ಬಿಜೆಪಿಯವರು ನನ್ನನ್ನು ಸರಿಯಾಗಿ ಬಳಸಿಕೊಂಡಿಲ್ಲ: ಜನರಿಗೆ ಪರೋಕ್ಷ ಸಂದೇಶ ರವಾನಿಸಿದರೇ ಸಂಸದ ಬಚ್ಚೇಗೌಡ?
ಬೆಂಗಳೂರು, ಆಗಸ್ಟ್ 23: ಚಿಕ್ಕಬಳ್ಳಾಪುರದ ಬಿಜೆಪಿ ಲೋಕಸಭಾ ಸದಸ್ಯ ಬಿಎನ್ ಬಚ್ಚೇಗೌಡ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಮುಂದಿನ ವರ್ಷದ ಲೋಕಸಭೆ ಚುನಾವಣೆಗೆ ಟಿಕೆಟ್ ಸಿಗುವುದಿಲ್ಲವೆಂದು ಮನವರಿಕೆ ಆಗಿದ್ದರಿಂದ ಅವರು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಲೋಕಸಭೆ ಚುನಾವಣೆಗೆ 75 ವರ್ಷ ದಾಟಿದ ಯಾರನ್ನೂ ಕಣಕ್ಕಿಳಿಸದಿರಲು ಬಿಜೆಪಿ ನಿರ್ಧರಿಸಿದೆ. ನನಗೆ ಈ ಬಾರಿ ಟಿಕೆಟ್ ನೀಡುವುದಿಲ್ಲ ಎಂದು ಖಡಾಖಂಡಿತವಾಗಿ ಹೇಳಲಾಗಿದೆ' ಎಂದು ಬಚ್ಚೇಗೌಡ ತಿಳಿಸಿದ್ದಾರೆ.

'ಒಂದು ಕುಟುಂಬ, ಒಂದು ಟಿಕೆಟ್' ನೀತಿಯ ಬಗ್ಗೆ ಪಕ್ಷದ ಮುಖಂಡರು ನನಗೆ ತಿಳಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆದರೆ, ರಾಜಕೀಯದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಹೇಳಿದ್ದಾರೆ.
ನನ್ನ ಪುತ್ರ ಶರತ್ ಬಚ್ಚೇಗೌಡ ಕಾಂಗ್ರೆಸ್ನಿಂದ ಶಾಸಕರಾಗಿದ್ದಾರೆ. ಆದರೆ, ನಾನು ಬಿಜೆಪಿಯಲ್ಲೇ ಇದ್ದೇನೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಟಿಕೆಟ್ನಲ್ಲಿ ಸ್ಪರ್ಧಿಸುವುದಿಲ್ಲ ಎಂದು ಅವರು ಖಚಿತಪಡಿಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಆಡಳಿತದಲ್ಲಿದ್ದಾಗ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರು ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಂಡಿರಲಿಲ್ಲ. ಡಾ.ಕೆ.ಸುಧಾಕರ್ ಮತ್ತು ಎಂ.ಟಿ.ಬಿ.ನಾಗರಾಜ್ ಅವರು ನನ್ನ ಸೇವೆಯನ್ನು ಸರಿಯಾಗಿ ಬಳಸಿಕೊಂಡಿಲ್ಲ ಎಂದು ಬಚ್ಚೇಗೌಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

'ಸರ್ಕಾರದ ಕಾರ್ಯಕ್ರಮಗಳ ಆಹ್ವಾನ ಪತ್ರಿಕೆಗಳಲ್ಲಿ ಪ್ರೋಟೋಕಾಲ್ ಸಲುವಾಗಿ ನನ್ನ ಹೆಸರನ್ನು ಹಾಕಲಾಗುತ್ತಿತ್ತು. ಆದರೆ, ಪಕ್ಷದ ಕಾರ್ಯಕ್ರಮಗಳಿಗೆ ನನ್ನನ್ನು ಆಹ್ವಾನಿಸುತ್ತಿರಲಿಲ್ಲ. ಬಿಜೆಪಿಯವರು ನನ್ನನ್ನು ಸರಿಯಾಗಿ ಬಳಸಿಕೊಂಡಿಲ್ಲ' ಎಂದು ಆರೋಪಿಸಿದ್ದಾರೆ.
ಜನರಿಗೆ ಪರೋಕ್ಷ ಸಂದೇಶ ರವಾನೆ
ಬಿಜೆಪಿಯವರು ನನ್ನನ್ನು ಸರಿಯಾಗಿ ಬಳಸಿಕೊಂಡಲಿಲ್ಲ ಎಂಬ ಹೇಳಿಕೆ ನೀಡುವ ಮೂಲಕ ಬಚ್ಚೇಗೌಡ ಅವರು ಜನರಿಗೆ ಪರೋಕ್ಷ ಸಂದೇಶ ರವಾನಿಸಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿವೆ. ಮೂರು ವರ್ಷಗಳ ಹಿಂದೆಯೇ ಬಚ್ಚೇಗೌಡ ಅವರು ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸಿಲ್ಲ.
ಅವರು ಹೆಚ್ಚುಕಮ್ಮಿ ರಾಜಕೀಯವಾಗಿ ನಿಷ್ಕ್ರೀಯರಾಗಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ, ಈಗ ಬಿಜೆಪಿ ವಿರುದ್ಧ ಬಚ್ಚೇಗೌಡ ಹರಿಹಾಯ್ದಿದ್ದಾರೆ. ಈ ಮೂಲಕ ತಾವು ರಾಜಕೀಯದಲ್ಲಿ ಸಕ್ರೀಯವಾಗಿದ್ದುಕೊಂಡು ಪುತ್ರನ ಭವಿಷ್ಯಕ್ಕಾಗಿ ದುಡಿಯಲಿದ್ದೇನೆ ಎಂಬ ಪರೋಕ್ಷ ಸಂದೇಶ ರವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಬಿಎನ್ ಬಚ್ಚೇಗೌಡ ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದರಾಗಿದ್ದಾರೆ. ಅವರ ಪುತ್ರ ಶರತ್ ಬಚ್ಚೇಗೌಡ ಅವರು ಹೊಸಕೋಟೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಪುತ್ರ ಶರತ್ ಅವರಿಗೆ ಬಚ್ಚೇಗೌಡ ಅವರು ಗುಪ್ತವಾಗಿ ಬೆಂಬಲ ನೀಡಿದ್ದಾರೆ.












Click it and Unblock the Notifications