ಚಿಂಚೋಳಿ, ಕುಂದಗೋಳ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳು ಅಂತಿಮ
ಬೆಂಗಳೂರು, ಏಪ್ರಿಲ್ 25 : ಕರ್ನಾಟಕ ಬಿಜೆಪಿ ಎರಡು ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಎರಡೂ ಕ್ಷೇತ್ರಕ್ಕೆ ಒಬ್ಬರು ಅಭ್ಯರ್ಥಿಗಳನ್ನು ಮಾತ್ರ ಶಿಫಾರಸು ಮಾಡಲಾಗಿದ್ದು, ಹೈಕಮಾಂಡ್ ಅಂತಿಮ ಘೋಷಣೆ ಮಾಡಲಿದೆ.
ಗುರುವಾರ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಯಿತು. ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆಯಿತು. ಅಂತಿಮವಾಗಿ ಎರಡು ಹೆಸರುಗಳನ್ನು ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸು ಮಾಡಲಾಗಿದೆ.
2 ಕ್ಷೇತ್ರದ ಉಪ ಚುನಾವಣೆ : ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ
ಡಾ.ಉಮೇಶ್ ಜಾಧವ್ ರಾಜೀನಾಮೆಯಿಂದಾಗಿ ಕಲಬುರಗಿ ಜಿಲ್ಲೆಯ ಚಿಂಚೋಳಿ ವಿಧಾನಸಭಾ ಕ್ಷೇತ್ರ, ಸಿ.ಎಸ್.ಶಿವಳ್ಳಿ ಅವರ ನಿಧನದಿಂದಾಗಿ ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರಗಳು ತೆರವಾಗಿವೆ. ಮೇ 19ರಂದು ಉಪ ಚುನಾವಣೆ ನಡೆಯಲಿದೆ.
ಚಿಂಚೋಳಿ, ಕುಂದಗೋಳ ಉಪ ಚುನಾವಣೆಯತ್ತ ಎಲ್ಲರ ಚಿತ್ತ
ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಪೈಪೋಟಿ ನಡೆಯಲಿದೆ. ಕಾಂಗ್ರೆಸ್ ಪಕ್ಷ ಇನ್ನೂ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. ಉಪ ಚುನಾವಣೆ ಕಾಂಗ್ರೆಸ್ ಮತ್ತು ಬಿಜೆಪಿ ಪಾಲಿಗೆ ಪ್ರತಿಷ್ಠೆಯಾಗಿದೆ. ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿದ್ದರು. ಆದ್ದರಿಂದ, ಕ್ಷೇತ್ರವನ್ನು ಉಳಿಸಿಕೊಳ್ಳುವ ಅನಿವಾರ್ಯತೆ ಕಾಂಗ್ರೆಸ್ ಪಕ್ಷಕ್ಕಿದೆ.
ಬಿಜೆಪಿ ಅಭ್ಯರ್ಥಿಗಳು
ಚಿಂಚೋಳಿ ವಿಧಾನಸಭಾ ಕ್ಷೇತ್ರಕ್ಕೆ ಡಾ.ಉಮೇಶ್ ಜಾಧವ್ ಅವರ ಸಹೋದರ ರಾಮಚಂದ್ರ ಜಾಧವ್ ಅವರು ಅಭ್ಯರ್ಥಿ ಎಂದು ಶಿಫಾರಸು ಮಾಡಲಾಗಿದೆ. 2018ರ ಚುನಾವಣೆಯಲ್ಲಿ ಸುನೀಲ್ ವಲ್ಯಾಪುರೆ ಅವರು ಅಭ್ಯರ್ಥಿಯಾಗಿದ್ದರು. ಈ ಬಾರಿಯೂ ಅವರು ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಡಾ.ಉಮೇಶ್ ಜಾಧವ್ ಅವರ ಕುಟುಂಬದವರಿಗೆ ಬಿಜೆಪಿ ಟಿಕೆಟ್ ನೀಡಲಿದೆ.
ಚಿಕ್ಕನಗೌಡ ಅಭ್ಯರ್ಥಿ
ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೆ ಚಿಕ್ಕನಗೌಡ ಸಿದ್ದನಗೌಡ ಈಶ್ವರ ಗೌಡ ಅವರ ಅಭ್ಯರ್ಥಿ ಎಂದು ಶಿಫಾರಸು ಮಾಡಲಾಗಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿಯೂ ಇವರು ಅಭ್ಯರ್ಥಿಯಾಗಿದ್ದರು. ಚಿಕ್ಕನಗೌಡ ಅವರು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಸಂಬಂಧಿ.
ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ
ಮೇ 19ರಂದು ಚಿಂಚೋಳಿ ಮತ್ತು ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ಮೇ 23ರಂದು ಫಲಿತಾಂಶ ಪ್ರಕಟವಾಗಲಿದೆ. ಇಂದು ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಎರಡೂ ಕ್ಷೇತ್ರಗಳಿಗೆ ಪಕ್ಷ ಉಸ್ತುವಾರಿಗಳನ್ನು ನೇಮಕ ಮಾಡಿದೆ.
ಉಪ ಚುನಾವಣೆ ಗೆಲ್ಲುವ ಪಣ
2018ರ ವಿಧಾನಸಭೆ ಚುನಾವಣೆಯಲ್ಲಿ ಕುಂದಗೋಳ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ 634 ಮತಗಳ ಅಂತರದಲ್ಲಿ ಸೋಲಾಗಿತ್ತು. ಆದ್ದರಿಂದ, ಈ ಬಾರಿ ಕ್ಷೇತ್ರದಲ್ಲಿ ಗೆಲ್ಲಲೇಬೇಕು ಎಂದು ಬಿಜೆಪಿ ಪಣ ತೊಟ್ಟಿದೆ.
ಕಾಂಗ್ರೆಸ್ ಕ್ಷೇತ್ರ ಉಳಿಸಿಕೊಳ್ಳಬೇಕು
ಚಿಂಚೋಳಿ ಮತ್ತು ಕುಂದಗೋಳ ಕ್ಷೇತ್ರದ ಉಪ ಚುನಾವಣೆ ಕಾಂಗ್ರೆಸ್ಗೆ ಪ್ರತಿಷ್ಠೆಯ ಪ್ರಶ್ನೆ. ಎರಡೂ ಕ್ಷೇತ್ರದಲ್ಲಿ ಪಕ್ಷದ ಶಾಸಕರಿದ್ದರು. ಆದ್ದರಿಂದ, ಉಪ ಚುನಾವಣೆಯಲ್ಲಿ ಗೆದ್ದು ಕ್ಷೇತ್ರವನ್ನು ಉಳಿಸಿಕೊಳ್ಳಬೇಕಾಗಿದೆ.