ಕಲ್ಯಾಣ ಕರ್ನಾಟಕದಲ್ಲಿ ಸಂಪುಟ ಸಭೆ ಮಾಡಿದರೆ ಅಭಿವೃದ್ಧಿ ಆಗುತ್ತಾ?: ಪ್ರಣಾಳಿಕೆ ಜ್ಞಾಪಿಸಿದ ಆರ್.ಅಶೋಕ್
ಬೆಂಗಳೂರು, ಸೆಪ್ಟಂಬರ್ 17: ಕರ್ನಾಟಕ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆ ಇಂದು ಮಂಗಳವಾರ ಸೆ.17ರಂದು ಕಲ್ಯಾಣ ಕರ್ನಾಟಕದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ಮಾಹಿತಿ ನೀಡಿದ್ದಾರೆ. ಈ ಸಂಪುಟ ಸಭೆ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಆ ಭಾಗದಲ್ಲಿ ಸಭೆ ಮಾಡಿದರೆ ಅಭಿವೃದ್ಧಿ ಆಗುವುದಿಲ್ಲ. ನೀವು ಮಾತು ಕೊಟ್ಟಿದ್ದೇನು?, ಭರವಸೆ ಈಡೇರಿಸಿದ್ದೀರಾ? ಎಂದು ಪ್ರಣಾಳಿಕೆಯಲ್ಲಿ ಕಲ್ಯಾಣ ಕರ್ನಾಟಕದ ಘೋಷಣೆಯ ಅಂಶಗಳ ಪಟ್ಟಿ ಮುಂದಿಟ್ಟಿದ್ದಾರೆ.
ಕಲ್ಯಾಣ ಕರ್ನಾಟಕದಲ್ಲಿ ಸಂಪುಟ ಸಭೆ ಮಾಡಿ ಮಾಡಿ ಬಿಟ್ಟಿ ಪ್ರಚಾರ ಗಿಟ್ಟಿಸಿಕೊಳ್ಳಲು ಹೊರಟಿರುವ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ಆ ಭಾಗದ ಜನತೆಯ ಕಣ್ಣಿಗೆ ಮಣ್ಣೆರಚಿ ದ್ರೋಹ ಮಾಡುತ್ತಿದೆ ಎಂದು ಆರ್.ಅಶೋಕ ಮಂಗಳವಾರ ಟ್ವಿಟ್ (ಎಕ್ಸ್) ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಕಲ್ಯಾಣ ಕರ್ನಾಟಕದಲ್ಲಿ ಸಂಪುಟ ಸಭೆ ಮಾಡಿದ ಮಾತ್ರಕ್ಕೆ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಆಗಿಬಿಡುತ್ತಾ?. ನಿಮಗೆ ಕಿಂಚಿತ್ತಾದರೂ ಆತ್ಮಸಾಕ್ಷಿ ಇದ್ದರೆ ಸಂಪುಟ ಸಭೆ ಮಾಡುವ ಮುನ್ನ ಕಲ್ಯಾಣ ಕರ್ನಾಟಕದ ಜನತೆಯ ಈ ಪ್ರಶ್ನೆಗಳಿಗೆ ಉತ್ತರಿಸಿ ಎಂದು ಒಂದಷ್ಟು ಪ್ರಶ್ನೆ ಕೇಳುವ ಜೊತೆಗೆ, ಪ್ರಣಾಳಿಕೆ ಅಂಶ ತೆರದಿಟ್ಟಿದ್ದಾರೆ.
ಕಲ್ಯಾಣ ಕರ್ನಾಟಕದ ಜನರ ಪ್ರಶ್ನೆಗಳಿವು
* ನೀವು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5,000 ಕೋಟಿ ರೂಪಾಯಿ ನೀಡುವುದಾಗಿ ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದೀರಿ. ಕಳೆದ ಎರಡು ಬಜೆಟ್ ನಲ್ಲಿ ಕಲ್ಯಾಣ ಕರ್ನಾಟಕಕ್ಕೆ ಒಟ್ಟು ಎಷ್ಟು ಹಣ ಮೀಸಲಿಟ್ಟಿದ್ದೀರಿ?. ಅದರಲ್ಲಿ ಬಿಡುಗಡೆಯಾದ ಅನುದಾನ ಎಷ್ಟು? ಖರ್ಚಾಗಿದ್ದು ಎಷ್ಟು? ಎಂದು ಲೆಕ್ಕ ಕೊಡಿ.

* ಬಳ್ಳಾರಿಯಲ್ಲಿ 5,000 ಕೋಟಿ ರೂಪಾಯಿ ಮೊತ್ತದ ಅಪೇರಲ್ ಪಾರ್ಕ್ ಸ್ಥಾಪಿಸುವ ಭರವಸೆ ಏನಾಯ್ತು? ರಾಹುಲ್ ಗಾಂಧಿಯವರು ತಮ್ಮ ಪ್ರಚಾರ ಭಾಷಣದಲ್ಲಿ ಬಳ್ಳಾರಿಯನ್ನು ಜೀನ್ಸ್ ರಾಜಧಾನಿ ಮಾಡುವ ಭರವಸೆ ನೀಡಿದ್ದರು. ಅದು ಏನಾಯ್ತು? ಎಂದು ಬಿಜೆಪಿ ಪ್ರಶ್ನೆ ಮಾಡಿದೆ.
* ಕಲ್ಯಾಣ ಕರ್ನಾಟಕದಲ್ಲಿ 41 ವಿಧಾನಸಭಾ ಕ್ಷೇತ್ರಗಳಲ್ಲಿ ಕನಿಷ್ಠ 100 ಪಿಯುಸಿ ಕಾಲೇಜು, ಒಂದು ಮಹಿಳಾ ಪದವಿ ಕಾಲೇಜು ಸ್ಥಾಪಿಸುವ ಭರವಸೆ ನೀಡಿದ್ದೀರಿ. ಅದರಲ್ಲಿ ಒಂದಾದರೂ ಸ್ಥಾಪನೆಯಾಗಿದೆಯಾ?.
* ಕಲ್ಯಾಣ ಕರ್ನಾಟಕದ ಪ್ರತಿ ಹೋಬಳಿಯಲ್ಲಿ ಒಂದು ಬಾಬಾ ಸಾಹೇಬ್ ಅಂಬೇಡ್ಕರ್ ಇಂಗ್ಲಿಷ್ ಮಾಧ್ಯಮ ಶಾಲೆ ಸ್ಥಾಪಿಸುವ ಭರವಸೆ ನೀಡಲಾಗಿತ್ತು. ಕನಿಷ್ಠ ಪಕ್ಷ ಒಂದಾದರೂ ನಿಮ್ಮಿಂದ ಸ್ಥಾಪನೆ ಆಗಿದೆಯಾ?
* ಎರಡು ವರ್ಷದೊಳಗೆ ಕಲ್ಯಾಣ ಕರ್ನಾಟಕದ 2,500 ಹೊಸ ಶಾಲಾ ಕೊಠಡಿ ನಿರ್ಮಾಣ ಹಾಗೂ ಖಾಲಿ ಇರುವ ಎಲ್ಲ ಶಿಕ್ಷಕ ಹುದ್ದೆಗಳ ನೇಮಕಾತಿ ಮಾಡುತ್ತೇವೆ ಎನ್ನುವ ಭರವಸೆ ಈಡೇರುವುದು ಯಾವಾಗ?. ಕಳೆದ 15 ತಿಂಗಳಲ್ಲಿ ಎಷ್ಟು ಶಿಕ್ಷಕರ ನೇಮಕಾತಿ ಆಗಿದೆ? ಎಷ್ಟು ಶಾಲಾ ಕೊಠಡಿಗಳ ನಿರ್ಮಾಣ ಆಗಿದೆ? ಎಂದು ಆರ್.ಅಶೋಕ್ ಕೇಳಿದ್ದಾರೆ.
* ಕಲ್ಯಾಣ ಕರ್ನಾಟಕದ ಗ್ರಾಮ ಪಂಚಾಯಿತಿಗಳಿಗೆ ತಲಾ ಒಂದು ಕೋಟಿ ರೂಪಾಯಿ ಅನುದಾನ ನೀಡುವ ಭರವಸೆ ಈಡೇರಿದೆಯೇ?
* ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಸರ್ಕಾರ ಕಲ್ಯಾಣ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಕಾಂಗ್ರೆಸ್ ಸರ್ಕಾರಕ್ಕೆ ಕಿಂಚಿತ್ತಾದರೂ ನೈತಿಕತೆ ಇದ್ದರೆ ನಾಮಕಾವಸ್ತೆ ಸಂಪುಟ ಸಭೆ ಮಾಡುವ ಮೊದಲು ಕಲ್ಯಾಣ ಕರ್ನಾಟಕದ ಜನತೆಯ ಈ ಪ್ರಶ್ನೆಗಳಿಗೆ ಉತ್ತರ ನೀಡಬೇಕು ಎಂದು ಅವರು ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದರು.
ಕಾಂಗ್ರೆಸ್ನದ್ದು ಪೊಳ್ಳು ಭರವಸೆ
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮೀಸಲಿಟ್ಟ ಹಣ ಹಾಗೇ ಉಳಿದಿದೆಯೇ ಅಥವಾ ತೆಲಂಗಾಣ ಚುನಾವಣಾ ಪ್ರಚಾರಕ್ಕೆ "ಗುಳೇ" ಹೋಯಿತೋ?. ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳು ಕೇವಲ ಪೊಳ್ಳು ಭರವಸೆಗಳಾಗಿ ಉಳಿದಿದೆಯೂ ಅಥವಾ ಕಿಂಚಿತ್ತಾದರೂ ಅನುಷ್ಠಾನ ಆಗಿದೆಯೂ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರೇ ತಮ್ಮ 'ಚೀಫ್' ಮೊಹಮ್ಮದ್ ಜೊಬಿಯರ್ ಮೂಲಕ ಫ್ಯಾಕ್ಟ್ ಚೆಕ್ ಮಾಡಿಸಿ ಕಲ್ಯಾಣ ಕರ್ನಾಟಕದ ಜನತೆಗೆ ವಾಸ್ತವಾಂಶ ತಿಳಿಸಬೇಕು ಎಂದು ಅವರು ಹೇಳಿದರು.
ಜನರ ಅಪಾರ ನಿರೀಕ್ಷೆ
ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕದಲ್ಲಿ ಸಂಪುಟ ಸಭೆ ನಡೆಸುತ್ತಿದ್ದು, ಇದರ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಈ ಭಾಗಕ್ಕೆ ಹಲವು ಕೊಡುಗೆ ಘೋಷಣೆ ಮಾಡುವ ಸಾಧ್ಯತೆ ಇದೆ. ಈ ಭಾಗದ ಜನರಿಗೆ ಭಿವೃದ್ಧಿ ಕುರಿತು ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗಾಗಲೇ ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಇಂದು ಸಿಎಂ, ಡಿಸಿಎಂ, ಸಚಿವರು, ಶಾಸಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.












Click it and Unblock the Notifications