ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿ ಸಭೆ
ಬೆಂಗಳೂರು, ಜ. 01: ಭಾರತೀಯ ಜನತಾ ಪಕ್ಷದ ರಾಜ್ಯ ವಿಶೇಷ ಕಾರ್ಯಕಾರಿಣಿ ಸಭೆ ಜನವರಿ 3 ರಂದು ಶಿವಮೊಗ್ಗದ ಪೆಸಿಟ್ ಕಾಲೇಜಿನ ಆವರಣದಲ್ಲಿ ನಡೆಯಲಿದೆ. ನಾಳೆ (ಜ.2ರಂದು) ಸಂಜೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ರಾಜ್ಯ ಬಿಜೆಪಿ ಉಸ್ತುವಾರಿಯಾಗಿ ನೇಮಕವಾದ ಬಳಿಕ ಮೊದಲ ಬಾರಿ ಕಾರ್ಯಕಾರಣಿ ಹಾಗೂ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಕೋರ್ ಕಮಿಟಿ ಸಭೆ ಹಾಗೂ ರಾಜ್ಯ ಕಾರ್ಯಕಾರಣಿಯಲ್ಲಿ ಭಾಗವಹಿಸಲು ಅರುಣ್ ಸಿಂಗ್ ಅವರು ನಾಳೆ (ಜ.02) ಬೆಂಗಳೂರಿಗೆ ಆಗಮಿಸಲಿದ್ದು, ನಂತರ ಶಿವಮೊಗ್ಗಕ್ಕೆ ತೆರಳಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರುಗಳ ನೇತೃತ್ವದಲ್ಲಿ ಕಾರ್ಯಕಾರಣಿ ಹಾಗೂ ಕೋರ್ ಕಮಿಟಿ ಸಭೆ ನಡೆಯಲಿವೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಡಿಸಿಎಂ ಗೋವಿಂದ್ ಕಾರಜೋಳ್, ಕೆ.ಎಸ್. ಈಶ್ವರಪ್ಪ ಅವರು ಸೇರಿದಂತೆ ಪಕ್ಷದ ರಾಜ್ಯ ಪದಾಧಿಕಾರಿಗಳು, ಪ್ರಕೋಷ್ಠಗಳ ಸಂಚಾಲಕರು, ಜಿಲ್ಲಾಧ್ಯಕ್ಷರು, ವಿಭಾಗ ಪ್ರಭಾರಿಗಳು ಸೇರಿದಂತೆ ಒಟ್ಟು 180 ಜನರು ಕಾರ್ಯಕಾರಣಿಯಲ್ಲಿ ಭಾಗವಹಿಸಲಿದ್ದಾರೆ.
ರಾಜ್ಯ ಕಾರ್ಯಕಾರಣಿ ಹಾಗೂ ಕೋರ್ ಕಮಿಟಿ ಸಭೆಗಳ ಹಿನ್ನೆಲೆಯಲ್ಲಿ ಸಚಿವಸ್ಥಾನದ ಆಕಾಂಕ್ಷಿಗಳಲ್ಲಿ ಮತ್ತೆ ಆಸೆ ಗರಿಗೆದರಿವೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ರಾಜ್ಯಕ್ಕೆ ಆಗಮಿಸುತ್ತಿರುವುದರಿಂದ ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ಸಂದೇಶ ಕಳುಹಿಸಲಿದೆ ಎನ್ನಲಾಗುತ್ತಿದೆ.
Recommended Video