ವಿರೋಧ ಪಕ್ಷದ ನಾಯಕನ ಆಯ್ಕೆಗೆ ಕಾಲಾವಕಾಶ ಕೋರಿದ ಬಿಜೆಪಿ: ಯಾರಾಗಲಿದ್ದಾರೆ ವಿಪಕ್ಷ ನಾಯಕ?
ಬೆಂಗಳೂರು, ಜೂನ್. 14: ಭಾರತೀಯ ಜನತಾ ಪಕ್ಷದ (ಬಿಜೆಪಿ) ಕರ್ನಾಟಕ ಘಟಕವು ಮಂಗಳವಾರ ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಮತ್ತು ಪಕ್ಷದ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡಲು ಇನ್ನೂ ಎರಡು ದಿನಗಳ ಕಾಲಾವಕಾಶ ಕೋರಿದೆ.ಈ ಅವಧಿಯಲ್ಲಿ ಪಕ್ಷವು ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ, ಶಾಸಕ ಬಿವೈ ವಿಜಯೇಂದ್ರ ಘೋಷಿಸಿದ್ದಾರೆ.
ಪಕ್ಷದ ರಾಜ್ಯಾಧ್ಯಕ್ಷರಾಗುವ ಸಾಧ್ಯತೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಾಸಕ ಬಿವೈ ವಿಜಯೇಂದ್ರ, ಅವರನ್ನು ಆ ಸ್ಥಾನಕ್ಕೆ ನೇಮಿಸುವ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಯಾರೇ ಅಧ್ಯಕ್ಷರಾದರೂ ಪರವಾಗಿಲ್ಲ, ಕರ್ನಾಟಕದಲ್ಲಿ ಪಕ್ಷವನ್ನು ಬಲವಾಗಿ ಕಟ್ಟುತ್ತೇವೆ ಎಂದು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹಿರಿಯ ಮುಖಂಡರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಸೇರಿದಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ಪಕ್ಷವು ವಿಜಯೇಂದ್ರ ಅವರನ್ನೂ ಈ ಹುದ್ದೆಗೆ ಪರಿಗಣಿಸುತ್ತಿದ್ದು, ಒಬಿಸಿ ಅಥವಾ ದಲಿತ ಸಮುದಾಯದ ನಾಯಕರೊಬ್ಬರನ್ನು ಆ ಸ್ಥಾನಕ್ಕೆ ಆಯ್ಕೆ ಮಾಡಲು ಆಸಕ್ತಿ ಹೊಂದಿದೆ ಎಂದು ತಿಳಿದು ಬಂದಿದೆ.
ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಬಿಜೆಪಿ ಎಂಎಲ್ಸಿ ಕೋಟ ಶ್ರೀನಿವಾಸ ಪೂಜಾರಿ ಅಭ್ಯರ್ಥಿಯಾಗುವ ಸಾಧ್ಯತೆ ಇದೆ. ಹೆಚ್ಚುವರಿಯಾಗಿ ಒಕ್ಕಲಿಗ ನಾಯಕರೊಬ್ಬರನ್ನು ರಾಜ್ಯ ಪಕ್ಷದ ಅಧ್ಯಕ್ಷರನ್ನಾಗಿ ನೇಮಿಸಲು ಪಕ್ಷ ಚಿಂತನೆ ನಡೆಸಿದೆ. ಆರ್.ಅಶೋಕ, ಸಿ.ಎನ್.ಅಶ್ವಥ್ ನಾರಾಯಣ್ ಅವರಂತಹ ನಾಯಕರೂ ರಾಜ್ಯಾಧ್ಯಕ್ಷ ಸ್ಥಾನದ ಸ್ಪರ್ಧೆಯಲ್ಲಿದ್ದಾರೆ.

ಇನ್ನೂ ಯಾವುದೇ ಅಂತಿಮ ನಿರ್ಧಾರಗಳನ್ನು ತೆಗೆದುಕೊಳ್ಳದಿದ್ದರೂ, ಲಿಂಗಾಯತ, ಒಕ್ಕಲಿಗ ಮತ್ತು ಒಬಿಸಿ ಅಥವಾ ದಲಿತ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡಲು ಬಿಜೆಪಿ ಚಿಂತಿಸಿದೆ. ರಾಜ್ಯದ ಎಲ್ಲಾ ಸಮುದಾಯಗಳನ್ನು ಒಳ್ಳಗೊಳ್ಳುವುದು ಮತ್ತು ಸೂಕ್ತ ಪ್ರಾತಿನಿಧ್ಯದ ಸಂದೇಶ ನೀಡಬೇಕು ಎಂದು ಪಕ್ಷ ನಿರ್ಧರಿಸಿದೆ.
ಪ್ರತಿಪಕ್ಷ ನಾಯಕರ ನೇಮಕದಲ್ಲಿ ಯಾವುದೇ ವಿಳಂಬವಿಲ್ಲ, ಸಂಪ್ರದಾಯದಂತೆ ವಿಧಾನಮಂಡಲ ಅಧಿವೇಶನ ಮುಗಿದ ನಂತರ ನೇಮಕ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ. ಪ್ರತಿಪಕ್ಷ ನಾಯಕ ಸ್ಥಾನದ ಆಸೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಫಲಿತಾಂಶದ ಬಗ್ಗೆ ರಾಷ್ಟ್ರೀಯ ನಾಯಕರು ಅಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಅವರು, 'ಚುನಾವಣೆಯಲ್ಲಿ ಪಕ್ಷದ ಸೋಲಿನ ನೈತಿಕ ಹೊಣೆಯನ್ನು ನಾನು ಈಗಾಗಲೇ ಹೊಂದಿದ್ದೇನೆ. ಚುನಾವಣೆ ಸೋಲಿನ ಹೊಣೆಯನ್ನು ನಾನೇ ಹೊತ್ತುಕೊಂಡಾಗ ಶಾಸಕರ ಸೋಲಿಗೆ ಕಾರಣ ಹೇಳುವ ಪ್ರಶ್ನೆಯೇ ಉದ್ಭವಿಸುವುದಿಲ್ಲ' ಎಂದಿದ್ದಾರೆ.
ಇತ್ತ, ಹಾಲಿ ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥ ನಳಿನ್ ಕುಮಾರ್ ಕಟೀಲ್ ಬಿಜೆಪಿ ಕಾರ್ಯಕರ್ತರಿಂದ ಭಾರೀ ಪ್ರತಿಭಟನೆಯನ್ನು ಎದುರಿಸುತ್ತಿದ್ದಾರೆ, ವಿಶೇಷವಾಗಿ ಅವರ ತವರು ಜಿಲ್ಲೆ ದಕ್ಷಿಣ ಕನ್ನಡದಲ್ಲಿ. ಮುಂದಿನ ಲೋಕಸಭೆ ಚುನಾವಣೆಗೆ ಅವರನ್ನು ಅಭ್ಯರ್ಥಿಯನ್ನಾಗಿ ನಾಮನಿರ್ದೇಶನ ಮಾಡದಂತೆ ಪಕ್ಷದ ಮುಖಂಡರಿಗೆ ಮನವಿ ಮಾಡಿದ್ದೇವೆ ಎಂದು ಹೆಸರು ಹೇಳಲು ಇಚ್ಛಿಸದ ಮಾಜಿ ಶಾಸಕರೊಬ್ಬರು ತಿಳಿಸಿದ್ದಾರೆ.
''ಚುನಾವಣಾ ಪ್ರಚಾರದ ವೇಳೆ ನಳಿನ್ ಕುಮಾರ್ ಕಟೀಲ್ ಅವರು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿಲ್ಲ ಎಂಬ ಆರೋಪವೂ ಇದೆ. ಅವರ ವಿರುದ್ಧದ ಪ್ರಾಥಮಿಕ ಆರೋಪವೆಂದರೆ ಅವರು ತಮ್ಮ ಕ್ಷೇತ್ರದ ಜನರಿಗೆ ಅವರ ಅವಶ್ಯಕತೆ ಇದ್ದಾಗ ಅವರಿಗೆ ಸಿಗಲಿಲ್ಲ. ಹಾಗಾಗಿ, ವಿಧಾನಸಭೆ ಚುನಾವಣೆಯಲ್ಲಿ ನಡೆದಂತೆ, ಅಭ್ಯರ್ಥಿಗಳಲ್ಲಿ ಸಂಪೂರ್ಣ ಬದಲಾವಣೆಯ ಅಗತ್ಯವಿದೆ" ಎಂದು ಬಿಜೆಪಿ ನಾಯಕ ಹೇಳಿದ್ದಾರೆ.
ಇತ್ತ, ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಮಟ್ಟದಲ್ಲಿ ಕೆಲಸ ಮಾಡುವ ರೀತಿಯಲ್ಲಿ ದಕ್ಷಿಣ ರಾಜ್ಯದಲ್ಲಿ ಕೆಲಸ ಮಾಡಲು ಸಾಧ್ಯವಾಗದ ಕಾರಣ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋತಿದೆ. ಚುನಾವಣೆಗೆ ಮುನ್ನ ಸರಿಯಾಗಿ ತಮ್ಮ ಕೆಲಸಗಳನ್ನು ಜನರಿಗೆ ತಲುಪಿಸುವಲ್ಲಿ ವಿಫಲವಾಗಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.












Click it and Unblock the Notifications