರು ಇರುವ ಜಾಗದಲ್ಲಿ ಖುದ್ದು ಶಿಕ್ಷಕರು ಇದ್ದು, ಮೇಲ್ವಿಚಾರಣೆ ಮಾಡಬೇಕಿತ್ತು. ಇದು ಯಾವುದೂ ಆಗದೆ, ಬದುಕು ಬಾಳಬೇಕಾಗಿದ್ದ ಮಕ್ಕಳು ಇಂದು ನಮ್ಮೊಂದಿಗೆ ಇಲ್ಲ ಎಂದು ಕಂಬನಿ ಮಿಡಿದಿದ್ದಾರೆ.
ಶೈಕ್ಷಣಿಕ ಪ್ರವಾಸವನ್ನು ಆಯೋಜಿಸುವಾಗ ಶಿಕ್ಷಕರಿಗೆ ಇಲಾಖೆ ಕೆಲ ಪ್ರಮಾಣಿತ ಕಾರ್ಯಾಚರಣಾ ವಿಧಾನಗಳನ್ನು (ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್-SOP) ಅಳವಡಿಸಿಕೊಂಡು, ಅದನ್ನು ಚಾಚೂ ತಪ್ಪದೆ ಪಾಲಿಸಿದರೆ ಯಾವುದೇ ಅವಘಡಗಳು ಸಂಭವಿಸುತ್ತಿರಲಿಲ್ಲ. ಇನ್ನಾದರೂ ಶಿಕ್ಷಣ ಇಲಾಖೆ ಕಾರ್ಯೋನ್ಮುಖರಾಗಿ ಶೈಕ್ಷಣಿಕ ಪ್ರವಾಸ ಆಯೋಜಿಸುವಾಗ ಕಟ್ಟುನಿಟ್ಟಾಗಿ ನಿಬಂಧನೆಗಳನ್ನು ವಿಧಿಸಿ ಅದನ್ನು ಪಾಲಿಸಲಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲಹೆ ನೀಡಿದ್ದಾರೆ.
ಏನಿದು ಘಟನೆ?: ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರಕ್ಕೆ ಶೈಕ್ಷಣಿಕ ಪ್ರವಾಸಕ್ಕೆಂದು ಕೋಲಾರದಿಂದ ವಿದ್ಯಾರ್ಥಿಗಳು ಬಂದಿದ್ದರು. ಈ ಪೈಕಿ ನಾಲ್ಕು ಮಂದಿ ವಿದ್ಯಾರ್ಥಿಗಳು ಸಮುದ್ರಕ್ಕೆ ಇಳಿದಿದ್ದು, ಅಲೆಗಳ ಹೊಡೆತಕ್ಕೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಸಮುದ್ರದಲ್ಲಿ ಮುಳುಗಿ ಕಣ್ಮರೆಯಾಗಿದ್ದ ವಿದ್ಯಾರ್ಥಿಗಳನ್ನು ಕೊತ್ತೂರು ಗ್ರಾಮದ ಮೊರಾರ್ಜಿ ವಸತಿ ಶಾಲೆಯ ದೀಕ್ಷಾ, ಲಾವಣ್ಯ, ಶ್ರಾವಂತಿ ಹಾಗೂ ವಂದನಾ ಎಂದು ಗುರುತಿಸಲಾಗಿದೆ. ಇವರೆಲ್ಲರ ಮೃತದೇಹ ಇಂದು ಮುರುಡೇಶ್ವರದ ಸಮುದ್ರದಲ್ಲಿ ಪತ್ತೆಯಾಗಿತ್ತು

ನಿನ್ನೆಯೇ ಮೃತದೇಹಗಳ ಪತ್ತೆ ಕಾರ್ಯಾಚರಣೆ ನಡೆದಿತ್ತು. ಆದರೆ ಒಬ್ಬರ ಮೃತದೇಹ ಮಾತ್ರ ಸಿಕ್ಕಿತ್ತು. ಬಾಕಿ ವಿದ್ಯಾರ್ಥಿಗಳ ಕಾರ್ಯಾಚರಣೆ ವೇಳೆ ಇಂದು ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆಯಾಗಿತ್ತು. ಘಟನೆ ಸಂಬಂಧ ಬೇಜವಾಬ್ದಾರಿ ಆರೋಪದ ಹಿನ್ನೆಲೆ ಶಾಲೆಯ ಪ್ರಿನ್ಸಿಪಾಲ್ ಶಶಿಕಲಾ ಅವರನ್ನು ಸಸ್ಪೆಂಡ್ ಮಾಡಲಾಗಿದ್ದು, ಶಾಲೆಯ ಅತಿಥಿ ಉಪನ್ಯಾಸಕರು ಹಾಗೂ ಸಿಬ್ಬಂದಿಯನ್ನು ಕೆಲಸದಿಂದ ವಜಾ ಮಾಡಲಾಗಿದೆ.
ವಸತಿ ಶಾಲೆಯ ಸುಮಾರು 54 ವಿದ್ಯಾರ್ಥಿನಿಯರನ್ನು ಮುರುಡೇಶ್ವರ ಪ್ರವಾಸಕ್ಕೆ ಕರೆದೊಯ್ಯಲಾಗಿತ್ತು. ನಿನ್ನೆ ಸಂಜೆ ಸಮುದ್ರದ ಬಳಿ ಆಟವಾಡಲು ವಿದ್ಯಾರ್ಥಿಗಳು ಮುಂದಾಗಿದ್ದರು. ಈ ವೇಳೆ ಅಲೆಗಳ ಅಬ್ಬರ ಹೆಚ್ಚಾಗಿದ್ದರೂ ಶಿಕ್ಷಕರು ಮಕ್ಕಳನ್ನ ಆಟವಾಡಲು ಬಿಟ್ಟಿದ್ದರು ಎನ್ನಲಾಗಿದೆ. ಅಲೆಗಳ ಅಬ್ಬರ ಹೆಚ್ಚಿದ್ದರೂ ಶಿಕ್ಷಕರು ಮುನ್ನೆಚ್ಚರಿಕೆ ಕೈಗೊಳ್ಳದೆ ಮಕ್ಕಳನ್ನು ಸಮುದ್ರದಲ್ಲಿ ಆಟ ಆಡಲು ಬಿಟ್ಟಿದ್ದರು ಎನ್ನಲಾಗಿದೆ. ಅಲೆಗಳ ಹೊಡೆತಕ್ಕೆ ವಿದ್ಯಾರ್ಥಿನಿಯರು ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಆದರೆ ಕೆಲ ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲಾಯಿತು. ದುರಾದೃಷ್ಟವಶಾತ್ ನಾಲ್ಕು ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದು, ಈ ಘಟನೆ ಬೆನ್ನಲ್ಲೇ ಮುರುಡೇಶ್ವರದಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.












Click it and Unblock the Notifications