ಬಿಜೆಪಿ ಪ್ರಮುಖ ನಾಯಕ ಜಗದೀಶ್ ಶೆಟ್ಟರ್ಗೆ ಟಿಕೆಟ್ ಸಿಗುವುದು ಬಹುತೇಕ ಖಚಿತ: ಇನ್ಸೈಡ್ ಸ್ಟೋರಿ
ಬೆಂಗಳೂರು, ಏಪ್ರಿಲ್ 13: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ( Karnataka Assembly Elections 2023 ) ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ನಲ್ಲಿ ಜಗದೀಶ್ ಶೆಟ್ಟರ್ ( Jagadish Shettar ) ಅವರಿಗೆ ಟಿಕೆಟ್ ಘೋಷಣೆಯಾಗಿಲ್ಲ. ಈ ಹಿನ್ನೆಲೆಯಲ್ಲಿ, ಪಕ್ಷದ ಹೈಕಮಾಂಡ್ ನಾಯಕರನ್ನು ದೆಹಲಿಯಲ್ಲಿ ಭೇಟಿಯಾಗಿರುವ ಜಗದೀಶ್ ಶೆಟ್ಟರ್ ಟಿಕೆಟ್ಗಾಗಿ ಭಾರೀ ಲಾಬಿ ನಡೆಸಿದ್ದಾರೆ.
ಟಿಕೆಟ್ ಕೈತಪ್ಪುವ ವಿಚಾರವಾಗಿ ಹರಿಹಾಯ್ದಿದ್ದ ಜಗದೀಶ್ ಶೆಟ್ಟರ್, ಒಂದು ವೇಳೆ ಬಿಜೆಪಿಯಿಂದ ಟಿಕೆಟ್ ಸಿಗದೇ ಹೋದರೆ, ಸ್ವತಂತ್ರವಾಗಿ ಸ್ಪರ್ಧೆ ಮಾಡುವ ಬಗ್ಗೆಯೂ ಅವರು ಸುಳಿವು ನೀಡಿದ್ದರು.

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ ನಂತರ ಮಾತನಾಡಿರುವ ಶೆಟ್ಟರ್, 'ನಾನು ಸತತ ಆರು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ನನಗೆ ಇನ್ನೊಂದು ಅವಕಾಶ ಕೊಡಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಲ್ಲಿ ಕೇಳಿಕೊಂಡಿದ್ದೇನೆ. ಇತರ ನಾಯಕರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ನಡ್ಡಾ ತಿಳಿಸಿದ್ದಾರೆ' ಎಂದು ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ಲಿಂಗಾಯತ ಸಮುದಾಯದ ಶೆಟ್ಟರ್ ಅವರನ್ನು ಪಕ್ಷವು ಕಣಕ್ಕಿಳಿಸುತ್ತದೆ ಎಂಬುದಕ್ಕೆ ಈ ಬೆಳವಣಿಗೆ ಸ್ಪಷ್ಟ ಸೂಚನೆಯಾಗಿದೆ ಎಂದು ಬಿಜೆಪಿ ಆಂತರಿಕ ಮೂಲಗಳು ತಿಳಿಸಿವೆ. ಶೆಟ್ಟರ್ಗೆ ಟಿಕೆಟ್ ಸಿಗಲಿದೆ ಎಂದು ಯಡಿಯೂರಪ್ಪ ಬೆಂಗಳೂರಿನಲ್ಲಿ ಹೇಳಿದ್ದಾರೆ.

ಇತರ ಅತೃಪ್ತ ನಾಯಕರು ಬಿಜೆಪಿ ವಿರುದ್ಧ ಬಂಡಾಯ ಎದ್ದಿದ್ದಾರೆ. ಅಥಣಿಯಿಂದ ಮೂರು ಅವಧಿಯ ಶಾಸಕರಾಗಿದ್ದ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ. ಸವದಿ ಅವರು ಕಾಂಗ್ರೆಸ್ಗೆ ಸೇರುವ ಮತ್ತು ಅಥಣಿಯಿಂದ ಸ್ಪರ್ಧಿಸುವ ಆಲೋಚನೆಯಲ್ಲಿದ್ದಾರೆ ಎಂದು ತಿಳಿದುಬಂದಿದೆ. 2019 ರಲ್ಲಿ ಯಡಿಯೂರಪ್ಪ ಅವರು ನೇಮಿಸಿದ ಮೂವರು ಉಪ ಮುಖ್ಯಮಂತ್ರಿಗಳಲ್ಲಿ ಸವದಿ ಕೂಡಾ ಒಬ್ಬರು. ಅವರು ಲಿಂಗಾಯತ ಸಮುದಾಯದ ಪ್ರಬಲ ನಾಯಕರೂ ಹೌದು.
ಮಾಜಿ ಸಚಿವ ರಮೇಶ ಜಾರಕಿಹೊಳಿ ಬೆಂಬಲಿತ ಹಾಲಿ ಶಾಸಕ ಮಹೇಶ ಕುಮಠಳ್ಳಿ ಅವರಿಗೆ ಅಥಣಿ ಟಿಕೆಟ್ ನೀಡಲಾಗಿದೆ. ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಬಿಜೆಪಿಗೆ ಸಹಾಯ ಮಾಡಿದ ರಮೇಶ್ ಜಾರಕಿಹೊಳಿ ಅವರು ಬೆಂಬಲಿತ ಶಾಸಕರಿಗೆ ಬಿಜೆಪಿ ಟಿಕೆಟ್ ನೀಡಿದೆ.

ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಕ್ಷೇತ್ರದಿಂದ ಬಿಜೆಪಿ ಎಂಎಲ್ಸಿ ಆರ್ ಶಂಕರ್ ಅವರಿಗೆ ಟಿಕೆಟ್ ಕೈತಪ್ಪಿದೆ. ಟಿಕೆಟ್ಗಾಗಿ ಶಂಕರ್ ಅವರ ಮನವಿಯನ್ನು ನಿರ್ಲಕ್ಷಿಸಿದ ಕಾರಣ ಅವರು ಬಿಜೆಪಿ ತೊರೆದಿದ್ದಾರೆ. ಎಂಎಲ್ಸಿ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಅವರು ಪಕ್ಷೇತರರಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿರುವ ಆರು ಬಾರಿ ಶಾಸಕರಾಗಿದ್ದ ಎಸ್ ಅಂಗಾರ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಿಂದ ಟಿಕೆಟ್ ನಿರಾಕರಿಸಲಾಗಿದೆ. ಅವರು ನಂತರ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಸಮರ್ಪಣಾ ಭಾವದಿಂದ ಪಕ್ಷಕ್ಕಾಗಿ ದುಡಿದ ಶಾಸಕರನ್ನು ಈ ರೀತಿ ನಡೆಸಿಕೊಳ್ಳಬಾರದು ಎಂದು ಹೇಳಿದ್ದಾರೆ.
ಮತ್ತೊಬ್ಬ ಶಾಸಕ ಉಡುಪಿಯ ರಘುಪತಿ ಭಟ್ ಅವರು ತಮ್ಮ ಆಪ್ತ ಸ್ನೇಹಿತ ಯಶಪಾಲ್ ಸುವರ್ಣ ಅವರಿಗೆ ಟಿಕೆಟ್ ನೀಡಿದ ಒಂದು ದಿನದ ನಂತರ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. 'ಪಕ್ಷದ ನಿರ್ಧಾರದ ಬಗ್ಗೆ ನನಗೆ ಬೇಸರವಿಲ್ಲ, ಆದರೆ ಪಕ್ಷವು ನನ್ನನ್ನು ನಡೆಸಿಕೊಂಡ ರೀತಿಯಿಂದ ನನಗೆ ನೋವಾಗಿದೆ' ಎಂದು ಹೇಳಿದ್ದಾರೆ.
ಒಟ್ಟಾರೆಯಾಗಿ, ಚುನಾವಣೆಗೂ ಮುನ್ನ ಬಿಜೆಪಿಯಲ್ಲಿ ಬಂಡಾಯದ ಬೆಂಕಿ ಹೊತ್ತಿಕೊಂಡಿದೆ. ಕೇಸರಿ ಪಕ್ಷದ ನಾಯಕರು ಈ ಬೆಂಕಿಯನ್ನು ಯಾವ ರೀತಿಯಲ್ಲಿ ನಿಭಾಯಿಸಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.












Click it and Unblock the Notifications