Jagadish Shettar Should Not Win: ಜಗದೀಶ್ ಶೆಟ್ಟರ್ ಗೆಲ್ಲಬಾರದು: ಖಡಕ್ ಸೂಚನೆ ಕೊಟ್ಟ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ
ಬಿಜೆಪಿ ತೊರೆದು ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮೇಲೆ ಪಕ್ಷದ ವರಿಷ್ಠರು ಕೆಂಡಾಮಂಡಲವಾಗಿದ್ದಾರೆ. ಪಕ್ಷವನ್ನು ತೊರೆದ ಮುಖಂಡನಿಗೆ ಪಾಠ ಕಲಿಸಲು ಪಣ ತೊಟ್ಟಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಶೆಟ್ಟರ್ ಗೆ ಖೆಡ್ಡಾ ತೋಡಲು ಮುಂದಾಗಿದ್ದಾರೆ. ಹುಬ್ಬಳ್ಳಿಯಲ್ಲಿ ವರಿಷ್ಠರ ರಹಸ್ಯ ಸಭೆ ನಡೆಸಿ ಯಾವುದೇ ಕಾರಣಕ್ಕೂ ಶೆಟ್ಟರ್ ಅವರು ಗೆಲ್ಲದಂತೆ ನೋಡಿಕೊಳ್ಳಿ ಎಂದು ವರಿಷ್ಠರಿಗೆ ಖಡಕ್ಕಾಗಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯದ ಬಿಜೆಪಿಯಲ್ಲಿ ಭಾರಿ ಅಲ್ಲೋಲ ಕಲ್ಲೋಲವಾಗುತ್ತಿದೆ. ಪಕ್ಷದ ಹಲವು ಹಿರಿಯ ನಾಯಕರಿಗೆ ಈ ಬಾರಿ ಟಿಕೆಟ್ ಕೈ ತಪ್ಪಿರುವುದು ಸಮಸ್ಯೆಗೆ ಮೂಲ ಕಾರಣ. ಹೊಸಬರಿಗೆ ಮಣೆಹಾಕಲು ಬಿಜೆಪಿ ಬಯಸಿದ್ದರು ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ವಿಫಲವಾಗಿದೆ. ಯಾವುದೇ ಮಾತುಕತೆಗೂ ಬಗ್ಗದ ಜಗದೀಶ್ ಶೆಟ್ಟರ್ ಬಿಜೆಪಿಯಿಂದ ಹೊರಬಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.

ಸದ್ಯ ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಹುಬ್ಬಳ್ಳಿಯ ಅರವಿಂದ್ ಬೆಲ್ಲದ್ ನಿವಾಸದಲ್ಲಿ ವರಿಷ್ಠರ ಜೊತೆ ಸಭೆ ನಡೆಸಿದ್ದಾರೆ. ರಾಜ್ಯದ ರಾಜಕೀಯ ವಿದ್ಯಮಾನಗಳ ಬಗ್ಗೆ, ಪಕ್ಷದ ಮುಂದಿನ ಚಟುವಟಿಕೆಗಳ ಬಗ್ಗೆ ನಾಯಕರೊಂದಿಗೆ ಸುದೀರ್ಘವಾಗಿ ಚರ್ಚೆ ಮಾಡಿದ್ದಾರೆ. ಶೆಟ್ಟರ್ ವಿಚಾರದಲ್ಲಿ ಬಿಜೆಪಿಗೆ ಭಾರಿ ಹಿನ್ನಡೆಯಾಗಿದ್ದು, ಅವರನ್ನು ಗೆಲ್ಲಲು ಬಿಡಬಾರದು ಎಂದು ನಡ್ಡಾ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ, ಸಚಿವ ಗೋವಿಂದ್ ಕಾರಜೋಳ, ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ, ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್, ಜಿಲ್ಲಾಧ್ಯಕ್ಷ ಸಂಜಯ್ ಕಪಟ್ಕರ್ ಈ ಸಭೆಯಲ್ಲಿ ಹಾಜರಿದ್ದರು. ಹುಬ್ಬಳ್ಳಿ ಸೆಂಟ್ರಲ್ ಮತಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪರವಾಗಿ ನಿಂತಿದ್ದರೆ, ಬಿಜೆಪಿ ಮಹೇಶ್ ಟೆಂಗಿನಕಾಯಿ ಅವರನ್ನು ಕಣಕ್ಕಿಳಿಸಿದೆ.
ಶೆಟ್ಟರ್ ಕಾಲಿಗೆ ಬಿದ್ದ ಮಹೇಶ್ ಟೆಂಗಿನಕಾಯಿ
ಜಗದೀಶ್ ಶೆಟ್ಟರ್ ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಅವರ ರಾಜಕೀಯ ಗುರು ಎಂದೇ ಹೇಳಲಾಗುತ್ತದೆ. ಬಿಎಲ್ ಸಂತೋಷ್ ಜೊತೆ ಉತ್ತಮ ಒಡನಾಟ ಹೊಂದಿದ್ದರಿಂದ ಅವರಿಗೆ ಬಿಜೆಪಿ ಟಿಕೆಟ್ ಸಿಕ್ಕಿದೆ ಎಂದು ಶೆಟ್ಟರ್ ಆರೋಪ ಮಾಡಿದ್ದರು. ನಾಮಪತ್ರ ಸಲ್ಲಿಕೆ ವೇಳೆ ಇಬ್ಬರೂ ಮುಖಾಮುಖಿಯಾದ ಘಟನೆ ನಡೆದಿದೆ.

ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಕೆ ವೇಳೆ ಗುರು-ಶಿಷ್ಯರ ಮುಖಾಮುಖಿಯಾಗಿದೆ. ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಜಗದೀಶ್ ಶೆಟ್ಟರ್ ಅವರ ಕಾಲಿಗ ಬಿದ್ದು ನಮಸ್ಕರಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಅವರು, ನಾಮಪತ್ರ ಸಲ್ಲಿಕೆಗೆ ಮುನ್ನ ನನ್ನ ಗುರು ಜಗದೀಶ್ ಶೆಟ್ಟರ್ ಆಶೀರ್ವಾದ ಪಡೆದುಕೊಂಡಿದ್ದೇನೆ. ಅವರ ಆಶಿರ್ವಾದ ಸಿಕ್ಕಿರೋದ್ರಿಂದ ಗೆಲುವು ಸಿಗುವ ವಿಶ್ವಾಸವಿದೆ ಎಂದರು. ಜಗದೀಶ್ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ಗೆ ಹೋಗಿದ್ದಾರೆ, ಅವರಿಗೆ ಬಿಜೆಪಿಯ ಮತಗಳು ಬೀಳಲ್ಲ, ನಾನು ಗೆಲ್ಲುತ್ತೇನೆ ಎಂದರು.
ಜನರ ಆಶೀರ್ವಾದ ಇದೆ ಎಂದ ಶೆಟ್ಟರ್
ನಾಮಪತ್ರ ಸಲ್ಲಿಕೆ ನಂತರ ಮಾತನಾಡಿದ ಜಗದೀಶ್ ಶೆಟ್ಟರ್, ಕನಿಷ್ಠ 50 ಸಾವಿರ ಮತಗಳ ಅಂತರದಲ್ಲಿ ಗೆಲ್ಲುತ್ತೇನೆ ಎಂದರು. ಮಹೇಶ್ ಟೆಂಗಿನಕಾಯಿಗೆ ಆಶೀರ್ವಾದ ಮಾಡಿದ ಬಗ್ಗೆ ಪ್ರತಿಕ್ರಿಯೆ ನೀಡಿ, ಶಿಷ್ಯನಿಗೆ ಆಶೀರ್ವಾದ ಮಾಡುವುದು ಗುರುವಿನ ಸಹಜ ಗುಣ ಆದರೆ ನನಗೆ ಜನರ ಆಶೀರ್ವಾದ ಇದೆ, ಬಿಜೆಪಿ ಟಿಕೆಟ್ ನಿರಾಕರಿಸಿದ್ದರಿಂದ ಕಾಂಗ್ರೆಸ್ನಿಂದ ಸ್ಪರ್ಧೆ ಮಾಡಿದ್ದೇನೆ ಎಂದರು. ಪಕ್ಷಾಂತರ ಮಾಡುವವರಿಗೆ ಜನತೆ ಪಾಠ ಕಲಿಸುತ್ತಾರೆ ಎನ್ನುವ ಜೆಪಿ ನಡ್ಡಾ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಎಲ್ಲದಕ್ಕೂ ಕಾಲವೇ ಉತ್ತರ ಕೊಡುತ್ತದೆ ಎಂದರು.












Click it and Unblock the Notifications