ಸತೀಶ್ ಜಾರಕಿಹೊಳಿ ಭೇಟಿ ಕುರಿತು ಬಿ ವೈ ವಿಜಯೇಂದ್ರ ಸ್ಪಷ್ಟನೆ
ಬೆಂಗಳೂರು,ಅಕ್ಟೋಬರ್ 07: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಗುಸು ಗುಸು ನಡೆಯುತ್ತಿರುವ ಹೊತ್ತಲಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಭೇಟಿ ಮಾಡಿರುವುದು ಹಲವು ಪ್ರಶ್ನೆಗಳಿಗೆ ಎಡೆಮಾಡಿಕೊಟ್ಟಿದೆ. ಸತೀಶ್ ಜಾರಕಿಹೊಳಿ ಅವರನ್ನ ಭೇಟಿಯಾಗಿದ್ದು ಯಾಕೆ ಎಂಬ ಬಗ್ಗೆ ವಿಜಯೇಂದ್ರ ಅವರೇ ಸ್ಪಷ್ಟನೆ ನೀಡಿದ್ದಾರೆ.
ಸತೀಶ್ ಜಾರಕಿಹೊಳಿ ಅವರ ಭೇಟಿಯ ಬಳಿಕ ಮಾಧ್ಯಮಗಳ ಜೊತೆಗೆ ಬಿ ವೈ ವಿಜಯೇಂದ್ರ ಅವರು ಮಾತನಾಡಿ, ಶಿಕಾರಿಪುರ ರಾಜ್ಯ ಹೆದ್ದಾರಿಯಲ್ಲಿ ನಮ್ಮ ಜಿಲ್ಲೆಯಲ್ಲಿ 2 ಟೋಲ್ ಇವೆ. ಶಿಕಾರಿಪುರ ತಾಲ್ಲೂಕಿನ ಟೋಲ್ ನಿಂದ ರೈತರು, ಬಡವರಿಗೆ ಅನಾನುಕೂಲ ಆಗಿದೆ. ಮೂರು ಜಿಲ್ಲೆಗಳ ಜನರು ಈ ಹೈವೇ ಉಪಯೋಗಿಸುತ್ತಿದ್ದು, ಒಂದೇ ಜಿಲ್ಲೆಯಲ್ಲಿ 2 ಟೋಲ್ ಇವೆ. ಟೋಲ್ ವರ್ಗಾಯಿಸಿ ಬಡವರಿಗೆ ಪ್ರಯೋಜನ ದೊರಕಿಸಿಕೊಡಲು ಕೋರಿದ್ದಾಗಿ ಸತೀಶ್ ಜಾರಕಿಹೊಳಿ ಅವರಿಗೆ ತಿಳಿಸಿದ್ದೇವೆ.

ಟೋಲ್ ವರ್ಗಾವಣೆಗೆ 2-3 ಬಾರಿ ಹೋರಾಟವೂ ನಡೆದಿದೆ. ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ವಿಚಾರದಲ್ಲಿ ಚರ್ಚಿಸಲು ಶೀಘ್ರವೇ ಅಧಿಕಾರಿಗಳ ಸಭೆ ಕರೆಯುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು. ಶಿಕಾರಿಪುರ ಕ್ಷೇತ್ರದ ಸಮಸ್ಯೆಗಳ ಕುರಿತು ಮಾತನಾಡಿದ್ದೇನೆ. ರಾಜಕಾರಣ ಮಾತನಾಡಿಲ್ಲ ಎಂದು ಹೇಳಿದರು.
ನಾನೊಬ್ಬ ಜನಪ್ರತಿನಿಧಿಯಾಗಿ, ಶಾಸಕನಾಗಿ ನನ್ನ ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸುವುದು ನನ್ನ ಆದ್ಯ ಕರ್ತವ್ಯ. ಬೇರೆಯವರಿಂದ ಕೇಳಿ ತಿಳಿದುಕೊಳ್ಳುವ ಅಗತ್ಯ ಇಲ್ಲ. ತಲೆ ಹಿಡಿಯುವ ರಾಜಕಾರಣ ಮಾಡುವುದಿಲ್ಲ. ತಂದೆಯವರಾದ ಯಡಿಯೂರಪ್ಪ ಅವರ ರಾಜಕೀಯ ಜೀವನವನ್ನು ನೋಡಿದ್ದೀರಿ. ರಾಜ್ಯಾಧ್ಯಕ್ಷನಾಗಿ ಪಕ್ಷ ಮುನ್ನಡೆಸುವುದರ ಕುರಿತು, ನನಗೆ ಕೆಲಸದ ಸ್ಪಷ್ಟತೆ ಇದೆ. ಸಮಸ್ಯೆಗೆ ಸ್ಪಂದಿಸುವುದು ನನ್ನ ಕರ್ತವ್ಯ. ಆ ನಿಟ್ಟಿನಲ್ಲಿ ಸಚಿವರನ್ನು ಭೇಟಿ ಮಾಡಿದ್ದೇನೆ.
ಸಿಎಂ ರಾಜೀನಾಮೆ ಕೊಡುವ ಕಾಲ ಸನ್ನಿಹಿತವಾಗಿದೆ. ಯಾವ ಸಂದರ್ಭದಲ್ಲಿ ಬೇಕಾದರೂ ರಾಜೀನಾಮೆ ಕೊಟ್ಟೇ ಕೊಡುತ್ತಾರೆ. ಸಿಎಂ ರಾಜೀನಾಮೆಗೆ ಕ್ಷಣಗಣನೆ ಎಂಬ ಹೇಳಿಕೆ ಹಿನ್ನೆಲೆ ಕುರಿತ ಪ್ರಶ್ನೆಗೆ ಉತ್ತರಿಸಿದರು. ಸಾಕಷ್ಟು ಜನ ಸಚಿವರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಪಾಪ ಏನೋ ಪ್ಲಾನ್ ಜೊತೆ ಖರ್ಗೆಯವರ ಮನೆಗೆ ಹೋಗಿದ್ದರು. ಬರೇ ಬಿಲ್ಡಿಂಗ್ ಫೋಟೊ ಕಾಣುತ್ತಿತ್ತು. ಅದೇನು ಪ್ಲಾನ್ ಎಂದು ಗೊತ್ತಾಗಿಲ್ಲ ಎಂದು ವ್ಯಂಗ್ಯವಾಗಿ ತಿಳಿಸಿದರು.
ವಿಜಯೇಂದ್ರ ಅವರು ಸಿಎಂ ಕನಸು ಕಾಣುತ್ತಿದ್ದಾರೆ. ಹಾಗಾಗಿ ಸರಕಾರ ಪತನಕ್ಕೆ ಷಡ್ಯಂತ್ರ ನಡೆಸುತ್ತಿದ್ದಾರೆ ಎಂಬ ಮಾತುಗಳಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕನಸು ಕಾಣುವ ಸಂದರ್ಭ ಬಂದರೆ ಹೇಳುವೆ; ಸದ್ಯಕ್ಕೆ ಬೇಡ ಎಂದು ನಗುತ್ತಾ ತಿಳಿಸಿದರು.
ಆರೋಪಿ ಸ್ಥಾನದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಒಂದು ಪಾರದರ್ಶಕ ತನಿಖೆಗೆ ಅವಕಾಶ ಮಾಡಿಕೊಡಬೇಕು ಎಂಬ ಆಗ್ರಹವನ್ನು ಬಿಜೆಪಿ ನಿರಂತರವಾಗಿ ಮಾಡುತ್ತ ಬಂದಿದೆ. ನಮ್ಮ ವಿಚಾರಗಳು ಸ್ಪಷ್ಟ ಇದೆ ಎಂದು ತಿಳಿಸಿದರು.
ಸಿದ್ದರಾಮಯ್ಯನವರ ನೇತೃತ್ವದ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಈ ಸರಕಾರ ಬಂದ ಮೇಲೆ ಅಭಿವೃದ್ಧಿ ಎಂಬುದು ಸ್ಥಗಿತ ಎಂಬುದಕ್ಕಿಂತ ಶುರುವೇ ಆಗಿಲ್ಲ ಎಂದು ಟೀಕಿಸಿದರು. ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಇದರ ನಡುವೆ ಜನರೂ ಈ ಸರಕಾರದ ಬಗ್ಗೆ ವಿಶ್ವಾಸ ಕಳಕೊಂಡಿದ್ದಾರೆ ಎಂದು ವಿಶ್ಲೇಷಿಸಿದರು. ಮುಡಾ, ವಾಲ್ಮೀಕಿ ನಿಗಮದ ಹಗರಣಗಳ ಪಾರದರ್ಶಕ ತನಿಖೆಯ ದೃಷ್ಟಿಯಿಂದ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕಿದೆ. ಭಂಡತನ ಮಾಡುವುದು ಅವರಿಗೆ ಶೋಭೆ ತರುವುದಿಲ್ಲ ಎಂದರು.
ಒಳಮೀಸಲಾತಿ ಬಗ್ಗೆ ಸಿದ್ದರಾಮಯ್ಯನವರು ಮಾತನಾಡುತ್ತಿದ್ದಾರೆ. ಎಲ್ಲೋ ಒಂದು ಕಡೆ ಪ್ರಾಮಾಣಿಕತೆಯ ಕೊರತೆ ಎದ್ದು ಕಾಣುತ್ತಿದೆ. ಮುಖ್ಯಮಂತ್ರಿಗಳಿಗೆ ಜಾತಿಗಣತಿ ವಿಚಾರದಲ್ಲಿ ಪ್ರಾಮಾಣಿಕತೆ ಇದ್ದಿದ್ದೇ ಆದರೆ, ಹಿಂದಿನ ಅವಧಿಯಲ್ಲಿ ಕೈಸೇರಿದ್ದ ವರದಿಯನ್ನು ಅವತ್ತೇ ಅನುಷ್ಠಾನ ಮಾಡಬಹುದಿತ್ತು. ಅವತ್ಯಾಕೆ ಮಾಡಿಲ್ಲ? ಈಗ ಸಿಎಂ ಕುರ್ಚಿ ಅಲ್ಲಾಡುತ್ತಿರುವಾಗ ತಕ್ಷಣ ಅವರಿಗೆ ಜ್ಞಾನೋದಯ ಆಗಿದೆ. ನೆನಪು ಕೂಡ ಆಗಿದೆ. ಕ್ಯಾಬಿನೆಟ್ಗೆ ತಂದು ಅನುಷ್ಠಾನ ಮಾಡುವುದಾಗಿ ಹೇಳಿದ್ದಾರೆ ಎಂದರು.
ಇವತ್ತು ಡಿ.ಕೆ.ಶಿವಕುಮಾರ್ ಅವರೇನು ಹೇಳಿದ್ದಾರೆ? ಒಕ್ಕಲಿಗರ ಸಂಘದ ಅಧ್ಯಕ್ಷ ಬಾಲಕೃಷ್ಣ ಅವರೇನು ಹೇಳಿದ್ದಾರೆ? ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಏನು ಹೇಳಿದ್ದಾರೆ? ಎಲ್ಲವನ್ನೂ ತಾವು ಗಮನಿಸಬೇಕು; ರಾಜಕೀಯ ಬೇರೆ; ಆದರೆ, ರಾಜಕೀಯದ ಹೊರತಾಗಿ ಮುಖ್ಯಮಂತ್ರಿಗಳು ನಡೆದುಕೊಳ್ಳಬೇಕಿದೆ. ಮುಖ್ಯಮಂತ್ರಿಗಳು ರಾಜ್ಯದ ಎಲ್ಲ ವರ್ಗ, ಸಮುದಾಯಗಳಿಗೆ ನ್ಯಾಯ ಕೊಡಬೇಕು. ಇವತ್ತು ಹಿಂದುಳಿದ ವರ್ಗಗಳು, ಶೋಷಿತ ಸಮುದಾಯಗಳಿಗೆ ನ್ಯಾಯ ಕೊಡಬೇಕೆಂಬುದರಲ್ಲಿ ಎರಡು ಮಾತಿಲ್ಲ. ಅದರಿಂದ ಮತ್ತೊಬ್ಬರಿಗೆ ಅನ್ಯಾಯ ಆಗಬಾರದು. ನ್ಯಾಯಯುತವಾಗಿ ನಡೆದುಕೊಳ್ಳಬೇಕಿದೆ. ಜಾತಿಗಣತಿ ಅವೈಜ್ಞಾನಿಕ ಎಂಬುದು ಎಲ್ಲರ ಅಭಿಪ್ರಾಯ ಎಂದು ವಿಶ್ಲೇಷಿಸಿದರು. ತಮ್ಮ ಸ್ಥಾನಕ್ಕೆ ಕುತ್ತು ಬಂದಾಗ ಮುಖ್ಯಮಂತ್ರಿಗಳು ಭಾವನಾತ್ಮಕ ರಾಜಕಾರಣ ಮಾಡುತ್ತಿರುವ ಪ್ರಯತ್ನ ಎಂಬ ಭಾವನೆ ಎಲ್ಲರದೂ ಕೂಡ ಎಂದು ತಿಳಿಸಿದರು.












Click it and Unblock the Notifications