ಯಡಿಯೂರಪ್ಪ ಕರೆತರಲು ಬಿಜೆಪಿಯ ಶತ ಪ್ರಯತ್ನ!
ಬೆಂಗಳೂರು, ನ. 12 : ಮಾಜಿ ಸಿಎಂ ಮತ್ತು ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಬಿಜೆಪಿಗೆ ಮರಳಿ ಕರೆತರುವ ಅಂತಿಮ ಪ್ರಯತ್ನ ಆರಂಭವಾಗಿದೆ. ನರೇಂದ್ರ ಮೋದಿ ಅವರ ಸಮಾವೇಶಕ್ಕೂ ಮೊದಲು ಯಡಿಯೂರಪ್ಪ ಅವರನ್ನು ಕರೆತರಲು ಬಿಜೆಪಿ ನಾಯಕರು ಶತ ಪ್ರಯತ್ನ ನಡೆಸಿದ್ದಾರೆ. ಇನ್ನೊಂದು ಕಡೆ ಯಡಿಯೂರಪ್ಪ ಅವರ ಧರಣಿ ಮುಂದುವರೆದಿದೆ.
ನ.17ರಂದು ಬೆಂಗಳೂರಿನಲ್ಲಿ ನಡೆಯಲಿರುವ ನರೇಂದ್ರ ಮೋದಿ ಅವರ ಭಾರತ ಗೆಲ್ಲಿಸಿ ಸಮಾವೇಶಕ್ಕೂ ಮೊದಲೇ ಬಿ.ಎಸ್.ಯಡಿಯೂರಪ್ಪ ಅವರನ್ನು ಕರೆತರಲು ರಾಜ್ಯ ಬಿಜೆಪಿ ನಾಯಕರು ತುದಿಗಾಲಲ್ಲಿ ನಿಂತಿದ್ದಾರೆ. ಆದರೆ, ಸಿದ್ದರಾಮಯ್ಯ ಅವರ ಸರ್ಕಾರ ವಿರುದ್ಧ ಅಹೋರಾತ್ರಿ ಧರಣಿ ನಡೆಸುತ್ತಿರುವ ಯಡಿಯೂರಪ್ಪ ಮಾತುಕತೆಗೆ ಲಭ್ಯವಾಗುತ್ತಿಲ್ಲ.
ತಾವು ಬಿಜೆಪಿಗೆ ಮರಳುವುದಿಲ್ಲ, ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎಗೆ ಬೆಂಬಲ ನೀಡುವೆ ಎಂದು ಯಡಿಯೂರಪ್ಪ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಆದರೆ, ಅವರನ್ನು ಕರೆತರುವ ಪ್ರಯತ್ನವನ್ನು ಬಿಜೆಪಿ ನಾಯಕರು ಮುಂದುವರೆಸಿದ್ದಾರೆ. ರಾಜ್ಯ ಬಿಜೆಪಿಯ ಪ್ರಮುಖ ನಾಯಕರಾದ ಕೆ.ಎಸ್.ಈಶ್ವರಪ್ಪ, ಜಗದೀಶ್ ಶೆಟ್ಟರ್ ಮುಂತಾದವರು ಬಿಎಸ್ವೈ ಬಗ್ಗೆ ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ.
ಮಂಗಳವಾರ ಶಿವಮೊಗ್ಗದಲ್ಲಿ ಮಾತನಾಡಿರುವ ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್, ಯಡಿಯೂರಪ್ಪ ಅವರಿಗೆ ರಾಜ್ಯದಲ್ಲಿ ಒಳ್ಳೆಯ ವರ್ಚಸ್ಸು ಇದೆ. ಆದರೆ, ಅವರ ಜೊತೆಗಿರುವ ಕೆಲವು ಭಟ್ಟಂಗಿಗಳು ಅವರ ದಾರಿ ತಪ್ಪಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಯಡಿಯೂರಪ್ಪ ಕರೆತರುವ ಪ್ರಯತ್ನಗಳ ಕೆಲವು ಪ್ರಯತ್ನಗಳ ಮಾಹಿತಿ ಇಲ್ಲಿದೆ.

ಯಾವುದೇ ಷರತ್ತು ಇಲ್ಲ
ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬಿಜೆಪಿ ಸೇರುವ ವಿಚಾರದಲ್ಲಿ ಯಾವುದೇ ಷರತ್ತು ವಿಧಿಸಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಬಿಎಸ್ವೈ ಸೇರ್ಪಡೆ ವಿಚಾರದಲ್ಲಿ ರಾಜ್ಯದ ನಾಯಕರು ಒಂದೇ ನಿಲುವು ತಾಳಿದ್ದು, ಶೀಘ್ರವೇ ಅವರು ಬಿಜೆಪಿ ಸೇರಲಿದ್ದಾರೆ ಎಂದರು. ಯಡಿಯೂರಪ್ಪ ಸೇರಿ ಎಲ್ಲರಿಗೂ ಸದ್ಯ ತಪ್ಪಿನ ಅರಿವಾಗಿದೆ. ಒಂದಾಗಿ ಹೋದಾಗ ಮಾತ್ರ ಗೆಲುವು ಸಾಧ್ಯ ಎಂಬುದು ಮನವರಿಕೆಯಾಗಿದೆ ಅವರನ್ನು ಪಕ್ಷಕ್ಕೆ ಮರಳಿ ಕರೆತರಲಾಗುವುದು ಎಂದು ಹೇಳಿದ್ದಾರೆ.

ನಮೋ ಸಮಾವೇಶಕ್ಕೂ ಮೊದಲೇ ಬರ್ತಾರೆ
ದಾವಣಗೆರೆಯಲ್ಲಿ ಮಾತನಾಡಿರುವ ಮಾಜಿ ಉಪ ಮುಖ್ಯಮಂತ್ರಿ ಮತ್ತು ಯಡಿಯೂರಪ್ಪ ಅವರ ಆಪ್ತ ಗೆಳೆಯ ಕೆ.ಎಸ್.ಈಶ್ವರಪ್ಪ ನ. 17ರಂದು ನಡೆಯಲಿರುವ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಸಮಾವೇಶಕ್ಕೂ ಮುನ್ನವೇ ಕೆಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬಿಜೆಪಿಗೆ ಸೇರ್ಪಡೆಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಯಡಿಯೂರಪ್ಪ ಬಿಜೆಪಿಗೆ ಮರಳುವ ಬಗ್ಗೆ ಯಾವುದೇ ಅಡ್ಡಿಯಿಲ್ಲ. ಅವರ ಆಗಮನದಿಂದ ಪಕ್ಷಕ್ಕೆ ಮತ್ತಷ್ಟು ಬಲ ಬರುತ್ತದೆ ಎಂಬುದನ್ನು ಈಗಾಗಲೇ ರಾಷ್ಟ್ರ ನಾಯಕರಿಗೆ ಸ್ಪಷ್ಟಪಡಿಸಿದ್ದೇವೆ ಎಂದರು.

ಶಿವಪ್ಪ ಪತ್ರ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಪಕ್ಷಕ್ಕೆ ಕರೆತರುವಂತೆ ವಿಧಾನ ಪಡರಿಷತ್ ಸದಸ್ಯ ಬಿ.ಬಿ.ಶಿವಪ್ಪ ಬಿಜೆಪಿ ರಾಷ್ಟಾಧ್ಯಕ್ಷ ರಾಜನಾಥ್ ಸಿಂಗ್ ಅವರಿಗೆ ಭಾನುವಾರ ಪತ್ರ ಬರೆದಿದ್ದಾರೆ. ಲೋಕಸಭೆ ಚುನಾವಣೆಯೊಳಗೆ ಅವರನ್ನು ಪಕ್ಷಕ್ಕೆ ಕರೆತರುವ ಕುರಿತು ನಿರ್ಣಯ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ಭಟ್ಟಂಗಿಗಳ ಕುತಂತ್ರ
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜ್ಯದಲ್ಲಿ ಸಾಕಷ್ಟು ವರ್ಚಸ್ಸಿದೆ. ರಾಜ್ಯದ ಅಭಿವೃದ್ಧಿಗಾಗಿಯೂ ಅವರು ಸಾಕಷ್ಟು ಕೆಲಸ ಮಾಡಿದ್ದಾರೆ. ಆದರೆ, ಅವರ ಜೊತೆಗಿರುವ ಭಟ್ಟಂಗಿಗಳಿಂದ ಅವರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಯಡಿಯೂರಪ್ಪ ಅವರನ್ನು ಪಕ್ಷಕ್ಕೆ ಮರಳಿ ಕರೆತರುವ ಬಗ್ಗೆ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.

ಯಡಿಯೂರಪ್ಪ ಮಾತ್ರ ಧರಣಿಯಲ್ಲಿ
ಬಿಜೆಪಿಗೆ ಮರಳುವ ಪ್ರಶ್ನೆಯೇ ಇಲ್ಲ ಎಂದು ಹೇಳಿರುವ ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಿದ್ದರಾಮಯ್ಯ ಸರ್ಕಾರ ಜಾರಿಗೆ ತಂದಿರುವ ಶಾದಿ ಭಾಗ್ಯ ಯೋಜನೆಯನ್ನು ಎಲ್ಲಾ ವರ್ಗಗಳಿಗೂ ವಿಸ್ತರಣೆ ಮಾಡಬೇಕು ಎಂದು ಆಗ್ರಹಿಸಿ 13 ದಿನಗಳಿಂದ ಆಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಬಿಜೆಪಿ ನಾಯಕರು ಅವರನ್ನು ಭೇಟಿ ಮಾಡಲು ಧರಣಿ ಮುಗಿಸಯುವ ತನಕ ಕಾಯಬೇಕಾಗಿದೆ. ಆದರೆ.ನ.23ರ ವರೆಗೆ ಧರಣಿ ಮುಂದುವರೆಸುವುದಾಗಿ ಯಡಿಯೂರಪ್ಪ ಈಗಾಗಲೇ ಘೋಷಿಸಿದ್ದಾರೆ.

ಮೋದಿ ಬಂದಾಗ ಚರ್ಚೆ ನಡೆಯುತ್ತಾ?
ಬೆಂಗಳೂರಿಗೆ ನ.17ರಂದು ಪಕ್ಷದ ಪ್ರಧಾನಿ ಅಭ್ಯರ್ಥಿ ಜೊತೆಗೆ ಬಿಜೆಪಪಿ ರಾಷ್ಟ್ರಾಧ್ಯಕ್ಷ ರಾಜನಾಥ್ ಸಿಂಗ್ ಸಹ ಆಗಮಿಸಲಿದ್ದಾರೆ. ಅಂದು ರಾಜ್ಯ ಬಿಜೆಪಿ ನಾಯಕರು ಯಡಿಯೂರಪ್ಪ ವಿಚಾರದ ಕುರಿತು ಅವರೊಂದಿಗೆ ಚರ್ಚೆ ನಡೆಸುವ ಸಾಧ್ಯತೆಯೂ ದಟ್ಟವಾಗಿದೆ. ಮೋದಿ ಸಮಾವೇಶಕ್ಕೂ ಮೊದಲು ಅಥವ ನಂತರ ಯಡಿಯೂರಪ್ಪ ಅವರನ್ನು ಪಕ್ಷಕ್ಕೆ ಕರೆತರಲು ಬಿಜೆಪಿ ನಾಯಕರು ಪ್ರಯತ್ನ ನಡೆಸಿರುವುದಂತೂ ಸತ್ಯ.












Click it and Unblock the Notifications