ಬಿಜೆಪಿ ಎರಡನೇ ಪಟ್ಟಿ ರಿಲೀಸ್; ಬೆಂಗಳೂರಿನ 3 ಕ್ಷೇತ್ರದಲ್ಲಿ ಇನ್ನೂ ಟಿಕೆಟ್ ಸಸ್ಪೆನ್ಸ್: ಅಚ್ಚರಿ ಅಭ್ಯರ್ಥಿಗಳು ಕಣಕ್ಕೆ?
ಬೆಂಗಳೂರು,ಏಪ್ರಿಲ್13: ರಾಜ್ಯದ ಅಧಿಕಾರದ ಚುಕ್ಕಾಣಿ ಜೊತೆ ರಾಜ್ಯ ರಾಜಧಾನಿ ಬೆಂಗಳೂರುನಗರದ ಅಧಿಕಾರದ ಮೇಲೆ ಕಣ್ಣೀಟ್ಟಿರುವ ಬಿಜೆಪಿ ಅಳೆದುತೂಗಿ ಅಭ್ಯರ್ಥಿಗಳ ಆಯ್ಕೆಯನ್ನ ಮಾಡುತ್ತಿದೆ.
ಈಗಾಗಲೇ ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯ 28 ಕ್ಷೇತ್ರಗಳ ಪೈಕಿ 25 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಚುನಾವಣಾ ಕಣಕ್ಕಿಳಿಸಿದ್ದು, ಮೂರು ಕ್ಷೇತ್ರದಲ್ಲಿ ಆಯ್ಕೆ ಕಗ್ಗಂಟಾಗಿದೆ. ಬೆಂಗಳೂರಿನ ಹಲವು ಹಾಲಿ ಶಾಸಕರಿಗೆ ಟಿಕೆಟ್ ನೀಡಿರುವ ಬಿಜೆಪಿ ಹೈಕಮಾಂಡ್ ಮೂರು ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಸಾಕಷ್ಟು ಸಸ್ಪೆನ್ಸ್ ಆಗಿದೆ.

ಬಿಬಿಎಂಪಿ ವ್ಯಾಪ್ತಿಯ ಒಟ್ಟು 28 ಕ್ಷೇತ್ರಗಳ ಪೈಕಿ ಗೋವಿಂದರಾಜನಗರ, ಮಹದೇವಪುರ ಮತ್ತು ಹೆಬ್ಬಾಳ ಕ್ಷೇತ್ರಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲ ಕ್ಷೇತ್ರಗಳಿಗೂ ಟಿಕೆಟ್ ಘೋಷಿಸಿದ್ದು, ಈಗಾಗಲೇ ಗೋವಿಂದರಾಜನಗರ ಕ್ಷೇತ್ರದ ಹಾಲಿ ಶಾಸಕರಾಗಿರುವ ಸಚಿವ ವಿ.ಸೋಮಣ್ಣ ಅವರಿಗೆ ಚಾಮರಾಜನಗರ ಮತ್ತು ವರುಣಾ ಕ್ಷೇತ್ರಗಳಿಂದ ಟಿಕೆಟ್ ನೀಡಲಾಗಿದೆ. ಹೀಗಾಗಿ. ಗೋವಿಂದರಾಜನಗರ ಕ್ಷೇತ್ರದಿಂದ ಯಾರನ್ನು ಕಣಕ್ಕಿಳಿಸಬಹುದು ಎಂಬ ಕುತೂಹಲ ಮೂಡಿದೆ.
ಈಗಾಗಲೇ ಸಚಿವ ವಿ ಸೋಮಣ್ಣ ತಮ್ಮ ಪುತ್ರರಾದ ಅರುಣ್ ಸೋಮಣ್ಣ ಅವರಿಗೆ ಟಿಕೆಟ್ ನೀಡುವಂತೆ ಒತ್ತಡ ಹಾಕಿದ್ದು, ವಿ ಸೋಮಣ್ಣ ಮಗನಿಗೆ ಗುಬ್ಬಿ ಕ್ಷೇತ್ರದಿಂದ ಟಿಕೆಟ್ ಕೇಳಿದ್ರು, ಆದರೆ, ಬಿಜೆಪಿ ಹೈಕಮಾಂಡ್ ಬಿಡುಗಡೆ ಮಾಡಿದ್ದ ಎರಡನೇ ಪಟ್ಟಿಯಲ್ಲಿ ಗುಬ್ಬಿ ಕ್ಷೇತ್ರದಿಂದ ಎಸ್.ಡಿ ದಿಲೀಪ್ ಕುಮಾರ್ ಅವರನ್ನ ಚುನಾವಣಾ ಕಣಕ್ಕಿಳಿಸಿದ್ದು, ಅರುಣ್ ಸೋಮಣ್ಣ ಅವರಿಗೆ ಟಿಕೆಟ್ ಸಿಗುವುದು ಬಹುತೇಕ ಡೌಟ್ ಎನ್ನಲಾಗಿದೆ.
ಈಗಾಗಲೇ ವಿ. ಸೋಮಣ್ಣ ಅವರಿಗೆ ಎರಡು ಕ್ಷೇತ್ರಗಳಿಗೆ ಟಿಕೆಟ್ ನೀಡಿರುವ ಬಿಜೆಪಿ ಹೈಕಮಾಂಡ್ ಸೋಮಣ್ಣ ಅವರ ಪುತ್ರನಿಗೆ ಟಿಕೆಟ್ ನೀಡುವ ಬಗ್ಗೆ ಅನುಮಾನವಿದೆ. ಇನ್ನು ಗೋವಿಂದರಾಜನಗರದ ಬಿಬಿಎಂಪಿ ಸದಸ್ಯರಾಗಿದ್ದ ಉಮೇಶ್ ಶೆಟ್ಟಿಅವರಿಗೆ ಟಿಕೆಟ್ ನೀಡಬಹುದು ಎನ್ನಲಾಗುತ್ತಿದೆ. ಇತ್ತ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ.

ಇನ್ನು ಮಹದೇವಪುರ ಕ್ಷೇತ್ರದ ಹಾಲಿ ಶಾಸಕರಾದ ಅರವಿಂದ್ ಲಿಂಬಾವಳಿ ಈ ಬಾರಿ ಟಿಕೆಟ್ ಸಿಗುತ್ತಾ ಇಲ್ವಾ ಎಂಬ ಲೆಕ್ಕಾಚಾರಗಳು ಜೋರಾಗಿದ್ದು, ಅರವಿಂದ್ ಲಿಂಬಾವಳಿ ಪ್ರತಿನಿಧಿಸುವ ಮಹದೇವಪುರ ಕ್ಷೇತ್ರದ ಟಿಕೆಟ್ ಘೋಷಣೆ ಬಾಕಿ ಉಳಿಸಿರುವುದು ಪಕ್ಷದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಪಕ್ಷದ ಚುನಾವಣಾ ಪ್ರಚಾರ ಮತ್ತು ಚುನಾವಣಾ ನಿರ್ವಹಣಾ ಸಮಿತಿ ಎರಡರಲ್ಲೂ ಸ್ಥಾನ ನೀಡಿರುವ ಲಿಂಬಾವಳಿ ಅವರಿಗೆ ಟಿಕೆಟ್ ನಿರಾಕರಿಸಬಹುದು ಎಂಬ ಮಾತು ಕೇಳಿಬರುತ್ತಿದ್ದು, ಈ ಕ್ಷೇತ್ರ ಹೊಸ ಅಭ್ಯರ್ಥಿಯನ್ನ ಕಣಕ್ಕಿಳಿಸಲು ಬಿಜೆಪಿ ತಯಾರಿ ನಡೆಸಿದೆ ಎನ್ನಲಾಗಿದೆ.
ಹೆಬ್ಬಾಳ ಕ್ಷೇತ್ರದಲ್ಲಿಯೂ ಟಿಕೆಟ್ ಗಾಗಿ ಬಾರೀ ಪೈಪೋಟಿ ಏರ್ಪಟ್ಟಿದ್ದು, ಹೆಬ್ಬಾಳ ಕ್ಷೇತ್ರದಿಂದ ಮಾಜಿ ಸಚಿವ ಕಟ್ಟಾಸುಬ್ರಮಣ್ಯ ನಾಯ್ಡು ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಈಗಾಗಲೇ ಒಂದು ವರ್ಷದಿಂದ ಚುನಾವಣೆಗೆ ಸಿದ್ದತೆ ನಡೆಸುತ್ತಿರುವ ಕಟ್ಟಾಸುಬ್ರಮಣ್ಯ ನಾಯ್ಡು ಅವರು ಕ್ಷೇತ್ರದಲ್ಲಿ ಪ್ರಚಾರವನ್ನೂ ಆರಂಭಿಸಿದ್ದಾರೆ.
ಬಹುತೇಕ ಕಟ್ಟಾಸುಬ್ರಮಣ್ಯ ನಾಯ್ಡು ಅವರಿಗೆ ಟಿಕೆಟ್ ಸಿಗಲಿದೆ ಎಂದು ಮೂಲಗಳಿಂದ ತಿಳಿದು ಬಂದಿತ್ತು. ಆದರೆ ಮೊದಲ ಪಟ್ಟಿ ಹಾಗೂ ಎರಡನೇ ಪಟ್ಟಿಯಲ್ಲಿ ಟಿಕೆಟ್ ನೀಡದೇ ಇರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗದ್ದು, ಕಟ್ಟಾಸುಬ್ರಮಣ್ಯ ನಾಯ್ಡು ಅವರ ಬದಲು ಪಕ್ಷದ ಬೆಂಗಳೂರು ಉತ್ತರ ಜಿಲ್ಲಾ ಘಟಕದ ಅಧ್ಯಕ್ಷ ನಾರಾಯಣ ಅವರ ಹೆಸರೂ ಇದೀಗ ಮುನ್ನೆಲೆಗೆ ಬಂದಿದೆ.












Click it and Unblock the Notifications