ಏ.2ರಿಂದ ಬೆಂಗಳೂರಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ
ಬೆಂಗಳೂರು, ಮಾ. 12 : ಕಾಂಗ್ರೆಸ್ ಆಡಳಿತವಿರುದ ಕರ್ನಾಟಕದಲ್ಲಿ ಬಿಜೆಪಿ ಮೂರು ದಿನಗಳ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಸಲು ತೀರ್ಮಾನಿಸಿದೆ. ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ಈ ಸಭೆ ನಡೆಯಲಿದ್ದು, ಸಭೆಯ ಎರಡನೇ ದಿನ ಬೃಹತ್ ಸಮಾವೇಶವನ್ನು ಆಯೋಜನೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ.
ನವದೆಹಲಿಯಲ್ಲಿ ಬುಧವಾರ ಸಂಜೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಿತು. ಬೆಂಗಳೂರಿನಲ್ಲಿ ಏ.2ರಿಂದ ಮೂರು ದಿನಗಳ ಕಾಲ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಸಲು ಕೋರ್ ಕಮಿಟಿ ಸಭೆಯಲ್ಲಿ ನಿರ್ಧರಿಸಲಾಗಿದೆ. [ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ಅಮಿತ್ ಶಾ ಕರೆ]

ಕೋರ್ ಕಮಿಟಿ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕರ್ನಾಟಕ ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ, ಈ ಕಾರ್ಯಕಾರಿಣಿ ಸಭೆಯನ್ನು ಯಶಸ್ವಿಗೊಳಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಪಕ್ಷದ ರಾಷ್ಟ್ರೀಯ ಸಮಿ ತಿಯ ಮಾರ್ಗದರ್ಶನದಂತೆ ಕಾರ್ಯಕಾರಿಣಿಗೆ ಬೇಕಾದ ಎಲ್ಲ ಸಿದ್ಧತೆಗಳನ್ನೂ ಕೈಗೊಳ್ಳಲಾಗುತ್ತದೆ ಎಂದರು. [ಚಿತ್ರಗಳಲ್ಲಿ : ಬೆಂಗಳೂರಿನಲ್ಲಿ ಬಿಜೆಪಿ ಚಾಣಾಕ್ಷ ಅಮಿತ್ ಶಾ]
ನರೇಂದ್ರ ಮೋದಿ ಸಮಾವೇಶ : ಮೂರು ದಿನಗಳ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಸೇರಿದಂತೆ ಅನೇಕ ನಾಯಕರು ಪಾಲ್ಗೊಳ್ಳಲಿದ್ದಾರೆ. ಏಪ್ರಿಲ್ 2ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ಆಯೋಜಿಸಲು ತೀರ್ಮಾನಿಸಲಾಗಿದ್ದು, ಮೋದಿ ಮತ್ತು ಅಮಿತ್ ಶಾ ಕಾರ್ಯಕರ್ತರು ಹಾಗೂ ಜನರನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆ ಇದೆ.
ಸದಸ್ಯತ್ವ ಅಭಿಯಾನದ ಬಗ್ಗೆ ಚರ್ಚೆ : ಕರ್ನಾಟಕದಲ್ಲಿ ನಡೆಯುತ್ತಿರುವ ಬಿಜೆಪಿಯ ಸದಸ್ಯತ್ವ ಅಭಿಯಾನದ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. 1 ಕೋಟಿ ಸದಸ್ಯರನ್ನು ಸೇರಿಸಿಕೊಳ್ಳುವ ಗುರಿಯನ್ನು ಬಿಜೆಪಿ ಹೊಂದಿದ್ದು, ಪ್ರಸ್ತುತ 64 ಲಕ್ಷ ಸದಸ್ಯತ್ವ ನೋಂದಣಿ ಮಾಡಿಕೊಳ್ಳಲಾಗಿದೆ.
ಮಾರ್ಚ್ ಅಂತ್ಯದ ವೇಳೆಗೆ 1 ಕೋಟಿ ಸದಸ್ಯರನ್ನು ಸೇರಿಸಿಕೊಳ್ಳಬೇಕು ಎಂದು ಪಕ್ಷದ ರಾಜ್ಯ ಉಸ್ತುವಾರಿ ಕೆ.ಮುರಳೀಧರರಾವ್ ರಾಜ್ಯ ನಾಯಕರಿಗೆ ಸಭೆಯಲ್ಲಿ ಸಲಹೆ ನೀಡಿದ್ದಾರೆ. ಮಾರ್ಚ್ 13ರಿಂದ ಆರಂಭವಾಗುವ ರಾಜ್ಯ ಬಜೆಟ್ ಅಧಿವೇಶನದಲ್ಲಿ ಚರ್ಚಿಸಬೇಕಾದ ಅಂಶಗಳ ಬಗ್ಗೆಯೂ ಸಭೆಯಲ್ಲಿ ನಾಯಕರು ಚರ್ಚೆ ಮಾಡಿದ್ದಾರೆ.
ಕೋರ್ ಕಮಿಟಿ ಸಭೆಯಲ್ಲಿ ಪ್ರಹ್ಲಾದ್ ಜೋಶಿ, ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಅನಂತ್ ಕುಮಾರ್, ಡಿ.ವಿ.ಸದಾನಂದಗೌಡ, ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.












Click it and Unblock the Notifications