ರಾಜ್ಯ ಬಿಜೆಪಿ ಕೋರ್ ಕಮಿಟಿಯಲ್ಲಿ ಪ್ರಮುಖ ಬದಲಾವಣೆ
ಬೆಂಗಳೂರು, ಮಾರ್ಚ್ 25: ರಾಜ್ಯ ಬಿಜೆಪಿ ಕೋರ್ ಕಮಿಟಿಯಲ್ಲಿ ಕೆಲವು ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ರಾಜ್ಯದ ಮೂವರೂ ಉಪ ಮುಖ್ಯಮಂತ್ರಿಗಳಿಗೆ ಕೋರ್ ಕಮಿಟಿಯಲ್ಲಿ ಸ್ಥಾನ ನೀಡಲಾಗಿದೆ. ಹಾಗೆಯೇ ಈ ಹಿಂದೆ ಸಮಿತಿಯಲ್ಲಿದ್ದ ಸಚಿವ ಅರವಿಂದ ಲಿಂಬಾವಳಿ, ಶಾಸಕ ಸಿಎಂ ಉದಾಸಿ ಅವರನ್ನು ಕೈಬಿಡಲಾಗಿದೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರನ್ನು ವಿಶೇಷ ಆಹ್ವಾನಿತರಾಗಿ ಸೇರ್ಪಡೆಯಾಗಿದ್ದಾರೆ. ಸಚಿವ ಶ್ರೀರಾಮುಲು, ಪಕ್ಷದ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ, ಉಪ ಮುಖ್ಯಮಂತ್ರಿಗಳಾದ ಡಾ. ಸಿಎನ್ ಅಶ್ವಥ್ ನಾರಾಯಣ್ ಮತ್ತು ಲಕ್ಷ್ಮಣ ಸವದಿ ಕೋರ್ ಕಮಿಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ರಾಜ್ಯದಲ್ಲಿ ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭೆ ಹಾಗೂ ಬೆಳಗಾವಿ ಲೋಕಸಭೆ ಕ್ಷೇತ್ರಗಳಿಗೆ ಮುಂದಿನ ತಿಂಗಳು ಉಪ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ಹೈಕಮಾಂಡ್ ಈ ಬದಲಾವಣೆ ಮಾಡಿದೆ.
ಕೋರ್ ಕಮಿಟಿಯಲ್ಲಿ ಪಕ್ಷದ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಮತ್ತು ಡಿವಿ ಸದಾನಂದಗೌಡ, ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ. ಸಿಎನ್ ಅಶ್ವಥ್ ನಾರಾಯಣ್ ಮತ್ತು ಲಕ್ಷ್ಮಣ ಸವದಿ, ಸಚಿವರಾದ ಜಗದೀಶ್ ಶೆಟ್ಟರ್, ಕೆ.ಎಸ್. ಈಶ್ವರಪ್ಪ, ಆರ್ ಅಶೋಕ್, ಶ್ರೀರಾಮುಲು, ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ, ರಾಜ್ಯ ಪ್ರಧಾನ ಕಾರ್ಯದರ್ಶಿ ಬಿಪಿ ಅರುಣ್ ಕುಮಾರ್ ಇದ್ದಾರೆ.
ಕರ್ನಾಟಕ ಬಿಜೆಪಿ ಕೋರ್ ಕಮಿಟಿ ಪುನಾರಚನೆ. ಹಲವು ಹೊಸ ನಾಯಕರ ಸೇರ್ಪಡೆ
— oneindiakannada (@OneindiaKannada) March 25, 2021
ಕೋರ್ ಕಮಿಟಿಯಿಂದ ಅರವಿಂದ ಲಿಂಬಾವಳಿ. ಸಿ. ಎಂ. ಉದಾಸಿ ಕೈ ಬಿಡಲಾಗಿದೆ
ಕೋರ್ ಕಮಿಟಿಗೆ ವಿಶೇಷ ಆಹ್ವಾನಿತರಾಗಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಸೇರ್ಪಡೆ
ಪಕ್ಷದ ಕೋರ್ ಕಮಿಟಿಯಲ್ಲಿ ಮೂವರು ಉಪಮುಖ್ಯಮಂತ್ರಿಗಳಿಗೂ ಸ್ಥಾನ #BJP #corecommittee pic.twitter.com/lRs7FohQM0
ವಿಶೇಷ ಆಹ್ವಾನಿತರಾಗಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ರಾಷ್ಟ್ರೀಯ ಉಪಾಧ್ಯಕ್ಷೆ ಡಿ.ಕೆ. ಅರುಣಾ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರನ್ನು ನೇಮಿಸಲಾಗಿದೆ.
Recommended Video
'ನನ್ನ ಪಕ್ಷ ವಹಿಸಿದ ಜವಾಬ್ದಾರಿಯನ್ನು ಪಾಲಿಸುವುದೇ ನನ್ನ ಪರಮೋಚ್ಚ ಗುರಿ. ಪಕ್ಷದ ಸಂಘಟನೆಯೇ ನನ್ನ ಧ್ಯೇಯ. ಈ ದಿಸೆಯಲ್ಲಿ ಬಿಜೆಪಿ ನನ್ನನ್ನು ಬಿಜೆಪಿ ಕೋರ್ ಕಮಿಟಿ ಸದಸ್ಯನನ್ನಾಗಿ ಆಯ್ಕೆ ಮಾಡಿದೆ. ಈ ಜವಾಬ್ದಾರಿಯನ್ನು ಶಿರಸಾವಹಿಸಿ ನಿಭಾಯಿಸುತ್ತೇನೆ' ಎಂದು ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.