BJP Election: ಚುನಾವಣೆ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ನಿರ್ಧಾರ: ಪ್ರಹ್ಲಾದ್ ಜೋಶಿ
ಬೆಂಗಳೂರು, ಜನವರಿ 03: ಕರ್ನಾಟಕದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮುಂದಿನ ದಿನಗಳಲ್ಲಿ ಚುನಾವಣೆ ನಡೆಸಲು ಪಕ್ಷ ಪ್ಲಾನ್ ಮಾಡಿಕೊಂಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಮಾಹಿತಿ ನೀಡಿದ್ದಾರೆ. ಈಗಾಗಲೇ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ವರಿಷ್ಠರು ಆ ಸ್ಥಾನಕ್ಕೆ ಆಯ್ಕೆ ಮಾಡಿದಾಗ ಎದ್ದಿದ್ದ ಅಸಮಾಧಾನ, ವಿರೋಧ, ಟೀಕೆ ಟಿಪ್ಪಣಿಗಳು ಮುಂದೆ ಎದರಾಗದಂತೆ ಮಾಡಲು ಚುನಾವಣೆಗೆ ತೀರ್ಮಾನಸಲಾಗಿದೆ ಎಂಬ ಮಾತುಗಳು ಕೇಳಿ ಬಂದಿದೆ.
ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು, ಕರ್ನಾಟಕದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರನ್ನು ಚುನಾವಣೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಶಿವರಾಜ್ ಸಿಂಗ್ ಚೌಹಾಣ್ ಅವರು ಇದರ ಮೇಲ್ವಿಚಾರಕರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಹಾಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರನ್ನು ಚುನಾವಣೆ ಮೂಲಕ ಆಯ್ಕೆ ಮಾಡಲಾಗಿಲ್ಲ. ಬದಲಾಗಿ ಕೇಂದ್ರ ವರಿಷ್ಠರು ಸೇರಿಕೊಂಡು ಎಲ್ಲ ಸಮ್ಮತಿ ಮೇರೆಗೆ ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿ ನೂತನ ರಾಜ್ಯಾಧ್ಯಕ್ಷರನ್ನಾಗಿ ಮಾಡಲಾಯಿತು. ಆದರೆ ಮುಂದಿನ ದಿನಗಳಲ್ಲಿ ಚುನಾವಣೆ ಮೂಲಕವೇ ಆಯ್ಕೆ ಮಾಡಲಾಗುವುದು ಎಂದು ಪುನರುಚ್ಚರಿಸಿದರು.
ಪಕ್ಷದ ಬೇರೆ ಬೇರೆ ಹಂತಗಳಲ್ಲಿ ಚುನಾವಣೆ ನಡೆಯುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೂ ಚುನಾವಣೆ ನಡೆಸಿ ಆಯ್ಕೆ ಮಾಡಲಾಗುವುದು ಎಂದರು.
ಸದ್ಯ ರಾಜ್ಯದಲ್ಲಿ ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನ ಆರಂಭಿಸಲಾಗಿದೆ. ಅದು ಪ್ರಗತಿಯಲ್ಲಿದೆ. ಇದಾದ ಬಳಿಕ ಪಕ್ಷದ ಪದಾಧಿಕಾರಿಗಳ ಚುನಾವಣೆ ಜರುಗಲಿದೆ. ಬೂತ್ ಅಧ್ಯಕ್ಷರ ಆಯ್ಕೆ ನಡೆದಿದೆ. ಮಂಡಲ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಬೇಕಿದೆ. ಬೇರೆ ಬೇರೆ ರಾಜ್ಯಗಳಲ್ಲಿ ರಾಜ್ಯಾಧ್ಯಕ್ಷರ ಸ್ಥಾನಕ್ಕಾಗಿ ನಡೆಯಲಿರುವ ಚುನಾವಣೆ ಸಂಬಂಧ ಮೇಲ್ವಿಚಾರಕರನ್ನ ವರಿಷ್ಠರು ನೇಮಕ ಮಾಡಿದ್ದಾರೆ. ಕರ್ನಾಟಕಕ್ಕೆ ಸಂಬಂಧಿಸಿದಂತೆ ಈ ಚುನಾವಣೆಗಾಗಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮೇಲ್ವಿಚಾರಣೆ ಹೊಣೆ ನೀಡಲಾಗಿದೆ.
ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದರೆ, ಎಲ್ಲರ ಅಭಿಪ್ರಾಯ ಪಡೆದಂತಾಗುತ್ತದೆ. ಎಲ್ಲರ ಅಭಿಪ್ರಾಯಕ್ಕೆ ಮನ್ನಣೆ ನೀಡಿದಂತಾಗುತ್ತದೆ. ಮತ್ತೊಂದೆಡೆ ಈ ಸ್ಥಾನದ ಆಕಾಂಕ್ಷಿಗಳಿಗೂ ಅವಕಾಶ ಕೊಟ್ಟಂತಾಗುತ್ತದೆ. ಪಕ್ಷದ ಸದಸ್ಯರು, ನಾಯಕರ ಆಯ್ಕೆ ಮಾಡುವ ಕಾರಣ ಗೊಂದಲ ಉಂಟಾಗದಂತೆ ತಡೆಯಬಹುದು.
ಭವಿಷ್ಯದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳ ಸಾಲಿನಲ್ಲಿ ಶಾಸಕ ಅರವಿಂದ್ ಬೆಲ್ಲದ್ ಸೇರಿದಂತೆ ಅನೇಕರು ಇದ್ದಾರೆ ಎನ್ನಲಾಗಿದೆ.












Click it and Unblock the Notifications