40 ಪರ್ಸೆಂಟ್ ಕಮಿಷನ್: ಗುತ್ತಿಗೆದಾರರಿಗೆ ಕುಮಾರಸ್ವಾಮಿ ಕೊಟ್ಟ ಟಿಪ್ಸ್ ಏನು?
ಬೆಂಗಳೂರು, ಆಗಸ್ಟ್ 25: ಪ್ರಧಾನಮಂತ್ರಿ ನರೇಂದ್ರ ಮೋದಿ ಆದಿಯಾಗಿ ಬಿಜೆಪಿಯಲ್ಲಿ ಯಾರಿಗೂ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಹಕ್ಕು ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಜೆಡಿಎಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ಬೀದಿಗೆ ಇಳಿಯುವಂತೆ ಗುತ್ತಿಗೆದಾರರಿಗೆ ಕಿವಿಮಾತು ಹೇಳಿದ್ದಾರೆ. ನೀವು ಸರ್ಕಾರ ಪರ್ಸೆಂಟೇಜ್ ಯಾಕೆ ಕೊಡುತ್ತೀರಿ. ಕಮಿಷನ್ ಕೇಳಿದರೆ ಕಾಮಗಾರಿ ಮಾಡುವುದಿಲ್ಲ ಎಂದು ಹೇಳಿರಿ. ಒಂದು ವರ್ಷ ಕೆಲಸ ನಿಲ್ಲಿಸಿ, ಆಗ ತನ್ನಿಂದ ತಾನೇ ಎಲ್ಲವೂ ಸರಿ ಆಗುತ್ತದೆ ಎಂದಿದ್ದಾರೆ.
40 ಪರ್ಸೆಂಟ್ ಕಮೀಷನ್ ಬಗ್ಗೆ ಕೆಲವು ಗುತ್ತಿಗೆದಾರರು ಆರೋಪ ಮಾಡಿದ್ದಾರೆ. ಯಾವುದಾದರೂ ಸಾಕ್ಷಿ ಇದ್ದರೆ ತನಿಖೆ ನಡೆಸುವುದಾಗಿ ಸರ್ಕಾರವು ಹೇಳುತ್ತಿದೆ. ಈಗ ತನಿಖೆಗೆ ಕೊಟ್ಟರೆ ನಾವು ಸಾಕ್ಷಿ ಕೊಡುತ್ತೇವೆ ಎಂದು ಗುತ್ತಿಗೆದಾರರು ಹೇಳುತ್ತಾರೆ. ಇದರಿಂದ ಪ್ರಯೋಜನ ಆಗುವುದಿಲ್ಲ. ಟೆಂಡರ್ ನಡೆಸುವ ವೇಳೆ ಗುತ್ತಿಗೆದಾರರು ಭಾಗವಹಿಸುವುದನ್ನು ಬಿಟ್ಟು ಸರ್ಕಾರಕ್ಕೆ ಬಿಸಿ ಮುಟ್ಟಿಸಿರಿ. ಶೇ.40 ಪರ್ಸಂಟ್ ವಿರುದ್ಧ ಬೀದಿಗೆ ಇಳಿಯಿರಿ. ಜನರ ಮುಂದೆ ಈ ಸಂಬಂಧ ದಾಖಲೆಗಳನ್ನು ಇಡಿ. ಸುಖಾಸುಮ್ಮನೆ ಹೇಳಿಕೆಗಳಿಂದ ಯಾವುದೇ ಪ್ರಯೋಜನ ಆಗುವುದಿಲ್ಲ ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿ ಸರ್ಕಾರದ ಬದ್ಧತೆ ಪ್ರಶ್ನಿಸಿದ ಎಚ್ ಡಿಕೆ
ಎರಡು ಬಾರಿ ನಾವು ಮುಖ್ಯಮಂತ್ರಿ ಆಗಿದ್ದಾಗಲೂ ಈ ಪರ್ಸಂಟೇಜ್ ಇರಲಿಲ್ಲ. ನಾನು ಲಾಟರಿ ನಿಷೇಧ ಮಾಡಿದಾಗಿದ್ದ ಕಿಂಗ್ ಪಿನ್, ಮಂತ್ರಿಗಳು ಎಷ್ಟೆಷ್ಟು ಆಫರ್ ಕೊಟ್ಟರು ಎನ್ನುವುದು ಗೊತ್ತಿದೆ. ಆ ಆಫರ್ ಕೊಟ್ಟವರು ಇನ್ನೂ ಬದುಕಿದ್ದಾರೆ. ಆದರೂ ಎಲ್ಲವನ್ನು ಧಿಕ್ಕರಿಸಿ ಲಾಟರಿ ನಿಷೇಧ ಮಾಡಿದ್ದೆ. ಅಂತಹ ಬದ್ಧತೆ ಈ ಸರ್ಕಾರಕ್ಕೆ ಇದೆಯಾ ಎಂದು ಎಚ್ ಡಿಕೆ ಪ್ರಶ್ನಿಸಿದರು.
ನನ್ನ ಕಾಲದಲ್ಲಿ ನಾನಂತೂ ಇದಕ್ಕೆ ಅವಕಾಶ ಕೊಡಲಿಲ್ಲ. ನಮ್ಮ ಮೆಟ್ರೋ ಯೋಜನೆಯ ಮೊದಲ ಹಂತ ಬೈಯ್ಯಪ್ಪನಹಳ್ಳಿ-ಮಹಾತ್ಮ ಗಾಂಧಿ ರಸ್ತೆ ನಡುವಿನ ಯೋಜನೆಗೆ ಒಪ್ಪಿಗೆ ನೀಡಿದಾಗ ಅದರ ಗುತ್ತಿಗೆದಾರರು ಯಾರು ಎಂಬುದೇ ನನಗೆ ಗೊತ್ತಿರಲಿಲ್ಲ. ಈ ಯೋಜನೆ ಕಾಲಮಿತಿಯಲ್ಲಿ ಮುಗಿಯಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದ್ದೆನು. ಮುಖ್ಯಮಂತ್ರಿ ಕಚೇರಿ ಅಷ್ಟು ಪಾರದರ್ಶಕವಾಗಿತ್ತು. ಮೈತ್ರಿ ಸರ್ಕಾರದ ಅವಧಿಯಲ್ಲಿ ಕೂಡ ಕಮಿಷನ್ ವ್ಯವಹಾರ ನಡೆದಿದೆ. ಆದರೆ ನನ್ನ ಕಚೇರಿಯಲ್ಲಿ ನಡೆದಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಗುತ್ತಿಗೆದಾರರಿಗೆ ಟಿಪ್ಸ್ ಕೊಟ್ಟ ಕುಮಾರಸ್ವಾಮಿ
ರಾಜ್ಯದಲ್ಲಿ ಕೋಟ್ಯಂತರ ರೂಪಾಯಿ ಹಣ ಮಾಡಿರುವ ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿ ಎಷ್ಟು ಕಳಂಕಿತರನ್ನು ಜೈಲಿಗೆ ಕಳುಹಿಸಿದ್ದಾರೆ ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಅದೇ ರೀತಿ ಎಷ್ಟು ಜನರಿಗೆ ನ್ಯಾಯ ಕೊಡಿಸಿದ್ದಾರೆ. ನ್ಯಾಯಾಂಗ ತನಿಖೆಯಲ್ಲಿ ಏನಾದರೂ ಸಿಕ್ಕಿತೇ? ಇಲ್ಲ. ಅರ್ಕಾವತಿ ತನಿಖೆ ನಡೆಸಿದ ನ್ಯಾ. ಕೆಂಪಣ್ಣ ಆಯೋಗ ಮಾಡಿದ ತನಿಖೆಯಲ್ಲಿ ಏನು ಸಿಕ್ಕಿತು? ಏನೇ ಸಾಕ್ಷಿ ಕೊಟ್ಟರೂ ಯಾವುದೇ ನ್ಯಾಯ ಸಿಗುವುದಿಲ್ಲ. ಸುಮ್ಮನೆ ಗುತ್ತಿಗೆದಾರರು ಇದೆಲ್ಲವನ್ನು ಬಿಟ್ಟು ಕೆಲಸ ನಿಲ್ಲಿಸಲಿ. ಆಮೇಲೆ ಎಲ್ಲವೂ ದಾರಿಗೆ ಬರುತ್ತದೆ ಎಂದು ಗುತ್ತಿಗೆದಾರರಿಗೆ ಕುಮಾರಸ್ವಾಮಿ ಕಿವಿಮಾತು ಹೇಳಿದ್ದಾರೆ.

ಮುನಿರತ್ನಗೆ ಮಾನ-ಮರ್ಯಾದೆ ಇದೆಯಾ ಎಂದ ಎಚ್ ಡಿಕೆ
ರಾಜ್ಯದ ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಣ್ಣ ವಿರುದ್ಧ ಸಚಿವ ಮುನಿರತ್ನ ಮಾನನಷ್ಟ ಮೊಕದ್ದಮೆ ಹಾಕುವ ವಿಚಾರಕ್ಕೆ ಎಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದರು. ಮಾನನಷ್ಟು ಮೊಕದ್ದಮೆ ಹೂಡುವುದಕ್ಕೆ ಮಾನ-ಮರ್ಯಾದೆ ಎಂಬುದು ಯಾರಿಗಿದೆ?, ಅದರ ಬಗ್ಗೆ ಚರ್ಚೆ ಬೇಡ. ಮುನಿರತ್ನ ಕೂಡ ಶಾಸಕರಾಗುವುದಕ್ಕೂ ಮೊದಲು ಗುತ್ತಿಗೆದಾರರೇ ಆಗಿದ್ದರು. ಆ ಸಂದರ್ಭದಲ್ಲಿ ಗಂಗಾನಗರದಲ್ಲಿ ಗೋಡೆ ಕುಸಿದು ಒಂದು ಮಗು ಮೃತಪಟ್ಟಿತ್ತು. ಆಗ ಮುನಿರತ್ನ ಅವರೇ ಗುತ್ತಿಗೆದಾರ ಆಗಿದ್ದರು. ಅವರು ಏನೇನು ಮಾಡಿದ್ದಾರೆ ಎಂಬುದು ಗೊತ್ತಿದೆ ಎಂದು ಕುಮಾರಸ್ವಾಮಿ ಕಿಡಿ ಕಾರಿದರು.
ಪ್ರಧಾನಿ ನರೇಂದ್ರ ಮೋದಿಯಿಂದ ಹಿಡಿದು ಯಾರಿಗೂ ಕಮಿಷನ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ತನಿಖೆ, ಒತ್ತಾಯ, ಹೇಳಿಕೆ, ಪ್ರತಿ ಹೇಳಿಕೆ ಇವೆಲ್ಲಾ ಸಮಯ ವ್ಯರ್ಥ ಆಗುವುದಕ್ಕೆ ಅಷ್ಟೇ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್ ಪಕ್ಷಕ್ಕೆ ಅಧಿಕಾರ ಕೊಡಿ ಕಮಿಷನ್ ವ್ಯವಹಾರ ಕಿತ್ತು ಹಾಕುವೆ
ಸಿದ್ದರಾಮಯ್ಯ ಬಂದು ಪರ್ಸಂಟೇಜ್ ವ್ಯವಹಾರವನ್ನು ಕಡಿಮೆ ಮಾಡಲಿಲ್ಲ. ಮೈತ್ರಿ ಸರ್ಕಾರ ಇದ್ದಾಗ ಯಾರೆಲ್ಲ ಏನು ಮಾಡಿದರು ಅಂತಾ ಬಿಡಿಸಿ ಹೇಳಿದರೆ ದೊಡ್ಡ ಕತೆ ಆಗುತ್ತದೆ. ಮೊದಲು ವಿಧಾನಸೌಧದಿಂದಲೇ ಸ್ವಚ್ಚ ಮಾಡಬೇಕು. ನನ್ನ ಪಕ್ಷಕ್ಕೆ ಐದು ವರ್ಷ ಸ್ವಾತಂತ್ರ ಸರ್ಕಾರ ಕೊಡಿ, ಕಮಿಷನ್ ವ್ಯವಹಾರವನ್ನು ಬುಡ ಸಮೇತ ಕಿತ್ತು ಹಾಕುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು. ಅಲ್ಲದೇ ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಎಲ್ಲ ವಿಷಯಗಳನ್ನೂ ಪ್ರಸ್ತಾಪ ಮಾಡುತ್ತೇನೆ. ಜನರ ಪರವಾಗಿ ಎಲ್ಲ ವಿಷಯಗಳನ್ನೂ ಹೇಳುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದರು.












Click it and Unblock the Notifications