ಮೂರು ಚುನಾವಣೆಗಳತ್ತ ಕರ್ನಾಟಕ ಬಿಜೆಪಿ ನಾಯಕರ ಚಿತ್ತ
ಬೆಂಗಳೂರು, ಮೇ 20 : ಸರ್ಕಾರ ಪತನಗೊಂಡ ಬಳಿಕ ಬಿಜೆಪಿ ನಾಯಕರು ಮೂರು ಚುನಾವಣೆಗಳತ್ತ ಗಮನಹರಿಸಿದ್ದಾರೆ. ಜಯನಗರ, ರಾಮನಗರ, ರಾಜರಾಜೇಶ್ವರಿ ನಗರದಲ್ಲಿ ಚುನಾವಣೆ ಇನ್ನೂ ನಡೆಯಬೇಕಿದೆ.
ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮೂರು ಚುನಾವಣೆಗಳನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಜಯನಗರ ಮತ್ತು ರಾಮನಗರದಲ್ಲಿ ಉತ್ತಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಈಗಾಗಲೇ ಸಿದ್ಧತೆ ಆರಂಭಿಸಿದ್ದಾರೆ.
ಜಯನಗರದಲ್ಲಿ ಜೂನ್ 11ರಂದು ಚುನಾವಣೆ ನಡೆಯಲಿದೆ. ಆರ್.ಆರ್.ನಗರದಲ್ಲಿ ಮೇ 28ರಂದು ಚುನಾವಣೆ ನಡೆಯಲಿದೆ. ಆರ್.ಆರ್.ನಗರ ಕ್ಷೇತ್ರಕ್ಕೆ ತುಳಸಿ ಮುನಿರಾಜು ಗೌಡ ಅವರು ಬಿಜೆಪಿ ಅಭ್ಯರ್ಥಿ.

ಜಯನಗರ ಮತ್ತು ಆರ್.ಆರ್.ನಗರ ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಚರ್ಚೆ ನಡೆದಿದೆ. ಒಂದು ವೇಳೆ ಮೈತ್ರಿ ಮಾಡಿಕೊಂಡರೆ ಬಿಜೆಪಿ ಅಭ್ಯರ್ಥಿ ಗೆಲ್ಲುವುದು ಕಷ್ಟವಾಗಲಿದೆ ಎಂಬುದು ಸದ್ಯದ ಚರ್ಚೆ.
ಬುಧವಾರ ಬಿ.ಎಸ್.ಯಡಿಯೂರಪ್ಪ ಅವರು ಈ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ಸಭೆ ಕರೆದಿದ್ದಾರೆ. ಈ ಸಭೆಯ ಬಳಿಕ ಜಯನಗರಕ್ಕೆ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.
ರಾಮನಗರ : ಎಚ್.ಡಿ.ಕುಮಾರಸ್ವಾಮಿ ಅವರು ಚನ್ನಪಟ್ಟಣ ಮತ್ತು ರಾಮನಗರದಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದರು. ಎರಡೂ ಕ್ಷೇತ್ರಗಳಲ್ಲಿ ಜಯಗಳಿಸಿದ್ದರು. ಅವರು ಚನ್ನಪಟ್ಟಣ ಕ್ಷೇತ್ರವನ್ನು ಉಳಿಸಿಕೊಂಡಿದ್ದು, ರಾಮನಗರ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಮನಗರದಲ್ಲಿ ಯಾರನ್ನು ಬಿಜೆಪಿ ಅಭ್ಯರ್ಥಿ ಮಾಡಬೇಕು? ಎಂಬ ಚರ್ಚೆ ನಡೆದಿದೆ. ಚನ್ನಪಟ್ಟಣದಲ್ಲಿ ಸೋತಿರುವ ಸಿ.ಪಿ.ಯೋಗೇಶ್ವರ ಅವರನ್ನು ಅಭ್ಯರ್ಥಿಯಾಗಿ ಮಾಡಬಹುದು ಎಂಬ ಸುದ್ದಿಗಳು ಹರಿದಾಡುತ್ತಿವೆ.












Click it and Unblock the Notifications