ಬಿಜೆಪಿ ರಾಜ್ಯಕಾರ್ಯಕಾರಿಣಿಗೆ ಕ್ಷಣಗಣನೆ: ವಿಧಾನಸಭಾ ಚುನಾವಣೆಯ ರೋಡ್ಮ್ಯಾಪ್ ಬಗ್ಗೆ ಚರ್ಚೆ
ಬೆಂಗಳೂರು, ಅ.7: ರಾಜ್ಯದಲ್ಲಿ ಕಾಂಗ್ರೆಸ್ನ ಭಾರತ್ ಜೋಡೊ ಯಾತ್ರೆಯ ಓಟ ಮುಂದುವರಿದಿರುವುದರ ಮಧ್ಯೆಯೇ ಬಿಜೆಪಿ ರಾಜ್ಯಕಾರ್ಯಕಾರಿಣಿ ಆರಂಭವಾಗಲಿದೆ. ಮುಂದಿನ ವಿಧಾನಸಭಾ ಚುನಾವಣೆಗೆ ಮಾರ್ಗ ರೂಪಿಸುವ ಬಗ್ಗೆ ಚರ್ಚೆ ನಡೆಯಲಿದೆ.
ರಾಜ್ಯ ಕಾರ್ಯಕಾರಿಣಿ ಸಭೆಯು ಅರಮನೆ ಮೈದಾನದ ತ್ರಿಪುರ ವಾಸಿನಿ, ಗೇಟ್ ನಂ.2 ರಲ್ಲಿ ನಡೆಯಲಿದೆ. ಬೆಳಗ್ಗೆ 10.00 ಗಂಟೆಗೆ ಧ್ವಜಾರೋಹಣ, 10.15ಕ್ಕೆ ಪ್ರದರ್ಶಿನಿ ಉದ್ಘಾಟನೆ ಹಾಗೂ ಬೆಳಿಗ್ಗೆ 10.30ಕ್ಕೆ ರಾಜ್ಯ ಕಾರ್ಯಕಾರಿಣಿ ಸಭೆ ಉದ್ಘಾಟನೆ ನೆರವೇರಲಿದೆ. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್, ಸಹ ಪ್ರಭಾರಿ ಡಿ.ಕೆ. ಅರುಣಾ ಹಾಗೂ ಕೋರ್ ಕಮಿಟಿ ಸದಸ್ಯರು, ಸಂಸದರು, ಸಚಿವರು, ಶಾಸಕರು, ಜಿಲ್ಲಾ ಪ್ರತಿನಿಧಿಗಳು ಸೇರಿ ಸುಮಾರು 500 ಜನ ಪಾಲ್ಗೊಳ್ಳಲಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವ ಸಮಯದಲ್ಲಿ ಮುಂದಿನ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಈ ಮಧ್ಯೆ ಅ.11ರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರ ಪ್ರವಾಸ ಆರಂಭಿಸಲಿದ್ದಾರೆ. ಈಗಾಗಲೇ ಅರುಣ್ ಸಿಂಗ್ ಮತ್ತು ನಳಿನ್ ಕುಮಾರ್ ಕಟೀಲು ಅವರ ಪ್ರವಾಸಗಳು ಆರಂಭವಾಗಿವೆ. ಮುಖ್ಯವಾಗಿ ಸದ್ಯ ಕಾಂಗ್ರೆಸ್ ಹಮ್ಮಿಕೊಂಡಿರುವ ಭಾರತ್ ಜೋಡೊ ಯಾತ್ರೆ ರಾಜ್ಯದಲ್ಲಿ ಸಾಗುತ್ತಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕರು ಹುರುಪಿನಲ್ಲಿದ್ದಾರೆ. ಪಾದಯಾತ್ರೆಗೆ ಉತ್ತಮ ಪ್ರತಿಕ್ರಿಯೆಯೂ ಸಿಗುತ್ತದೆ. ಜನರ ಗಮನ ಬೇರೆಡೆ ಸೆಳೆಯಲು ಬಿಜೆಪಿ ಪರ್ಯಾಯ ಮಾರ್ಗಗಳತ್ತ ಗಮನ ಹರಸಲಿದೆ.

ರೋಡ್ ಮ್ಯಾಪ್ ಕುರಿತ ಚರ್ಚೆ- ಅರುಣ್ ಸಿಂಗ್
2023ರಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದೆ. ಬಿಜೆಪಿ 150 ಸೀಟುಗಳನ್ನು ಗೆಲ್ಲುವ ಬಗ್ಗೆ ನಾಳೆ ನಡೆಯುವ ರಾಜ್ಯ ಕಾರ್ಯಕಾರಣಿಯಲ್ಲಿ ಚರ್ಚೆ ಮಾಡಲಿದ್ದೇವೆ. ಗೆಲುವಿಗೆ ರೋಡ್ ಮ್ಯಾಪ್ ತಯಾರಿಸಲಿದ್ದೇವೆ. ಕಾಂಗ್ರೆಸ್ ಭ್ರಷ್ಟರ ಪಕ್ಷ, ಷಡ್ಯಂತ್ರಗಳ ಪಕ್ಷ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ತಿಳಿಸಿದ್ದಾರೆ.

ಯತ್ನಾಳ್ ವಿರುದ್ಧ ಕ್ರಮ?
ಶಾಸಕ ಯತ್ನಾಳ್ ಹೇಳಿಕೆ ವಿಚಾರದ ಪ್ರಶ್ನೆಗೆ ಉತ್ತರಿಸಿದ ಅವರು, ಯತ್ನಾಳ್ ಇದೇ ಮೊದಲಬಾರಿ ಹೇಳಿಕೆ ನೀಡಿಲ್ಲ. ಯತ್ನಾಳ್ ಹೇಳಿಕೆಯನ್ನು ಯಾರೂ ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಅವರ ಹೇಳಿಕೆ ಗಂಭೀರವಾಗಿ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ ಎಂದು ಉತ್ತರ ನೀಡಿದರು.
ಕರ್ನಾಟಕದಲ್ಲಿ ರಾಹುಲ್ ಗಾಂಧಿ ಯಾತ್ರೆ ನಡೆಯುತ್ತಿದೆ. ಚುನಾವಣೆ ಗಮನದಲ್ಲಿ ಇಟ್ಟುಕೊಂಡು ಆರೋಪ ಮಾಡೋದು ಅವರ ಕೆಲಸ. ಕೇವಲ ಆರೋಪ ಮಾಡಲು ಇಡೀ ಯಾತ್ರೆ ಮಾಡುತ್ತಿದ್ದಾರೆ. ಆದರೂ, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ನೆಲಕಚ್ಚಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬೊಮ್ಮಾಯಿ ಮೇಲೆ ಆರೋಪಗಳಿಲ್ಲ
ಬಸವರಾಜ ಬೊಮ್ಮಾಯಿ ಅವರು ರೈತರ ಮಕ್ಕಳಿಗೆ ಶಿಕ್ಷಣಕ್ಕೆ ಧನಸಹಾಯ ಮಾಡಿದ್ದಾರೆ. ಬಡವರ ಅಭಿವೃದ್ಧಿಗೆ ಕೆಲಸ ಮಾಡುತ್ತಿದ್ದಾರೆ. ಬೊಮ್ಮಾಯಿ ಬಡವರ, ರೈತರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಸಮಗ್ರ ಅಭಿವೃದ್ಧಿಯ ಚಿಂತನೆಯೊಂದಿಗೆ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.
ಬೊಮ್ಮಾಯಿ ಅವರು ರಾಜಕೀಯ ಇತಿಹಾಸದಲ್ಲಿ ಅನೇಕ ಸಚಿವ ಸ್ಥಾನ ನಿಭಾಯಿಸಿದ್ದಾರೆ. ಆದರೆ, ಎಂದೂ ಅವರ ಮೇಲೆ ಆರೋಪ ಬಂದಿಲ್ಲ. ಅವರ ಮೇಲೆ ಆರೋಪ ಮಾಡೋದು ಸರಿಯಲ್ಲ ಎಂದ ಅವರು, 2023ರ ವೇಳೆಗೆ ಕಾಂಗ್ರೆಸ್ ಸಂಪೂರ್ಣ ನೆಲ ಕಚ್ಚಲಿದೆ ಎಂದು ನುಡಿದರು.

ಹೊಸಬಾಳೆ ಹೇಳಿಕೆಗೆ ಪ್ರತಿಕ್ರಿಯಿಸಿದ ಅರುಣ್ ಸಿಂಗ್
ಆರೆಸ್ಸೆಸ್ ಹಿರಿಯ ಮುಖಂಡ ದತ್ತಾತ್ರೇಯ ಹೊಸಬಾಳೆ ಅವರ ಹೇಳಿಕೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಧಾನಿ ಮೋದಿಜಿ ಅವರ ಆಡಳಿತದಲ್ಲಿ ನಿರಂತರವಾಗಿ ಉದ್ಯೋಗ ಸೃಷ್ಟಿ ಮಾಡಲಾಗುತ್ತಿದೆ. ಸ್ಟಾರ್ಟಪ್ ಗಳಿಗೆ ಉತ್ತೇಜನ ಕೊಡಲಾಗುತ್ತಿದೆ. ಭಾರತವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ ಎಂದು ತಿಳಿಸಿದರು.
40% ಭ್ರಷ್ಟಾಚಾರ ಆರೋಪ ಮಾಡುತ್ತಿರುವ ಕಾಂಗ್ರೆಸ್ ಮುಖಂಡರು ಆ ಕುರಿತು ದಾಖಲೆಗಳಿದ್ದರೆ ಲೋಕಾಯುಕ್ತಕ್ಕೆ ದಾಖಲೆ ನೀಡಲಿ. ಲೋಕಾಯುಕ್ತ ಇರುವಾಗ ನ್ಯಾಯಾಂಗ ತನಿಖೆ ಯಾಕೆ.? ಎಂದು ಕೇಳಿದರು. ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಆಯ್ಕೆ ವಿಚಾರವು ಆ ಪಕ್ಷದ ಆಂತರಿಕ ವಿಚಾರ. ಅದರ ಬಗ್ಗೆ ಯಾವುದೇ ಚರ್ಚೆ ಮಾಡಲು ಬಯಸುವುದಿಲ್ಲ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.












Click it and Unblock the Notifications