BY Vijayendra: ಬಿಜೆಪಿ ಬಣಗಳ ಸಭೆ, ಸಮಾರಂಭಕ್ಕೆ ತಡೆ ಹಾಕಿದ ವಿಜಯೇಂದ್ರ
ಬೆಂಗಳೂರು, ಡಿಸೆಂಬರ್ 15: ಕರ್ನಾಟಕ ಬಿಜೆಪಿಯ ಬಣ ರಾಜಕೀಯ ದೆಹಲಿ ತನಕ ತಲುಪಿದೆ. ರಾಜ್ಯಾಧ್ಯಕ್ಷರು, ಹಿರಿಯ ನಾಯಕರ ವಿರುದ್ಧ ಟೀಕೆಗಳನ್ನು ಮಾಡಿದ ನಾಯಕರಿಗೆ ಶಿಸ್ತು ಸಮಿತಿ ನೋಟಿಸ್ ಸಹ ನೀಡಿದೆ. ಅಲ್ಲದೇ ಬಣ ರಾಜಕೀಯ ಮಾಡುವವರು ಶಕ್ತಿ ಪ್ರದರ್ಶನ ಮಾಡಲು ಸಮಾವೇಶಗಳನ್ನು ಮಾಡಲು ಮುಂದಾಗಿದ್ದರು. ಆದರೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಇಂತಹ ಚಟುವಟಿಕೆಗಳಿಗೆ ತಡೆ ಹಾಕಿದ್ದಾರೆ.
ಭಾನುವಾರ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಬಿ. ವೈ. ವಿಜಯೇಂದ್ರ, 'ಬಿಜೆಪಿಯಲ್ಲಿ ಬಣ ರಾಜಕೀಯಕ್ಕೆ ಅವಕಾಶ ಇಲ್ಲವೇ ಇಲ್ಲ. ಬಣದ ಹೆಸರಿನಲ್ಲಿ ಸಭೆಗಳನ್ನು ಆಯೋಜಿಸುವುದನ್ನು ಒಪ್ಪಲಾಗದು. ಈ ನಿಟ್ಟಿನಲ್ಲಿ ಸಭೆ, ಸಮಾವೇಶಗಳನ್ನು ಮಾಡಲು ಯಾರೇ ಹೊರಟಿದ್ದರೂ ಕೂಡಲೇ ತಮ್ಮ ಚಟುವಟಿಕೆಗಳನ್ನು ಸ್ಥಗಿತಗೊಳಿಸಬೇಕೆಂದು ವಿನಂತಿಸುವೆ' ಎಂದು ಹೇಳಿದ್ದಾರೆ.

'ರಾಜ್ಯಾಧ್ಯಕ್ಷನಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆಗೆ ಇನ್ನಷ್ಟು ಬಲ ತುಂಬುವ ಕಾರ್ಯಕ್ರಮಳಡಿಯಲ್ಲಿ ಪಕ್ಷದ ಹಿರಿಯರು, ಶಾಸಕರು, ಮಾಜಿ ಶಾಸಕರು ಹಾಗೂ ಪಕ್ಷದ ಎಲ್ಲ ಹಿರಿಯರೊಂದಿಗೆ ಅತೀ ಶೀಘ್ರದಲ್ಲೇ ಸಭೆ ಕರೆಯಲಿದ್ದೇನೆ' ಎಂದು ಬಿ. ವೈ. ವಿಜಯೇಂದ್ರ ಭರವಸೆಯನ್ನು ನೀಡಿದ್ದಾರೆ.
'ಭಾರತೀಯ ಜನತಾ ಪಾರ್ಟಿ ಕೂಡು ಕುಟುಂಬವಿದ್ದಂತೆ, ಪಕ್ಷದ ಚೌಕಟ್ಟಿನಲ್ಲೇ ಪ್ರತಿಯೊಂದು ಸಭೆ, ಕಾರ್ಯಕ್ರಮಗಳು ನಡೆಯಬೇಕೇ ಹೊರತು ಪಕ್ಷದ ನಿಯಮ, ಧ್ಯೇಯಗಳನ್ನು ಬದಿಗೆ ಸರಿಸಿ ಯಾವುದೇ ಚಟುವಟಿಕೆಗಳನ್ನು ನಡೆಸುವುದು ಸಂಘಟನೆಯ ಆಶಯಕ್ಕೆ ಪೂರಕವಾಗಿಲ್ಲದಿರುವುದನ್ನು ವಿನಮ್ರತೆಯಿಂದ ಸಹೃದಯರಲ್ಲಿ ತಿಳಿಸಬಯಸುತ್ತೇನೆ' ಎಂದು ಪೋಸ್ಟ್ನಲ್ಲಿ ಅವರು ಹೇಳಿದ್ದಾರೆ.
ವಿಜಯೇಂದ್ರ ಟ್ವೀಟ್ ಏಕೆ?: ಇಂದು ಬಿ. ವೈ. ವಿಜಯೇಂದ್ರ ಟ್ವೀಟ್ ಮಾಡಲು ಕಾರಣ ಶನಿವಾರ ದಾವಣಗೆರೆಯಲ್ಲಿ ನಡೆದ ಬಿಜೆಪಿ ನಾಯಕರ ಸಭೆ. ಅದರಲ್ಲೂ ಈ ಸಭೆಯನ್ನು ಬಿ. ವೈ. ವಿಜಯೇಂದ್ರ ಬಣದ ನಾಯಕರ ಸಭೆ ಎಂದು ಬಿಂಬಿಸಲಾಗಿತ್ತು.
ದಾವಣಗೆರೆ ನಗರದ ಸಾಯಿ ಇಂಟರ್ನ್ಯಾಷನಲ್ ಹೋಟೆಲ್ನಲ್ಲಿ ಮಾಜಿ ಸಚಿವ ಎಂ. ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಸಭೆ ನಡೆದಿತ್ತು. ಈ ಸಭೆಯಲ್ಲಿ ಮಾಜಿ ಸಚಿವರು ಹಾಗೂ ಮಾಜಿ ಶಾಸಕರು ಪಾಲ್ಗೊಂಡಿದ್ದರು. ಎಲ್ಲರೂ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮತ್ತು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಜೊತೆ ಇದ್ದೇವೆ ಎಂದು ಹೇಳಿದ್ದರು.
ಈ ಸಭೆಯ ಬಳಿಕ ಮಾತನಾಡಿದ್ದ ಎಂ. ಪಿ. ರೇಣುಕಾಚಾರ್ಯ, "ವಿಜಯೇಂದ್ರ ಅವರು ಪಕ್ಷದ ಅಧ್ಯಕ್ಷ ಸ್ಥಾನವಹಿಸಿಕೊಂಡು ವರ್ಷ ಕಳೆದಿದೆ. ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಪಕ್ಷವನ್ನು ಇನ್ನಷ್ಟು ಸಬಲಗೊಳಿಸಲು ಹಾಗೂ ವಿಜಯೇಂದ್ರ ಅವರ ಕೈ ಬಲಪಡಿಸಲು ಸಭೆ ಸೇರುತ್ತಿದ್ದೇವೆ" ಎಂದು ತಿಳಿಸಿದ್ದರು.
ಬಿ. ವೈ. ವಿಜಯೇಂದ್ರ ಮತ್ತು ಬಿ. ಎಸ್. ಯಡಿಯೂರಪ್ಪ ಬೆಂಬಲಿಸಲು ದಾವಣಗೆರೆಯಲ್ಲಿ ಬಿಜೆಪಿಯ ಬೃಹತ್ ಸಮಾವೇಶ ಆಯೋಜನೆ ಮಾಡಲು ಚರ್ಚಿಸಲಾಗಿತ್ತು. ಈ ಮೂಲಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಅವರ ತಂಡಕ್ಕೆ ಸ್ಪಷ್ಟ ಸಂದೇಶ ರವಾನೆ ಮಾಡಲು ಚಿಂತನೆ ನಡೆಸಲಾಗಿತ್ತು. ಆದರೆ ಈಗ ಸ್ವತಃ ವಿಜಯೇಂದ್ರ "ಬಣದ ಹೆಸರಿನಲ್ಲಿ ಹೆಸರಿನಲ್ಲಿ ಸಭೆಗಳನ್ನು ಆಯೋಜಿಸುವುದನ್ನು ಒಪ್ಪಲಾಗದು" ಎಂದು ಹೇಳಿದ್ದಾರೆ.
ಮೂರು ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ವಿರುದ್ಧ ಇದ್ದ ಅಸಮಾಧಾನ ಹೆಚ್ಚಾಗಿತ್ತು. ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಹಲವು ನಾಯಕರು ಸರಣಿ ಸಭೆಗಳನ್ನು ನಡೆಸಿದ್ದರು. ದೆಹಲಿಗೆ ಹೋಗಿ ವರಿಷ್ಠ ನಾಯಕರಿಗೆ ವಿಜಯೇಂದ್ರ ವಿರುದ್ಧ ದೂರು ನೀಡಿ ಬಂದಿದ್ದರು.












Click it and Unblock the Notifications