ಶೋಭಾ ಕರಂದ್ಲಾಜೆಗೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ಕೈ ತಪ್ಪುತ್ತಾ? ಹೊಸ ಟಿಕೆಟ್ ಆಕಾಂಕ್ಷಿ ಯಾರು ಗೊತ್ತಾ?
ಚಿಕ್ಕಮಗಳೂರು, ನವೆಂಬರ್ 22: ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಗೆ ಈ ಬಾರಿಯ ಲೋಕಸಭಾ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಆದರೆ, ಹಾಲಿ ಸಂಸದರಿರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಮುಂದಿನ ಚುನಾವಣೆಗೆ ಟಿಕೆಟ್ ಗಾಗಿ ಕಮಲ ಪಾಳಯದಲ್ಲೇ ತೀವ್ರ ಪೈಪೋಟಿ ಶುರುವಾಗಿದೆ.
ಹೌದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿನಿಧಿಸುವ ಉಡುಪಿ-ಚಿಕ್ಕಮಗಳೂರು ಲೋಕಸಭೆ ಟಿಕೆಟ್ಗಾಗಿ ಮಾಜಿ ಸಚಿವ, ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಈಗಾಗಲೇ ಮಧ್ವರಾಜ್ ಪ್ರಚಾರ ಆರಂಭಿಸಿದ್ದು, ಟಿಕೆಟ್ ಸಿಗುವ ಭರವಸೆಯಲ್ಲಿದ್ದಾರೆ.

ಪ್ರಮೋದ್ ಮಧ್ವರಾಜ್ ಅವರು ಕಾಂಗ್ರೆಸ್ಗೆ ರಾಜೀನಾಮೆ ನೀಡಿ ಮೇ 2022 ರಲ್ಲಿ ಬಿಜೆಪಿ ಸೇರಿದರು. ಅವರು ಉಡುಪಿ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಪಡೆಯುವ ನಿರೀಕ್ಷೆಯಲ್ಲಿದ್ದರು ಆದರೆ ಪಕ್ಷವು ಯಶಪಾಲ್ ಸುವರ್ಣ ಅವರನ್ನು ಕಣಕ್ಕಿಳಿಸಿ ಗೆದ್ದಿತು. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಲ್ಲಿ ಒಬ್ಬರು ಎಂದು ಘೋಷಿಸಿದರು. ಅಂದಿನಿಂದ ಅವರು ತಮ್ಮ ಉಮೇದುವಾರಿಕೆಗಾಗಿ ಪ್ರಚಾರ ನಡೆಸುತ್ತಿದ್ದಾರೆ ಮತ್ತು ಪಕ್ಷದ ಹೈಕಮಾಂಡ್ ಮುಂದೆ ತಮ್ಮ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.
ಮಧ್ವರಾಜ್ ಕಳೆದ ಕೆಲವು ತಿಂಗಳಿಂದ ಚಿಕ್ಕಮಗಳೂರಿನಲ್ಲಿ ಮೊಕ್ಕಾಂ ಹೂಡಿ ಜನಸಂಪರ್ಕ ಕಾರ್ಯಕ್ರಮ ಆರಂಭಿಸಿದ್ದಾರೆ. ಉಡುಪಿ-ಚಿಕ್ಕಮಗಳೂರು ಲೋಕಸಭೆ ಟಿಕೆಟ್ ಆಕಾಂಕ್ಷಿಗಳಲ್ಲಿ ನಾನೂ ಒಬ್ಬ ಎಂದು ಹೇಳಿದ್ದು, ಯಾರು ಸ್ಪರ್ಧಿಸಬೇಕು ಎಂಬುದನ್ನು ಪಕ್ಷ ನಿರ್ಧರಿಸುತ್ತದೆ ಮತ್ತು ನಾನು ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ. ಒಂದು ವೇಳೆ ಕೊನೆ ಗಳಿಗೆಯಲ್ಲಿ ಟಿಕೆಟ್ ಸಿಕ್ಕರೆ ಕಷ್ಟವಾಗುತ್ತದೆ. ಹೀಗಾಗಿ ಬೂತ್ ಮಟ್ಟದ ನಾಯಕರ ಜತೆ ಜನ ಸಂಪರ್ಕ ಆರಂಭಿಸಿದ್ದೇನೆ. ಟಿಕೆಟ್ ಸಿಗುತ್ತದೋ ಇಲ್ಲವೋ ಎಂಬ ಬಗ್ಗೆ ನನ್ನ ಬಳಿ ಯಾವುದೇ ಮಾಹಿತಿ ಇಲ್ಲ ಎಂದು ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಇನ್ನೂ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಶೋಭಾ ಕರಂದ್ಲಾಜೆ ಬೇರೆ ಯಾವುದಾದರೂ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಮಾಜಿ ಸಚಿವರಾದ ಮದ್ವರಾಜ್ ಮಾತನಾಡಿ, ಈ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ ಅವರು ತಮ್ಮ ರಾಜಕೀಯ ನಿವೃತ್ತಿ ಘೋಷಿಸಿದ ನಂತರ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಶೋಭಾ ಕರಂದ್ಲಾಜೆ ಅವರನ್ನು ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕೇಳಿ ಬಂದಿವೆ. ಶೋಭಾ ಕರಂದ್ಲಾಜೆ ಅವರು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಎರಡು ಬಾರಿ ಗೆದ್ದಿದ್ದಾರೆ. ಪ್ರಮೋದ್ ಮಧ್ವರಾಜ್ 216-18ರ ಅವಧಿಯಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿದ್ದರು. ಅವರು ಮೀನುಗಾರಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾಗಿ ಸೇವೆ ಸಲ್ಲಿಸಿದ್ದರು.
2018ರ ವಿಧಾನಸಭೆ ಚುನಾವಣೆಯಲ್ಲಿ ಉಡುಪಿಯಿಂದ ಬಿಜೆಪಿಯ ಕೆ ರಘುಪತಿ ಭಟ್ ವಿರುದ್ಧ ಸೋತಿದ್ದರು. ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದರು. ಕಾಂಗ್ರೆಸ್ ಬೆಂಬಲದೊಂದಿಗೆ ಜೆಡಿಎಸ್ ಅಭ್ಯರ್ಥಿಯಾಗಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿ ಶೋಭಾ ಕರಂದ್ಲಾಜೆ ವಿರುದ್ಧ ಸೋತಿದ್ದರು. ಇದೀಗ ಬಿಜೆಪಿಯಿಂದ ಮುಂದಿನ ಲೋಕಸಭಾ ಚುನಾವಣೆಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದು, ಹೈಕಮಾಂಡ್ ನಾಯಕರ ಮುಂದೆ ತಮ್ಮ ಬೇಡಿಕೆಯನ್ನ ಇಟ್ಟಿದ್ದು, ಹೈಕಮಾಂಡ್ ಯಾರಿಗೆ ಮಣೆ ಹಾಕುತ್ತೆ ಎಂಬುದನ್ನ ಕಾದು ನೋಡಬೇಕಾಗಿದೆ.












Click it and Unblock the Notifications