ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಹೋರಾಟ
ಬೆಂಗಳೂರು, ಮಾರ್ಚ್ 31: ಹಾಲಿನ ದರ, ವಿದ್ಯುತ್ ದರ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸಲು ಬಿಜೆಪಿ ಸಜ್ಜಾಗಿದೆ ಎಂದು ಹೇಳಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯದ ಮೂಲೆ ಮೂಲೆಯಲ್ಲಿ ಪ್ರತಿಭಟನೆ ನಡೆಸುವಂತೆ ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ ಇಪ್ಪತ್ತು ತಿಂಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಬೆಲೆ ಏರಿಕೆ ನಿರಂತರವಾಗಿದೆ. ಸಾಮಾನ್ಯ ಜನರಿಗೆ ಬರೆ ಎಳೆಯುವ ಕೆಲಸವಾಗುತ್ತಿದೆ. ದುಬಾರಿ ಜೀವನವನ್ನು ನಾಡಿನ ಜನ ನಡೆಸುವ ದುಸ್ಥಿತಿ ಕಾಂಗ್ರೆಸ್ ಸರ್ಕಾರ ನಿರ್ಮಾಣ ಮಾಡಿದೆ. ಉಸಿರಾಡುವ ಗಾಳಿ ಬಿಟ್ಟರೆ ಉಳಿದ ಎಲ್ಲವೂ ಬೆಲೆ ಏರಿಕೆ ನಿರಂತರವಾಗಿದೆ. ಮತದಾರರಿಗೆ ವರದಾನ ಆಗುವ ಬದಲು ಸರ್ಕಾರ ಶಾಪಗ್ರಸ್ಥವಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

ವಿದ್ಯುತ್ ದರ ಏಪ್ರಿಲ್ 1ರಿಂದ ಪ್ರತಿ ಯೂನಿಟ್ಗೆ 36 ಪೈಸೆ ಜಾಸ್ತಿ ಮಾಡಿದ್ದಾರೆ. ಹಾಲಿನ ದರ ನಾಲ್ಕು ರೂಪಾಯಿ ಜಾಸ್ತಿ ಮಾಡಿದ್ದಾರೆ. ಈಗಾಗಲೇ ಮೂರನೇ ಬಾರಿ ಜಾಸ್ತಿ ಮಾಡುತ್ತಿದ್ದಾರೆ. ಆಸ್ಪತ್ರೆಗಳಲ್ಲೂ ಚಿಕಿತ್ಸೆ ದರ ಜಾಸ್ತಿ ಮಾಡಿದ್ದಾರೆ. ಬಡವರು, ಗ್ರಾಮೀಣ ಭಾಗದಲ್ಲಿ ಸರ್ಕಾರಿ ಆಸ್ಪತ್ರೆಗೆ ಹೋಗುವ ಜನರಿಗೂ ಬರೆ ಎಳೆಯುತ್ತಿದೆ. ಅಫಿಡವಿಟ್, ಮುದ್ರಾಂಕ ಶುಲ್ಕ, ವೃತ್ತಿಪರ ತೆರಿಗೆ, ಬಸ್ ದರ ಜಾಸ್ತಿ ಮಾಡಿದ್ದಾರೆ.
ರಾಜ್ಯದ ಜನತೆಯ ಮೇಲೆ ಬೆಲೆ ಏರಿಕೆಯ ಹೊರೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನಡೆಯನ್ನು ಖಂಡಿಸಿ ಬಿಜೆಪಿ ವತಿಯಿಂದ ಏಪ್ರಿಲ್ 2ರಂದು ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ ಆರಂಭವಾಗಲಿದೆ ಎಂದು ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ.

ಶಾಸಕರು, ಮಾಜಿ ಶಾಸಕರು, ಎಮ್ಎಲ್ಸಿಗಳು, ಮಾಜಿ ಎಲ್ಸಿಗಳು, ವಿಧಾನ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದವರು ಎಲ್ಲರೂ ಪ್ರತಿಭಟನೆಯಲ್ಲಿ ಭಾಗಿಯಾಗುತ್ತಾರೆ. ಏಪ್ರಿಲ್ 5ರಂದು ಜಿಲ್ಲೆ, ತಾಲೂಕು ಮಟ್ಟದಲ್ಲಿ ಕಾರ್ಯಕರ್ತರು ಹೋರಾಟ ಮಾಡುತ್ತಾರೆ. ಏಪ್ರಿಲ್ 7ರಂದು ಮೈಸೂರಿನಿಂದ ಮಧ್ಯಾಹ್ನ ಮೂರು ಗಂಟೆಗೆ ಜನಾಕ್ರೋಶ ಹೋರಾಟ ಪ್ರಾರಂಭವಾಗುತ್ತದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಹೋರಾಟಕ್ಕೆ ಚಾಲನೆ ನೀಡಲಿದ್ದಾರೆ. ನಾಲ್ಕು ಹಂತದಲ್ಲಿ ರಾಜ್ಯ ಸರ್ಕಾರ ವಿರುದ್ಧ ಹೋರಾಟ ಪ್ರಾರಂಭ ಮಾಡುತ್ತೇವೆ ಎಂದು ವಿಜಯೇಂದ್ರ ಹೇಳಿದ್ದಾರೆ.
38,060 ಕೋಟಿ SCP-TSP ಹಣ ದುರುಪಯೋಗ ಆಗಿದೆ. ಇದನ್ನು ನಾವು ಖಂಡಿಸುತ್ತಿದ್ದೇವೆ. ಹೀಗಾಗಿ ಕಾಂಗ್ರೆಸ್ ವಿರುದ್ಧ ಎರಡು ಪ್ರಮುಖ ಹೋರಾಟ ಮಾಡುತ್ತೇವೆ. ಏಪ್ರಿಲ್ 7ನೇ ತಾರೀಖು ಮೈಸೂರು ಭಾಗದಲ್ಲಿ ಹೋರಾಟ ನಡೆಯುತ್ತದೆ. 8ನೇ ತಾರೀಖು ಮಂಡ್ಯ, 9ನೇ ತಾರೀಖು ಕೊಡಗು, ಮಂಗಳೂರು, 10ನೇ ತಾರೀಖು ಉಡುಪಿ, ಚಿಕ್ಕಮಗಳೂರಿನಲ್ಲಿ ಹೋರಾಟ ಮಾಡುತ್ತೇವೆ. 2ನೇ ಹಂತದ ಹೋರಾಟ ಶಿವಮೊಗ್ಗದಿಂದ 13ನೇ ತಾರೀಖು ಆರಂಭವಾಗುತ್ತದೆ. ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತೇವೆ. ಕಾಂಗ್ರೆಸ್ನವರು ಮುಸ್ಲಿಂ ಒಲೈಕೆಗಾಗಿ ಹಿಂದೂಗಳಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.












Click it and Unblock the Notifications