ಬಿಜೆಪಿ ಪರಿವರ್ತನಾ ಯಾತ್ರೆಗೆ ಬರುವ ರಾಷ್ಟ್ರೀಯ ನಾಯಕರ ಪಟ್ಟಿ
ಬೆಂಗಳೂರು, ನವೆಂಬರ್ 27 : ಕರ್ನಾಟಕ ಬಿಜೆಪಿಯ ನವ ಕರ್ನಾಟಕ ಪರಿವರ್ತನಾ ಯಾತ್ರೆ 17 ದಿನಗಳನ್ನು ಪೂರೈಸಿದೆ. ವಿಜಯಪುರ ಜಿಲ್ಲೆಯಲ್ಲಿ ಸೋಮವಾರದಿಂದ 18ನೇ ದಿನದ ಯಾತ್ರೆ ಆರಂಭವಾಗಿದೆ.
2018ರ ಚುನಾವಣೆಗೆ ಪ್ರಚಾರ ಆರಂಭಿಸಿರುವ ಬಿಜೆಪಿ, ಮೊದಲ ಹಂತದಲ್ಲಿ 6 ಜಿಲ್ಲೆಗಳ 50 ವಿಧಾನಸಭಾ ಕ್ಷೇತ್ರಗಳಲ್ಲಿ ಪರಿವರ್ತನಾ ಯಾತ್ರೆಯ ಸಮಾವೇಶಗಳನ್ನು ನಡೆಸಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಯಾತ್ರೆ ನಡೆಯುತ್ತಿದೆ.
ಪಕ್ಷದ ಚುನಾವಣಾ ಪ್ರಚಾರಕ್ಕೆ ರಾಷ್ಟ್ರೀಯ ನಾಯಕರು ಸಹ ಆಗಮಿಸಲಿದ್ದಾರೆ. ಕೇಂದ್ರ ಸಚಿವರಾದ ಅರುಣ್ ಜೇಟ್ಲಿ, ಸುಷ್ಮಾ ಸ್ವರಾಜ್ ಅವರು ಬೆಂಗಳೂರು ನಗರದಲ್ಲಿ ನಡೆಯುವ ಸಮಾವೇಶಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿನ ಸಮಾವೇಶದ ಜೊತೆಗೆ ಮೈಸೂರು, ಹುಬ್ಬಳ್ಳಿ, ಬೆಂಗಳೂರಿನಲ್ಲಿ ಬೃಹತ್ ಸಮಾವೇಶವನ್ನು ಪಕ್ಷ ಆಯೋಜನೆ ಮಾಡಿದೆ. ರಾಷ್ಟ್ರೀಯ ನಾಯಕರು ಈ ಸಮಾವೇಶದಲ್ಲಿ ಪಾಲ್ಗೊಂಡು ಪ್ರಚಾರ ನಡೆಸಲಿದ್ದಾರೆ. ಜನವರಿ 28ರಂದು ಬೆಂಗಳೂರಿನಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು ಪ್ರಧಾನಿ ನರೇಂದ್ರ ಮೋದಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಚಿತ್ರಗಳು: ರಾಜ್ಯದಲ್ಲಿ ಹೊಸ ಅಲೆ ಎಬ್ಬಿಸಲಿರುವ ಬಿಜೆಪಿಯ ಪರಿವರ್ತನಾ ಯಾತ್ರೆ

ಅರುಣ್ ಜೇಟ್ಲಿ ಆಗಮನ
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಡಿಸೆಂಬರ್ ತಿಂಗಳಿನಲ್ಲಿ ನಡೆಯುವ ಪರಿವರ್ತನಾ ಯಾತ್ರೆಯ ಸಮಾವೇಶದಲ್ಲಿ ಪಾಲ್ಗೊಳ್ಳಿದ್ದಾರೆ. ಬೆಂಗಳೂರು ನಗರದ ಎಲ್ಲಾ ಕ್ಷೇತ್ರಗಳನ್ನು ಸೇರಿಸಿ ಒಂದು ಸಮಾವೇಶ ನಡೆಸಲಾಗುತ್ತದೆ. ಅದನ್ನು ಉದ್ದೇಶಿಸಿ ಜೇಟ್ಲಿ ಭಾಷಣ ಮಾಡಲಿದ್ದಾರೆ.

ಸುಷ್ಮಾ ಸ್ವರಾಜ್ ಪ್ರಚಾರ
ಕೇಂದ್ರ ವಿದೇಶಾಂಗ ಸಚಿವ ಸುಷ್ಮಾ ಸ್ವರಾಜ್ ಅವರು, ಡಿಸೆಂಬರ್ 10, 17 ಮತ್ತು ಜನವರಿ 7ರಂದು ಕರ್ನಾಟಕಕ್ಕೆ ಆಗಮಿಸಲಿದ್ದು, ಪರಿವರ್ತನಾ ಯಾತ್ರೆ ಉದ್ದೇಶಿಸಿ ಮಾತನಾಡಲಿದ್ದಾರೆ.

ಯೋಗಿ ಆದಿತ್ಯನಾಥ್ ಪ್ರಚಾರ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕರ್ನಾಟಕಕ್ಕೆ ಆಗಮಿಸಿ ಪರಿವರ್ತನಾ ಯಾತ್ರೆ ಉದ್ದೇಶಿಸಿ ಮಾತನಾಡಲಿದ್ದಾರೆ. ಡಿಸೆಂಬರ್ 21ರಂದು ಹುಬ್ಬಳ್ಳಿಯಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ಅದಕ್ಕೆ ಯೋಗಿ ಆದಿತ್ಯನಾಥ್ ಆಗಮಿಸುತ್ತಾರೆ.

ನರೇಂದ್ರ ಮೋದಿ ಆಗಮನ
ಬಿಜೆಪಿಯ ನವ ಕರ್ನಾಟಕ ಪರಿವರ್ತನಾ ಯಾತ್ರೆಗೆ ರಾಷ್ಟ್ರಿಯ ಅಧ್ಯಕ್ಷ ಅಮಿತ್ ಶಾ ನವೆಂಬರ್ 2ರಂದು ಚಾಲನೆ ನೀಡಿದ್ದರು. ಯಾತ್ರೆಯ ಸಮಾರೋಪ ಸಮಾರಂಭ ಜನವರಿ 28ರಂದು ಬೆಂಗಳೂರಿನಲ್ಲಿ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಸಮಾವೇಶದಲ್ಲಿ ಭಾಷಣ ಮಾಡಲಿದ್ದಾರೆ.

16 ಕ್ಷೇತ್ರಗಳಲ್ಲಿ ಗೆಲ್ಲಬೇಕು
ಸೋಮವಾರ ಬೆಳಗಾವಿ ಜಲ್ಲೆಯ ಅಥಣಿಯಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ ನಡೆಯಿತು. ಸಮಾವೇಶದಲ್ಲಿ ಮಾತನಾಡಿದ ಯಡಿಯೂರಪ್ಪ, 'ಬೆಳಗಾವಿ ಜಿಲ್ಲೆಯಲ್ಲಿ ಇದು ಕೊನೆಯ ಯಾತ್ರೆ. ಜಿಲ್ಲೆಯ 18 ಕ್ಷೇತ್ರಗಳಲ್ಲಿ 16ರಲ್ಲಿ ಬಿಜೆಪಿ ಜಯಗಳಿಸಬೇಕು. ಅಂದಾಗ ಮಾತ್ರ 150 ಸೀಟುಗಳನ್ನು ರಾಜ್ಯದಲ್ಲಿ ಗೆಲ್ಲಿಸಿ, ಮುಂದೆ ಬಿಜಿಪಿ ಸರ್ಕಾರ ಆಡಳಿತಕ್ಕೆ ಬರಲು ಸಾಧ್ಯವಾಗುತ್ತದೆ' ಎಂದರು.












Click it and Unblock the Notifications