ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ
ಬೆಂಗಳೂರು, ನ. 30: ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಸೇರಿದ್ದಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಎಸ್ ಸಿ ಮೋರ್ಚಾ ತಿರುಗಿ ಬಿದ್ದಿದೆ. ಸಿದ್ದರಾಮಯ್ಯ ಅವರ ಕ್ಷಮೆ ಕೋರದ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಪರಾಧ ತಡೆ ಕಾಯ್ದೆ ಅಡಿ ಕೇಸು ದಾಖಲಿಸುವಂತೆ ಕೋರಿ ಸಲ್ಲಿಸಲಾಗಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಮುಖಂಡ ಅನಿಲ್ ಲಾಡ್ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವತ್ಥ್ ನಾರಾಯಣ ಮತ್ತು ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಹೊಟ್ಟೆಪಾಡಿಗಾಗಿ ದಲಿತರು ಬಿಜೆಪಿ ಸೇರಿದ್ದಾರೆ ಎಂದು ಹೇಳುವ ಮೂಲಕ ದಲಿತರ ಬಗ್ಗೆ ಲೇವಡಿ ಮಾಡಿದ್ದಾರೆ. ಪದೇ ಪದೇ ಸಿದ್ದರಾಮಯ್ಯ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಇವರ ವಿರುದ್ಧ ಕಾನೂನು ಕ್ರಮ ಜರುಗಿಸಿ ಎಂದು ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ದೂರಿನಲ್ಲಿ ಮನವಿ ಮಾಡಿದ್ದಾರೆ.

'ದಲಿತರ ವಿರೋಧಿ ಕಾಯ್ದೆ ಅಡಿ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಹೇಳಿಕೆ ನೀಡಿ ಒಂದು ತಿಂಗಳು ಆಯಿತು. ಕ್ಷಮೆ ಕೋರಲು ಸಿದ್ದರಾಮಯ್ಯ ಅವರಿಗೆ ಒಂದು ತಿಂಗಳು ಗುಡುವು ನೀಡಲಾಗಿತ್ತು. ಕ್ಷಮೆ ಕೇಳದ ಸಿದ್ದರಾಮಯ್ಯ ನನ್ನ ವಿಡಿಯೋ ತಿರುಚಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಅವರು ಸಿದ್ದರಾಮಯ್ಯ ಅಲ್ಲ ಸುಳ್ಳುರಾಮಯ್ಯ. ದಲಿತ ವಿರೋಧಿ ಕಾಯ್ದೆ ಅಡಿ ಇದು ಅಪರಾಧ. ಹೀಗಾಗಿ ಸಿದ್ದರಾಮಯ್ಯ ವಿರುದ್ಧ ಕ್ರಮ ಜರುಗಿಸುವಂತೆ ಕೋರಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದೇನೆ' ಎಂದು ಛಲವಾದಿ ನಾರಾಯಣಸ್ವಾಮಿ ಸುದ್ದಿಗಾರರಿಗೆ ತಿಳಿಸಿದರು.

ಒಂದು ತಿಂಗಳ ಹಿಂದೆ ನಡೆದ ಸಾರ್ವಜನಿಕ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದರು. ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಇದರ ವಿರುದ್ಧ ದಲಿತ ಪರ ಸಂಘಟನೆಗಳು ಧ್ವನಿಯೆತ್ತಿ ಪ್ರತಿಭಟನೆ ನಡೆಸಿದ್ದವು. ಕ್ಷಮೆ ಕೇಳಲು ಆಗ್ರಹಿಸಿದ್ದವು. ಕ್ಷಮೆ ಕೇಳದ ಸಿದ್ದರಾಮಯ್ಯ ವಿಡಿಯೋ ತಿರುಚಲಾಗಿದೆ. ನಾನು ಆ ರೀತಿಯ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದೀಗ ಅವರ ವಿರುದ್ಧ ದೂರು ನೀಡಲಾಗಿದೆ.

ಇನ್ನು ರಾಜ್ಯ ಸಭಾ ಮಾಜಿ ಸದಸ್ಯ ಅನಿಲ್ ಲಾಡ್ ಸಾಮಾಜಿಕ ಜಾಲ ತಾಣದಲ್ಲಿ ನೀಡಿರುವ ಹೇಳಿಕೆ ವಿರೋಧಿಸಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಸಂವಿಧಾನ ರಚನೆ ಮಾಡಿದ್ದು ಇಂದಿರಾಗಾಂಧಿ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಎಂದು ಬರೆದುಕೊಂಡಿದ್ದಾರೆ. ಪರಿಶಿಷ್ಟ ಜಾತಿಯ ಎಡಗೈ ಮತ್ತು ಬಲಗೈ ಯಾರೇ ಆದರೂ ಕಾಂಗ್ರೆಸ್ನಲ್ಲಿರಬೇಕು ಎಂದು ಹೇಳಿಕೆ ನೀಡಿದ್ದಾರೆ. ಈ ದೇಶಕ್ಕೆ ಸಂವಿಧಾನ ಕೊಟ್ಟಿರುವುದು ದಿವಂಗತ ಇಂದಿರಾಗಾಂಧಿ, ರಾಜೀವ್ ಗಾಂಧಿ ಮತ್ತು ಸೋನಿಯಾ ಗಾಂಧಿ ಎಂದು ಅನಿಲ್ ಲಾಡ್ ಹೇಳಿಕೆ ನೀಡಿ ವಿಡಿಯೋ ಬಿಡುಗಡೆ ಮಾಡಿದ್ದಾರೆ.

ಈ ದೇಶದ ಸಂವಿಧಾನ ಬರೆದವರು ಅಂಬೇಡ್ಕರ್. ಅವರಿಗೆ ಅವಮಾನ ಮಾಡಿದರೆ ಈ ದೇಶದ ಸಂಸತ್ತಿಗೆ ಅವಮಾನ ಮಾಡಿದ ಹಾಗೆ. ಹೀಗಾಗಿ ಅವರ ವಿರುದ್ಧ ದೂರು ನೀಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಅಪರಾಧ ತಡೆ ಕಾಯ್ದೆ ಅಡಿಯಲ್ಲಿ ಅನಿಲ್ ಲಾಡ್ ವಿರುದ್ಧ ಎಫ್ಐಆರ್ ದಾಖಲಿಸಬೇಕು. ಸಂವಿಧಾನಕ್ಕೆ, ದಲಿತ ಸಮುದಾಯಕ್ಕೆ ಅವಮಾನ ಮಾಡಿರುವ ಅನಿಲ್ ಲಾಡ್ ಅವರನ್ನು ಕೂಡಲೇ ಬಂಧಿಸಬೇಕು ಎಂದು ಛಲವಾದಿ ನಾರಾಯಣಸ್ವಾಮಿ ಒತ್ತಾಯ ಮಾಡಿದ್ದಾರೆ.












Click it and Unblock the Notifications