ಯಡಿಯೂರಪ್ಪ ಭವಿಷ್ಯ ಚುನಾವಣೆ ಫಲಿತಾಂಶದ ಮೇಲೆ ನಿಂತಿದೆ!
Recommended Video
ಬೆಂಗಳೂರು, ಮೇ 20 : 2019ರ ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಕರ್ನಾಟಕದ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆಯಾಗುವ ನಿರೀಕ್ಷೆ ಇದೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಭವಿಷ್ಯವೂ ಫಲಿತಾಂಶದ ಮೇಲೆ ನಿಂತಿದೆ.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ಭಾನುವಾರ ಪ್ರಕಟವಾದ ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ಕರ್ನಾಟಕದಲ್ಲಿ ಬಿಜೆಪಿ 20+ ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಹೇಳಿವೆ. 'ಬಿಜೆಪಿ 22 ಸ್ಥಾನಗಳಲ್ಲಿ ಜಯಗಳಿಸಲಿದೆ' ಎಂದು ಯಡಿಯೂರಪ್ಪ ಹಲವು ಬಾರಿ ಹೇಳಿದ್ದಾರೆ.
76 ವರ್ಷದ ಯಡಿಯೂರಪ್ಪ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮುಂದುವರೆಯುವುದು ಚುನಾವಣಾ ಫಲಿತಾಂಶದ ಮೇಲೆ ನಿರ್ಧಾರವಾಗಲಿದೆ. ಚುನಾವಣಾ ಫಲಿತಾಂಶ ಪ್ರಕಟವಾದ ಕೆಲವೇ ತಿಂಗಳಿನಲ್ಲಿ ಅಧ್ಯಕ್ಷರ ಬದಲಾವಣೆಯಾಗುವ ನಿರೀಕ್ಷೆ ಇದೆ.
'ಪಕ್ಷದ ಹೈಕಮಾಂಡ್ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ತೀರ್ಮಾನವನ್ನು ಕೈಗೊಳ್ಳಲಿದೆ. ಲೋಕಸಭಾ ಚುನಾವಣೆಯಲ್ಲಿ ಪಕ್ಷ ಎಷ್ಟು ಸ್ಥಾನಗಳಿಸಲಿದೆ? ಎಂಬುದರ ಮೇಲೆ ಇದು ತೀರ್ಮಾನವಾಗಲಿದೆ' ಎಂದು ಪಕ್ಷದ ನಾಯಕರೊಬ್ಬರು ಹೇಳಿದ್ದಾರೆ.

ಬಿಜೆಪಿಯಲ್ಲಿ ಹೊಸ ಸೂತ್ರ
ಅಮಿತ್ ಶಾ ಅವರು ಬಿಜೆಪಿ ಅಧ್ಯಕ್ಷರಾದ ಬಳಿಕ ಹೊಸ ನಿಯಮವನ್ನು ಜಾರಿಗೆ ತರಲಾಗಿದೆ. 75 ವರ್ಷ ದಾಟಿದ ನಾಯಕರಿಗೆ ವಿಶ್ರಾಂತಿ ನೀಡಿ ಹೊಸಬರನ್ನು ಆ ಜಾಗಕ್ಕೆ ತಂದು ಕೂರಿಸುವುದು. ಯಡಿಯೂರಪ್ಪ ಅವರು ಫೆಬ್ರವರಿ ತಿಂಗಳಿನಲ್ಲಿಯೇ 76 ವರ್ಷಕ್ಕೆ ಕಾಲಿಟ್ಟಿದ್ದಾರೆ.

ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ನಿರೀಕ್ಷೆ
ಬಿ.ಎಸ್.ಯಡಿಯೂರಪ್ಪ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ನಿರೀಕ್ಷೆಯಲ್ಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ಬಂದು, ಚಿಂಚೋಳಿ ಮತ್ತು ಕುಂದಗೋಳ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗುವ ಬಗ್ಗೆ ಸುದ್ದಿಗಳು ಹಬ್ಬಿವೆ.

ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ
ಕರ್ನಾಟಕದ ಪ್ರಬಲ ಲಿಂಗಾಯತ ಸಮುದಾಯದ ನಾಯಕ ಬಿ.ಎಸ್.ಯಡಿಯೂರಪ್ಪ. ಕೆಲವು ದಿನಗಳ ಹಿಂದೆ ಮಾತನಾಡಿದ್ದ ಅವರು, 'ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಮಾಡಿದರು ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡಲು ಸಿದ್ಧ' ಎಂದು ಹೇಳಿದ್ದರು.

ಬಿಜೆಪಿ ರಾಜ್ಯಾಧ್ಯಕ್ಷರು ಯಾರು?
ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಾದರೆ ಮುಂದಿನ ಅಧ್ಯಕ್ಷರು ಯಾರು? ಎಂಬ ಪ್ರಶ್ನೆ ಹುಟ್ಟುತ್ತದೆ. ಆರ್.ಅಶೋಕ, ಸಿ.ಟಿ.ರವಿ (ಒಕ್ಕಲಿಗ), ಅರವಿಂದ ಲಿಂಬಾವಳಿ, ಬಿ.ಎಲ್.ಸಂತೋಷ್, ನಳೀನ್ ಕುಮಾರ್ ಕಟೀಲ್ ಅವರ ಹೆಸರುಗಳು ರಾಜ್ಯಾಧ್ಯಕ್ಷರ ಹುದ್ದೆಗೆ ಕೇಳಿ ಬರುತ್ತಿವೆ.












Click it and Unblock the Notifications