ರೈತರಿಗೆ ಎಕರೆಗೆ ₹25,000 ಪರಿಹಾರ: ಬೃಹತ್ ಹೋರಾಟಕ್ಕೆ ಬಿಜೆಪಿ ನಿರ್ಧಾರ
ರಾಜ್ಯ ಬಿಜೆಪಿ ನಾಯಕರು ತುಂಗಭದ್ರಾ ಜಲಾನಯನ ಪ್ರದೇಶದ ನಾಲ್ಕು ಜಿಲ್ಲೆಗಳ ರೈತರ ಬೆನ್ನಿಗೆ ನಿಂತಿದ್ದಾರೆ. ತುಂಗಭದ್ರಾ ರೈತರ ಎರಡನೇ ಬೆಳೆಗೆ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಬೃಹತ್ ಹೋರಾಟಕ್ಕೆ ನಿರ್ಧರಿಸಿದ್ದಾರೆ. ತುಂಗಭದ್ರಾ ಜಲಾನಯನ ಪ್ರದೇಶದ ನಾಲ್ಕು ಜಿಲ್ಲೆಗಳ ರೈತರಿಗೆ ಎರಡನೇ ಬೆಳೆಗೆ ನೀರು ಒದಗಿಸುವಲ್ಲಿ ರಾಜ್ಯ ಸರ್ಕಾರದ ವೈಫಲ್ಯವನ್ನು ಚರ್ಚಿಸಲು ಇಂದು ಬಿಜೆಪಿ ಪಕ್ಷದ ರಾಜ್ಯ ಕಾರ್ಯಾಲಯದಲ್ಲಿ ಪ್ರಮುಖರ ಸಭೆ ನಡೆದಿದೆ.
ಸಭೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾಹಿತಿ ನೀಡಿದ್ದಾರೆ. ಜಲಾಶಯದ ಕ್ರಸ್ಟ್ ಗೇಟ್ಗಳ ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳನ್ನು ಸರ್ಕಾರವು ಸಮಯೋಚಿತವಾಗಿ ಕೈಗೊಳ್ಳದ ಕಾರಣ, ಇಂದು ರೈತರು ಎರಡನೇ ಬೆಳೆಗೆ ನೀರಿನ ಅಭಾವದಿಂದ ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ಇದು ರಾಜ್ಯ ಸರ್ಕಾರದ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಅನ್ನದಾತರ ನೆರವಿಗೆ ಎಂದೂ ಬಾರದ ಈ ರಾಜ್ಯ ಸರ್ಕಾರವು ಅತಿವೃಷ್ಟಿ, ಅನಾವೃಷ್ಟಿ, ಬೆಳೆನಾಶ, ಸಾಲಬಾಧೆ, ಸೇರಿದಂತೆ ರೈತರ ಬಗ್ಗೆ ಕನಿಷ್ಠ ಕಾಳಜಿಯನ್ನೂ ತೋರಿಸಲಿಲ್ಲ. ಈಗ ತುಂಗಭದ್ರಾ ಪ್ರದೇಶದ ರೈತರ ಎರಡನೇ ಬೆಳೆಯ ಈ ಗಂಭೀರ ಸಮಸ್ಯೆಗೂ ರಾಜ್ಯ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ರೈತರ ಹಿತರಕ್ಷಣೆಗಾಗಿ ಹಾಗೂ ಅವರ ಧ್ವನಿಯಾಗಿ ಹೋರಾಟ ರೂಪಿಸಲು ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಗಿದೆ. ಹೋರಾಟದ ಮುಂದಿನ ರೂಪರೇಷೆಗಳ ಕುರಿತೂ ಚರ್ಚಿಸಲಾಗಿದೆ ಎಂದಿದ್ದಾರೆ.
ತುಂಗಾಭದ್ರ ಜಲಾಶಯದಿಂದ ಬಳ್ಳಾರಿ, ವಿಜಯನಗರ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳ ರೈತರಿಗೆ 2ನೇ ಬೆಳೆಗೆ ನೀರು ಕೊಡಲು ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗದಿದ್ದರೆ, ಎಕರೆಗೆ 25 ಸಾವಿರ ಪರಿಹಾರ ನೀಡಬೇಕು. ಜಲಾಶಯದ 32 ಕ್ರೆಸ್ಟ್ ಗೇಟ್ಗಳನ್ನು ಹೊಸದಾಗಿ ಅಳವಡಿಸಲು ಅನುದಾನ ಬಿಡುಗಡೆಗೊಳಿಸದಿರುವುದು ಖಂಡನೀಯ. ಕೂಡಲೇ ನಾಲೆಗಳ ದುರಸ್ತಿಗಾಗಿ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಜಲಸಂಪನ್ಮೂಲ ಸಚಿವರಾಗಿ ಯಾವುದೇ ನೀರಾವರಿ ಯೋಜನೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಮಹದಾಯಿಯಿಂದ ಒಂದು ಹನಿ ನೀರನ್ನು ಕರ್ನಾಟಕಕ್ಕೆ ನೀಡಲ್ಲ ಅಂತ ಗೋವಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹೇಳುವಾಗ ಡಿ. ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಎಲ್ಲಿ ಹೋಗಿದ್ದರು? ಈಗ ʼನೀರಿನ ಹೆಜ್ಜೆʼ ಪುಸ್ತಕ ಬಿಡುಗಡೆ ಮಾಡಿರುವುದು ಹಾಸ್ಯಾಸ್ಪದ. ಅವೈಜ್ಞಾನಿಕ ಭರವಸೆಗಳಿಂದ ಬೊಕ್ಕಸ ಬರಿದು ಮಾಡಿಕೊಂಡಿರುವ ಸಿಎಂ ಸಿದ್ದರಾಮಯ್ಯನವರಿಗೆ ಅಭಿವೃದ್ಧಿಗೆ ಅನುದಾನ ನೀಡಲು ಸಾಧ್ಯವಾಗ್ತಿಲ್ಲ. ಕೇಂದ್ರದ ಮೇಲೆ ಬೊಟ್ಟು ಮಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.












Click it and Unblock the Notifications