ಫೆಬ್ರವರಿ ಮೊದಲ ವಾರದಲ್ಲಿ ಶಿವಮೊಗ್ಗಕ್ಕೆ ಮೋದಿ
ಶಿವಮೊಗ್ಗ, ಜ.16- ಯಡಿಯೂರಪ್ಪ ಅವರು ಬಿಜೆಪಿಯ ಪ್ರಧಾನಿ ಆಕಾಂಕ್ಷಿ ನರೇಂದ್ರ ಮೋದಿಗೆ ಮತ್ತಷ್ಟು ಹತ್ತಿರವಾಗುತ್ತಿದ್ದಾರೆ. ಬಿಜೆಪಿಗೆ ಮರಳಿದ ಮೇಲೆ ಪಕ್ಷದಲ್ಲಿ ಎಲ್ಲವೂ ತಮ್ಮ ಹಿಡಿತದಲ್ಲಿದೆ ಎಂಬುದನ್ನು ಸಾಬೀತು ಪಡಿಸುವುದರ ಜತೆಗೆ ಮೋದಿ ಅವರನ್ನು ಶಿವಮೊಗ್ಗಕ್ಕೆ ಕರೆತಂದು ತಮ್ಮ ವಾಪಸಾತಿಗೆ ಅಧಿಕೃತ ಮುದ್ರೆಯೊತ್ತಲು ಯಡಿಯೂರಪ್ಪ ಮುಂದಾಗಿದ್ದಾರೆ.

2-3 ದಿನಗಳ ಕಾಲ ರಾಜ್ಯದಲ್ಲಿ ವಿವಿಧೆಡೆ ಸಮಾವೇಶಗಳನ್ನು ಹಮ್ಮಿಕೊಳ್ಳಲು ಮೋದಿ ಹಸಿರು ನಿಶಾನೆ ತೋರಿದ್ದಾರೆ ಎನ್ನಲಾಗಿದೆ. ಶಿವಮೊಗ್ಗಕ್ಕೆ ಮೋದಿ ಆಗಮಿಸಿದರೆ ಇದೇ ಮೊದಲ ಬಾರಿಗೆ ಪ್ರಧಾನಿ ಅಭ್ಯರ್ಥಿಯೊಬ್ಬರು ಚುನಾವಣೆ ನಿಮಿತ್ತ ಶಿವಮೊಗ್ಗಕ್ಕೆ ಬಂದಂತಾಗುತ್ತದೆ.
ರಾಜ್ಯ ಬಿಜೆಪಿಯ ಉನ್ನತ ಮೂಲಗಳ ಪ್ರಕಾರ ಮೋದಿ ಅವರು ಶಿವಮೊಗ್ಗ, ಮಂಗಳೂರು, ಬೆಂಗಳೂರಿಗೆ ಮತ್ತೊಮ್ಮೆ, ಹುಬ್ಬಳ್ಳಿ ಮುಂತಾದೆಡೆ ಸಮಾವೇಶಗಳನ್ನು ನಡೆಸುವ ಸಾಧ್ಯತೆಗಳಿವೆ. ಈ ಸಂದರ್ಭದಲ್ಲಿ ಒಟ್ಟು 10-12 ಸಭೆಗಳನ್ನು ಆಯೋಜಿಸಲಾಗುವುದು ಎಂದು ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.
ರಾಜ್ಯದಲ್ಲಿ ಮೋದಿ ಪರ ಅಲೆ ಇದೆ. ಶೇ. 70ರಷ್ಟು ಮಂದಿ ಮೋದಿ ಪ್ರಧಾನಿಯಾಗುವುದನ್ನು ಬಯಸಿದ್ದಾರೆ. ಕಾಂಗ್ರೆಸ್ಸಿನಿಂದ ಪ್ರಧಾನಿ ಅಭ್ಯರ್ಥಿ ಘೋಷಣೆಯೂ ಸಾಧ್ಯವಾಗುತ್ತಿಲ್ಲ. ದೇಶದ ಅಸ್ತಿತ್ವಕ್ಕೇ ಧಕ್ಕೆ ಬಂದಿರುವ ಈ ಸಂದರ್ಭದಲ್ಲಿ ಮೋದಿಯನ್ನು ಪ್ರಧಾನ ಮಂತ್ರಿಯನ್ನಾಗಿ ಮಾಡಬೇಕಿದೆ. ರಾಜ್ಯದಲ್ಲಿ ಕನಿಷ್ಠ 20 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಯಡಿಯೂರಪ್ಪ ಅದಮ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.












Click it and Unblock the Notifications