ಚಿತ್ರಗಳಲ್ಲಿ : ಬೆಂಗಳೂರಿನಲ್ಲಿ ಬಿಜೆಪಿ ಚಾಣಾಕ್ಷ ಅಮಿತ್ ಶಾ
ಬೆಂಗಳೂರು, ಜ. 3 : ಅರ್ಕಾವತಿ ಬಡಾವಣೆ ಡಿ ನೋಟಿಫಿಕೇಶನ್ ಪ್ರಕರಣ, ಮಠಗಳ ಮೇಲೆ ನಿಯಂತ್ರಣ, ಗೋಹತ್ಯೆ ವಿಧೇಯಕ ವಾಪಸ್ ಮುಂತಾದ ವಿಚಾರಗಳಲ್ಲಿ ಕರ್ನಾಟಕ ಸರ್ಕಾರದ ವಿರುದ್ಧದ ಹೋರಾಟವನ್ನು ತೀವ್ರಗೊಳಿಸಲು ಅಮಿತ್ ಶಾ ಅಧ್ಯಕ್ಷತೆಯಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಒಂದು ದಿನದ ಭೇಟಿಯಾಗಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಬೆಂಗಳೂರಿಗೆ ಆಗಮಿಸಿದ್ದರು. ಶುಕ್ರವಾರ ರಾತ್ರಿ ನಗರಕ್ಕೆ ಆಗಮಿಸಿದ್ದ ಅವರು ಶನಿವಾರ ಪಕ್ಷದ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ನಡೆಸಿದರು, ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದರು, ರಾಜ್ಯದ ಸಂಸದರು ಮತ್ತು ನಾಯಕರೊಂದಿಗೆ ಸಭೆ ನಡೆಸಿದರು. [ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ಅಮಿತ್ ಶಾ ಕರೆ]
ಮಲ್ಲೇಶ್ವರಂ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅಮಿತ್ ಶಾ, ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಾಣ ಮಾಡೋಣ ಎಂದು ಕರೆ ನೀಡಿದರು. 1 ಕೋಟಿ ಸದಸ್ಯತ್ವವನ್ನು ಮಾಡಿಸುವ ಉದ್ದೇಶವನ್ನು ಕರ್ನಾಟಕ ಬಿಜೆಪಿ ಹೊಂದಿದೆ ಎಂದು ಹೇಳಿದರು. ಚಿತ್ರಗಳಲ್ಲಿ ನೋಡಿ ಅಮಿತ್ ಶಾ ಬೆಂಗಳೂರು ಭೇಟಿ

ಬೆಂಗಳೂರಿಗೆ ಬಂದ ಬಿಜೆಪಿ ಚಾಣಾಕ್ಷ
ಬಿಜೆಪಿಯ ಚಾಣಾಕ್ಷ ಎಂದೇ ಕರೆಸಿಕೊಳ್ಳುವ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಶುಕ್ರವಾರ ರಾತ್ರಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಮುಂತಾದವರು ಅವರಿಗೆ ಸ್ವಾಗತ ಕೋರಿದರು.

ಕುಮಾರಕೃಪಾದಲ್ಲಿ ವಾಸ್ತವ್ಯ
ಕುಮಾರಕೃಪಾ ವಸತಿ ಗೃಹಕ್ಕೆ ಆಗಮಿಸಿದ ಅಮಿತ್ ಶಾ ಅವರನ್ನು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬರಮಾಡಿಕೊಂಡರು.

ಮಲ್ಲೇಶ್ವರಂ ಪಕ್ಷದ ಕಚೇರಿಗೆ ಭೇಟಿ
ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಬೆಂಗಳೂರಿಗೆ ಬಂದಿದ್ದ ಅಮಿತ್ ಶಾ, ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಗೆ ಶನಿವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಆಗಮಿಸಿದರು.

ಅಮಿತ್ ಶಾ ಸ್ವಾಗತಿಸಿದ ನಾಯಕರು
ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ರಾಜ್ಯ ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ, ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ಕೇಂದ್ರ ಸಚಿವ ಅನಂತ ಕುಮಾರ್ ಮುಂತಾದವರು ಅಮಿತ್ ಶಾ ಅವರನ್ನು ಸ್ವಾಗತಿಸಿದರು.

ಕಾರ್ಯಕರ್ತರಿಗೆ ವಂದಿಸಿದ ಅಮಿತ್ ಶಾ
ಅಮಿತ್ ಶಾ ಆಗಮನದ ಹಿನ್ನಲೆಯಲ್ಲಿ ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಗೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ನೂರಾರು ಕಾರ್ಯಕರ್ತರು ಅಮಿತ್ ಶಾ ಅವರನ್ನು ನೋಡಲು ಆಗಮಿಸಿದ್ದರು. ಕಚೇರಿಯ ಬಳಿ ಬಂದ ಅವರು ಕಾರ್ಯಕರ್ತರತ್ತ ಕೈಬೀಸಿ ಕಚೇರಿಗೆ ತೆರಳಿದರು.

ಸದಸ್ಯತ್ವ ಅಭಿಯಾನಕ್ಕೆ ಚಾಲನೆ
ಬಿಜೆಪಿ ಸದಸ್ಯತ್ವ ಅಭಿಯಾನ ರಥಕ್ಕೆ ಅಮಿತ್ ಶಾ ಇಂದು ಪಕ್ಷದ ಕಚೇರಿ ಮುಂಭಾಗದಲ್ಲಿ ಚಾಲನೆ ನೀಡಿದರು. ಎಲ್ಇಡಿ ಪರದೆ ಆಡಿಯೋ, ವಿಡಿಯೋ ಸೇರಿದಂತೆ ಆಧುನಿಕ ತಂತ್ರಜ್ಞಾನವುಳ್ಳ ಒಟ್ಟು 5 ರಥ ರಾಜ್ಯಾದ್ಯಂತ ಸಂಚಾರ ನಡೆಸಲಿದೆ.

ಕೋರ್ ಕಮಿಟಿ ಸಭೆಯಲ್ಲಿ ಭಾಗಿ
ಶನಿವಾರ ಬೆಳಗ್ಗೆ 10.30ರ ಸುಮಾರಿಗೆ ಮಲ್ಲೇಶ್ವರಂ ಪಕ್ಷದ ಕಚೇರಿಯಲ್ಲಿ ನಡೆದ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಅಮಿತ್ ಶಾ ಅವರು ಪಾಲ್ಗೊಂಡಿದ್ದರು.

ಪತ್ರಿಕಾಗೋಷ್ಠಿ ನಡೆಸಿದ ಅಮಿತ್ ಶಾ
ಬಿಜೆಪಿ ಕೋರ್ ಕಮಿಟಿ ಸಭೆಯ ಬಳಿ ಅಮಿತ್ ಶಾ ಪತ್ರಿಕಾಗೋಷ್ಠಿ ನಡೆಸಿದರು. ಕರ್ನಾಟಕವನ್ನು ಕಾಂಗ್ರೆಸ್ ಮುಕ್ತವಾಗಿಸಲು ಕಾರ್ಯತಂತ್ರ ರೂಪಿಸಲು ಬೆಂಗಳೂರಿಗೆ ಆಗಮಿಸಿದ್ದೆ ಎಂದರು.

ಸಂಸದರೊಂದಿಗೆ ಸಭೆ
ಪತ್ರಿಕಾಗೋಷ್ಠಿ ನಡೆಸಿದ ಬಳಿಕ ಅಮಿತ್ ಶಾ ಅವರು ರಾಜ್ಯದ ಬಿಜೆಪಿ ಸಂಸದರ ಜೊತೆ ಸಭೆ ನಡೆಸಿದರು.

ವಿವಿಧ ನಾಯಕರು ಪಾಲ್ಗೊಂಡಿದ್ದರು
ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ರಾಜ್ಯ ಬಿಜೆಪಿ ಉಸ್ತುವಾರಿ ಮುರಳಿಧರ್ ರಾವ್, ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಅನಂತ್ಕುಮಾರ್, ಡಿ.ವಿ.ಸದಾನಂದಗೌಡ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಉಪಮುಖ್ಯಮಂತ್ರಿಗಳಾದ ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್ ಮುಂತಾದವರು ಅಮಿತ್ ಶಾ ಅವರೊಂದಿಗೆ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದರು.












Click it and Unblock the Notifications