ಅಲ್ಪಸಂಖ್ಯಾತ ಶಿಕ್ಷಣ ಕಾಯ್ದೆ ತಿದ್ದುಪಡಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರೋಧ: ಯಾಕೆ?
ಬೆಂಗಳೂರು, ಡಿಸೆಂಬರ್ 07: ನಿನ್ನೆ (ಡಿಸೆಂಬರ್ 06) ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ಮಾಡಿ ಅನುಮೋದಿಸಲಾಗಿದೆ. ಈ ವೇಳೆ ಸರ್ಕಾರ ಅಲ್ಪಸಂಖ್ಯಾತರ ಪರ ಮತ್ತೊಂದು ನಿರ್ಣಯ ಕೈಗೊಂಡಿದೆ. ಅಲ್ಪಸಂಖ್ಯಾತ ಶಿಕ್ಷಣ ಕಾಯ್ದೆ ತಿದ್ದುಪಡಿಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಿದೆ. ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಿಗೆ ಮಾನ್ಯತೆ ನೀಡಲು ನಿಬಂಧನೆ, ಷರತ್ತು ಸಡಿಲಿಸಲಾಗಿದೆ. ರಾಜ್ಯ ಸರ್ಕಾರದ ಈ ನಿರ್ಧಾರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಖಂಡಿಸಿದ್ದಾರೆ.
ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಬಿ.ವೈ ವಿಜಯೇಂದ್ರ, ಅಲ್ಪಸಂಖ್ಯಾತರ ಭಾಷೆ, ಸಂಸ್ಕೃತಿಯ ರಕ್ಷಣೆಯ ದೃಷ್ಟಿಯಿಂದ ಸಂವಿಧಾನದಲ್ಲಿ ಅಲ್ಪಸಂಖ್ಯಾತರಿಗೆ ಶಿಕ್ಷಣ ಸಂಸ್ಥೆ ಸ್ಥಾಪಿಸುವ ಹಕ್ಕು ನೀಡಲಾಗಿದೆ. ಅಲ್ಪಸಂಖ್ಯಾತ ಸಮುದಾಯದವರು ಸ್ಥಾಪಿಸಿ ಮುನ್ನಡೆಸುವ ಶಿಕ್ಷಣ ಸಂಸ್ಥೆಗಳಲ್ಲಿ ಆಯಾ ಧರ್ಮದ ಅಥವಾ ಭಾಷಿಕರ ಸಂಖ್ಯೆ ಶೇ.90 ರಷ್ಟು ಇರಬೇಕು ಎನ್ನುವುದು ಕಾಯ್ದೆಯ ವ್ಯಾಖ್ಯಾನವಾಗಿದೆ. ಇಂತಹ ಸಂಸ್ಥೆಗಳು ಮಾತ್ರ ಅಲ್ಪಸಂಖ್ಯಾತ ಸ್ಥಾನಮಾನ ಹೊಂದಲು ಅವಕಾಶ ನೀಡಲಾಗಿದೆ.

ಈ ಹಿಂದಿನಿಂದಲೂ ಅಲ್ಪಸಂಖ್ಯಾತರನ್ನು ತುಷ್ಟೀಕರಣ ಮಾಡುವುದು ತನ್ನ ಮೊದಲ ಆದ್ಯತೆ ಎಂಬಂತೆ ನಡೆದುಕೊಳ್ಳುತ್ತಿರುವ ಕಾಂಗ್ರೆಸ್, ಕರ್ನಾಟಕದಲ್ಲಿ ವಿಪರೀತ ಎನ್ನುವಷ್ಟರಮಟ್ಟಿಗೆ ಅಲ್ಪಸಂಖ್ಯಾತರನ್ನು ಓಲೈಸುತ್ತಿದೆ. ಇದೀಗ ಅಲ್ಪ ಸಂಖ್ಯಾತರ ಆಡಳಿತ ಮಂಡಳಿ ಇರುವ ಶಿಕ್ಷಣ ಸಂಸ್ಥೆಗಳಿಗೆ ಬೆನ್ನೆಲುಬಾಗುವ ದೃಷ್ಟಿಯಿಂದ ಆ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳ ಸಂಖ್ಯೆ ಕನಿಷ್ಠವಿದ್ದರೂ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ನಿರ್ಧಾರ ಕೈಗೊಂಡಿದೆ.
ನಿನ್ನೆಯ ಸಂಪುಟದ ನಿರ್ಣಯ ಕನ್ನಡ ನಾಡು, ನುಡಿ, ಸಂಸ್ಕೃತಿಯ ಬೆಳವಣಿಗೆಗೆ ಕೊಡಲಿ ಪೆಟ್ಟು ನೀಡುವ ಮಾರಕ ನಿರ್ಧಾರವಾಗಿದೆ.
ಬೆಂಗಳೂರನ್ನು ಕೇಂದ್ರೀಕರಿಸಿದಂತೆ ರಾಜ್ಯದಲ್ಲಿ ಅನೇಕ ಅಲ್ಪಸಂಖ್ಯಾತ ಆಡಳಿತ ಮಂಡಳಿಯ ಶಿಕ್ಷಣ ಸಂಸ್ಥೆಗಳು ಈಗಾಗಲೇ ತಮ್ಮ ಕಬಂದಬಾಹುವಿನಿಂದ ಶಿಕ್ಷಣ ವ್ಯವಸ್ಥೆಯನ್ನು ಆಪೋಶನ ಮಾಡಿಕೊಂಡಿವೆ.

ಇಂತಹ ಸಂಸ್ಥೆಗಳಲ್ಲಿ ಕನ್ನಡ ಕಲಿಕೆ ಮತ್ತು ಕರ್ನಾಟಕ ಸಂಸ್ಕೃತಿಯನ್ನು ಕಾಣುವುದು ವಿರಳವಾಗುತ್ತಿದೆ. ಇದರ ನಡುವೆ ಅಲ್ಪಸಂಖ್ಯಾತರು ನಡೆಸುವ ಸಂಸ್ಥೆಗಳಿಗೆ ಇನ್ನಷ್ಟು ಶಕ್ತಿ ತುಂಬುವ ನಿಟ್ಟಿನಲ್ಲಿ ಅಲ್ಪಸಂಖ್ಯಾತ ಸ್ಥಾನಮಾನ ಕೊಡಲು ಉದಾರತೆ ತೋರುತ್ತಿರುವ ಸರ್ಕಾರದ ನಿರ್ಣಯ ಅತ್ಯಂತ ಖಂಡನೀಯ. ಇದು ಸಂವಿಧಾನಕ್ಕೆ ಬಗೆಯುತ್ತಿರುವ ಅಪಚಾರವೂ ಹೌದು.
ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳೆಂದರೆ ಅಲ್ಲಿ ಕನಿಷ್ಠ ಶೇ 75 % ರಷ್ಟಾದರೂ ಆಯಾ ಧರ್ಮದ ಅಥವಾ ಆಯಾ ಭಾಷಿಕ ವಿದ್ಯಾರ್ಥಿಗಳು ಇರಲೇಬೇಕು ಎಂಬ ನಿಯಮವನ್ನು ಕಾಯ್ದೆಗೆ ವಿರುದ್ಧವಾಗಿ ತಿದ್ದುಪಡಿ ಮಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರ ಈ ನಿರ್ಧಾರವನ್ನು ವಾಪಾಸ್ ಪಡೆದುಕೊಳ್ಳಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯವಾದೀತು ಎಂದು ಎಚ್ಚರಿಸ ಬಯಸುತ್ತೇನೆ ಎಂದು ರಾಜ್ಯ ಸರ್ಕಾರದ ಅಲ್ಪಸಂಖ್ಯಾತ ಶಿಕ್ಷಣ ಕಾಯ್ದೆ ತಿದ್ದುಪಡಿ ನಿರ್ಧಾರವನ್ನು ಬಿ.ವೈ ವಿಜಯೇಂದ್ರ ಖಂಡಿಸಿದ್ದಾರೆ.












Click it and Unblock the Notifications