ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಲ್ಲಿ ಬಣ ಬಡಿದಾಟ: ಕುಮಾರಸ್ವಾಮಿ ಮೂಲಕ ಹೈಕಮಾಂಡ್ ಕೈ ಸೇರಿದಿಯಾ ಆ ವರದಿ
ಬೆಂಗಳೂರು, ಫೆಬ್ರವರಿ 10: ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಲ್ಲಿ ಬಣ ಬಡಿದಾಟ ಜೋರಾಗಿದೆ. ಫೆಬ್ರವರಿ ಮಾಸಾಂತ್ಯದೊಳಗೆ ರಾಜ್ಯ ಬಿಜೆಪಿ ಅಧ್ಯಕ್ಷರ ಆಯ್ಕೆ ಚುನಾವಣೆಯೂ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಈ ನಡುವೆ, ರಾಜ್ಯ ಬಿಜೆಪಿ ರೆಬೆಲ್ ನಾಯಕರ ಆರೋಪ-ಆಕ್ಷೇಪಗಳು, ತಟಸ್ಥ ಬಣದ ನಿಗೂಢ ನಡೆ, ಬಣ ಬಡಿದಾಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ವರಿಷ್ಠರು ತರಾತುರಿಯಲ್ಲಿ ರಾಜ್ಯಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸಲು ಒಲವು ತೋರಿಸಿಲ್ಲ ಎಂದು ತಿಳಿದು ಬಂದಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆ ಕುರಿತು ವಿಜಯೇಂದ್ರ ಬಣ, ಬಸವನಗೌಡ ಪಾಟೀಲ್ ಯತ್ನಾಳ್ ಬಣ ಹಾಗೂ ತಟಸ್ಥ ಬಣದ ಮಾಹಿತಿಯ ಜೊತೆಗೆ ಇನ್ನೊಂದು ಮೂಲಗಳ ಪ್ರಕಾರ ಮಾಹಿತಿ ಸಂಗ್ರಹಕ್ಕೆ ಹೈಕಮಾಂಡ್ ಮುಂದಾಗಿದೆ. ಮತ್ತೊಂದು ಸುತ್ತಿನಲ್ಲಿ ಸದ್ದಿಲ್ಲದೆ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದು, ಫೆಬ್ರವರಿ 25ರೊಳಗೆ ರಾಜ್ಯಾಧ್ಯಕ್ಷರ ಆಯ್ಕೆ ಚುನಾವಣೆ ನಡೆಯುವ ಸಾಧ್ಯತೆ ಇದೆ. ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರ ಮೂಲಕ ಬಿಜೆಪಿ ಹೈಕಮಾಂಡ್ ಮತ್ತೊಂದು ಮಾಹಿತಿ ಸಂಗ್ರಹಕ್ಕೆ ಮುಂದಾಗಿದೆ ಎಂದು ತಿಳಿದು ಬಂದಿದೆ.

ಈ ಕುರಿತು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರು ಮಾತನಾಡಿ, ಬಿಜೆಪಿ ಪಕ್ಷದಲ್ಲಿ ಆಗುತ್ತಿರುವ ಘಟನೆಗಳ ಬಗ್ಗೆ ನಾನು ಮಾತನಾಡಿದರೆ ತಪ್ಪಾಗುತ್ತದೆ. ಸರಿ ಮಾಡಿಕೊಳ್ಳಿ ಎಂದು ಸ್ನೇಹಿತರಿಗೆ ಹೇಳಿದ್ದೇನೆ. ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದು, ಬಲಿಷ್ಠ ನಾಯಕತ್ವವನ್ನು ಹೊಂದಿದೆ. ಹೀಗಾಗಿ ಶೀಘ್ರವೇ ಎಲ್ಲವೂ ಸರಿ ಹೋಗುತ್ತದೆ ಎನ್ನುವ ನಿರೀಕ್ಷೆ ನನ್ನಲ್ಲಿದೆ ಎಂದು ಉತ್ತರಿಸಿದ್ದಾರೆ.
ಸತತ ಮೂರು ವಿಧಾನಸಭೆ ಚುನಾವಣೆಗಳಲ್ಲಿಯೂ ದೆಹಲಿಯಲ್ಲಿ ಶೂನ್ಯ ಸಾಧನೆ ಮಾಡಿರುವ ಕಾಂಗ್ರೆಸ್ ಇನ್ನಾದರೂ ಆತ್ಮಾವಲೋಕನ ಮಾಡಿಕೊಳ್ಳಬೇಕು. ರಾಜ್ಯದ ಕಾಂಗ್ರೆಸ್ ನಾಯಕರು ಹೇಗೆ ವರ್ತನೆ ಮಾಡುತ್ತಿದ್ದಾರೆ ಎಂಬುದನ್ನು ಜನ ನೋಡುತ್ತಿದ್ದಾರೆ. ದೆಹಲಿ ಫಲಿತಾಂಶದ ಬಗ್ಗೆ ಈಗಲಾದರೂ ಅವಲೋಕನ ಮಾಡಿಕೊಳ್ಳುವುದು ಉಚಿತ. ದೇಶದಲ್ಲಿ ತಾವು ಯಾವ ಸ್ಥಿತಿಯಲ್ಲಿದ್ದೇವೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಆರ್ಥಿಕ ವ್ಯವಸ್ಥೆಯನ್ನು,ರಾಜ್ಯದ ಅಭಿವೃದ್ಧಿಯನ್ನು ಹಾಳು ಮಾಡುತ್ತಿರುವ ಆ ಪಕ್ಷಕ್ಕೆ ರಾಜ್ಯದಲ್ಲಿಯೂ ತಕ್ಕಪಾಠ ಕಲಿಸಲಿದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದರು.
ದೆಹಲಿಯಲ್ಲಿ ಮತದಾರರು ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶದಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳನ್ನು ನೋಡಿ ಮತ ಹಾಕಿದ್ದಾರೆ. ಭ್ರಷ್ಟಾಚಾರವನ್ನು ಸೋಲಿಸಿ ಅಭಿವೃದ್ಧಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣವಾಗಿ ಮೂಲೆಗೆ ತಳ್ಳಿದ್ದಾರೆ. ಇದನ್ನು ನೋಡಿದರೆ, ದೇಶ ರಾಜಕಾರಣ ಯಾವ ದಿಕ್ಕಿನಲ್ಲಿದೆ ಎಂಬುದು ಅರ್ಥವಾಗುತ್ತದೆ ಎಂದು ಸಚಿವರು ಹೇಳಿದರು.
ಹುಬ್ಬಳ್ಳಿಯಲ್ಲಿ ಅವಿಭಜಿತ ಜನತಾದಳ (ಜೆಡಿಎಸ್ ಮತ್ತು ಜೆಡಿಯು) ಆಸ್ತಿಯನ್ನು ಕಾಂಗ್ರೆಸ್ ಏಕಾಏಕಿ ಕಬಳಿಸಿರುವ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವರು; ಕಾಂಗ್ರೆಸ್ ನಾಯಕರು ಅಧಿಕಾರದ ಮಾಡದಿಂದ ಮೆರೆಯುತ್ತಿದ್ದಾರೆ. ಈ ಕುರಿತ ದಾಖಲೆಗಳನ್ನು ತರಿಸಿ ನೋಡುತ್ತೇನೆ. ಆಮೇಲೆ ಕಾನೂನು ಪ್ರಕಾರ ಏನು ಮಾಡಬೇಕೋ ಮಾಡುತ್ತೇನೆ. ಕಾಂಗ್ರೆಸ್ ನವರು ಅಧಿಕಾರ ದುರುಪಯೋಗ ಮಾಡಿಕೊಂಡು ಈ ರೀತಿ ಮಾಡಿದ್ದಾರೆ ಎಂದರು.












Click it and Unblock the Notifications