"ಬಿಜೆಪಿಗೆ ದಲಿತರ ಮೇಲೆ ಪ್ರೀತಿಯಿದ್ದರೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಕೊಡಲಿ'
ಬೆಂಗಳೂರು, ನ.6: ಬಿಜೆಪಿಗೆ ದಲಿತರ ಮೇಲೆ ಪ್ರೀತಿ ಇದ್ದರೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ದಲಿತರಿಗೆ ಬಿಟ್ಟುಕೊಡಲಿ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು "ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿ ಸೇರಿದ್ದಾರೆ' ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಕೂಡಲೇ ದಲಿತರ ಕ್ಷಮೆ ಕೋರಬೇಕು ಎಂದು ಆಗ್ರಹಿಸಿ ನಿರಂತರ ಪ್ರತಿಭಟನೆ, ಹೇಳಿಕೆಗಳನ್ನು ನೀಡುತ್ತಿದೆ. ಇದಕ್ಕೆ ಪ್ರತಿಯಾಗಿ ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಬಿಜೆಪಿಗೆ ಟಾಂಗ್ ನೀಡಿದ್ದಾರೆ.
ಬಿಜೆಪಿ ನಾಯಕರು ಹಾಗೂ ಹಿಂದುಳಿದ ವರ್ಗಗಳ ಘಟಕ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಬಗ್ಗೆ ವಿನಾಕಾರಣ ಟೀಕೆ, ಅಪಪ್ರಚಾರ ಮಾಡುತ್ತಿದ್ದಾರೆ. ಅಧಿಕಾರಕ್ಕೋಸ್ಕರ ಕೆಲವರು ಬಿಜೆಪಿಗೆ ಹೋಗಿದ್ದಾರೆ ಎಂದರೇ ಹೊರತು ಹೊಟ್ಟೆಪಾಡಿಗೆ ಹೋಗಿದ್ದಾರೆ ಎಂದು ಹೇಳಿಲ್ಲ. ಬಿಜೆಪಿಯವರು ವಿಚಾರಗಳನ್ನು ತಿರುಚುವುದರಲ್ಲಿ ನಿಪುಣರು. ಸುಳ್ಳು, ವಿಷಯಾಂತರ ಮಾಡುವುದು ಬಿಜೆಪಿ ಹುಟ್ಟುಗುಣ. ರಾಜ್ಯ ಹಾಗೂ ದೇಶದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ವಿಷಯಾಂತರ ಮಾಡಿಕೊಂಡು ಬರುತ್ತಿದೆ ಎಂದು ರಾಮಲಿಂಗಾರೆಡ್ಡಿ ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

"ನಮ್ಮಲ್ಲಿ ದಲಿತ ಸಮುದಾಯಕ್ಕೆ ಸೇರಿದ ರಂಗನಾಥ್, ರಾಥೋಡ್, ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದರು. ಬಿಜೆಪಿಯವರು ಎಷ್ರು ದಲಿತರಿಗೆ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟಿದ್ದಾರೆ? ಅವರಿಗೆ ದಲಿತರ ಮೇಲೆ ನಿಜವಾಗಲೂ ಪ್ರೀತಿ ಇದ್ದರೆ ದಲಿತರಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಬಿಟ್ಟುಕೊಡಲಿ ಎಂದು ಸವಾಲು ಹಾಕಿದರು.
'ಬಿಜೆಪಿ ಸರ್ಕಾರದಲ್ಲಿ 35 ಮಂತ್ರಿಗಳಿದ್ದಾರೆ. ಅದರಲ್ಲಿ ಮೂಲ ಬಿಜೆಪಿಗರು 7 ಜನ ಮಾತ್ರ. ಉಳಿದ 28 ಜನ ಕಾಂಗ್ರೆಸ್, ಜೆಡಿಎಸ್ ನಿಂದ ವಲಸೆ ಹೋದವರೇ ಆಗಿದ್ದಾರೆ. ಮೂಲ ಬಿಜೆಪಿಯವರ ಕಥೆ ಏನಾಗಿದೆ? ನಮ್ಮಲ್ಲಿ ಶೇ.80ರಷ್ಟು ಜನ ಮೂಲ ಕಾಂಗ್ರೆಸಿಗರಾದರೆ, ಶೇ.20ರಷ್ಟು ಜನ ನಮ್ಮ ಪಕ್ಷಕ್ಕೆ ಇತರೆ ಪಕ್ಷಗಳಿಂದ ಬಂದು ಸೇರಿಕೊಂಡವರಿದ್ದಾರೆ. ಪ್ರಸ್ತುತ ಕೇಂದ್ರದಲ್ಲಿ ಸಚಿವರಾಗಿರುವ ನಾರಾಯಣ ಸ್ವಾಮಿ ಸಹ ಮೊದಲು ಕಾಂಗ್ರೆಸ್ನಲ್ಲೇ ಇದ್ದರು. ಆರಂಭದಿಂದಲೂ ತುಳಿತಕ್ಕೆ ಒಳಗಾದ ಸಮಾಜದವರಿಗೆ ನಮ್ಮ ಪಕ್ಷ ಆದ್ಯತೆ ನೀಡುತ್ತಾ ಬಂದಿದೆ. ಅಂಬೇಡ್ಕರ್ ಅವರು ದಲಿತರಿಗೆ ಮೀಸಲಾತಿ ತಂದರೆ ಅದನ್ನು ಕಾಂಗ್ರೆಸ್ ಪಾಲಿಸಿಕೊಂಡು ಬಂದಿದೆ' ಎಂದರು.
ಬಿಟ್ಕಾಯಿನ್ ಪ್ರಕರಣ ಮುಚ್ಚಿಹಾಕುವ ತಂತ್ರ
'ಬಿಟ್ ಕಾಯಿನ್ ಸುದ್ದಿ ಕಾವು ಪಡೆದುಕೊಳ್ಳುತ್ತಿದ್ದಂತೆ ಜನರ ಗಮನ ಬೇರೆಡೆ ಸೆಳೆಯಲು ಸಿದ್ದರಾಮಯ್ಯ ಅವರ ವಿರುದ್ಧ ದಲಿತ ವಿರೋಧಿ ಎಂಬ ಅಪಪ್ರಚಾರ ನಡೆಸುತ್ತಿದ್ದಾರೆ' ಎಂದು ರಾಮಲಿಂಗಾರೆಡ್ಡಿ ಹೇಳಿದರು.
ಬಿಟ್ ಕಾಯಿನ್ ಆನ್ಲೈನ್ ಮೂಲಕ ನಡೆಯುವ ಡಿಜಿಟಲ್ ಕರೆನ್ಸಿ ವ್ಯವಹಾರ. ಇದರಲ್ಲಿ ಅನೇಕರು ಬಂಡವಾಳ ಹೂಡುತ್ತಿದ್ದಾರೆ. ಆದರೆ ಇದನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ನೆದರ್ ಲೆಂಡ್, ಮಲೇಷ್ಯಾ, ಅಮೆರಿಕ ಬೇರೆ ಬೇರೆ ದೇಶಗಳಲ್ಲಿ ಹ್ಯಾಕ್ ಮಾಡಿ ಸಾವಿರಾರು ಕೋಟಿ ಹಣ ಮಾಡಿರುವುದು ಅಪರಾಧವಾಗಿದೆ. ಹ್ಯಾಕ್ ಮಾಡಿರುವ ವ್ಯಕ್ತಿಗೆ ಪ್ರಭಾವಿ ನಾಯಕರ ಸಂಪರ್ಕವಿದೆ. ಆಡಳಿತ ಪಕ್ಷದಲ್ಲಿರುವವರು ಪ್ರಭಾವಿನಾಯಕರಾಗಿರುತ್ತಾರೆಯೇ ಹೊರತು ವಿರೋಧ ಪಕ್ಷದವರು ಪ್ರಭಾವಿ ನಾಯಕರಾಗಿರುವುದಿಲ್ಲ. ಇದರಲ್ಲಿ ಪ್ರಭಾವಿ ನಾಯಕರ ಮಗ, ಅಧಿಕಾರಿಗಳು ಭಾಗಿಯಾಗಿರುವ ಬಗ್ಗೆ ಊಹಾಪೋಹವಿದೆ ಎಂದು ಹೇಳಿದರು.
ಪ್ರಕರಣವನ್ನು ಸಿಬಿಐಗೆ ಒಪ್ಪಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಿಬಿಐಗೆ ಪ್ರಕರಣ ಹೋದಮೇಲೆ ಸರ್ಕಾರಿ ಗೆಜೆಟ್ ಆಗಿರಬೇಕಲ್ಲವೇ? ಅಧಿವೇಶನದಲ್ಲೂ ಈ ಬಗ್ಗೆ ಪ್ರಸ್ತಾಪವಾಗಿಲ್ಲ. ಪ್ರಕರಣದ ತನಿಖೆ ನಡೆಯುತ್ತಿದೆ. ಸರ್ಕಾರ ಯಾವಾಗ ಇದರ ತನಿಖೆಯನ್ನು ಸಿಬಿಐ, ಇಡಿಗೆ ನೀಡಿದೆ ಎಂದು ತಿಳಿಸಲಿ. ಇಲ್ಲವಾದರೆ ಈ ಪ್ರಕರಣವನ್ನು ಮುಚ್ಚಿಹಾಕಲಾಗುತ್ತದೆ ಎಂಬ ಸುದ್ದಿ ಇದೆ. ನಿಷ್ಪಕ್ಷಪಾತ ತನಿಖೆಯಾದರೆ ಸರ್ಕಾರಕ್ಕೆ ಕಂಟಕ ಇದೆ ಎಂದು ಹೇಳುತ್ತಿದ್ದಾರೆ. ಈ ಪ್ರಕರಣದ ತನಿಖೆಯನ್ನು ಪಾರದರ್ಶಕವಾಗಿ ಮಾಡಬೇಕು. ಕೇಂದ್ರ ಸರ್ಕಾರ ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿದರೆ ಮಾತ್ರ ಇದರಲ್ಲಿ ಸತ್ಯಾಂಶ ಹೊರಬರುತ್ತದೆ ಎಂದರು.
ಮಾಜಿ ಸಚಿವ ಆರ್.ಬಿ. ತಿಮ್ಮಾಪುರ್, "ದಲಿತರು ಎಂದು ಹೇಳಿಕೊಂಡು ಓಡಾಡುವ ಕೇಂದ್ರ ಸಚಿವ ನಾರಾಯಣ ಸ್ವಾಮಿ ವಿದ್ಯಾರ್ಥಿಗಳಿಗೆ ಕಳೆದ 6 ತಿಂಗಳಿನಿಂದ ಸ್ಕಾಲರ್ ಶಿಪ್ ಕೊಟ್ಟಿಲ್ಲ. ದಲಿತರ ಮೇಲೆ ಕಾಳಜಿ ಇರುವವರು ಯಾಕೆ ಅದನ್ನು ಕೇಳುತ್ತಿಲ್ಲ? 781 ಕೋಟಿ ಕೊಡಬೇಕಿದ್ದು, ಇದುವರೆಗೂ ಒಂದು ರೂಪಾಯಿ ಬಿಡುಗಡೆಯಾಗಿಲ್ಲ. ನೀವು ಕೇಂದ್ರ ಸರ್ಕಾರದಲ್ಲಿದ್ದು ನೀವು ದಲಿತರ ಪರವಾಗಿ ಏನು ಮಾಡಿದ್ದೀರಿ? ಎಂದು ಪ್ರಶ್ನಿಸಿದರು.












Click it and Unblock the Notifications