ಬಿಜೆಪಿಯ ಕೆಲವು ಹಾಲಿ ಸಂಸದರ ಕೈ ತಪ್ಪಲಿದೆ ಟಿಕೆಟ್?
ಬೆಂಗಳೂರು, ಜ.16 : ಲೋಕಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಬಿಜೆಪಿ ಬಿ.ಎಸ್.ಯಡಿಯೂರಪ್ಪ ಅವರು ಪಕ್ಷಕ್ಕೆ ಮರಳಿದ ಮೇಲೆ ಹೊಸ ಹುರುಪಿನಲ್ಲಿದೆ. ಅಭ್ಯರ್ಥಿಗಳ ಆಯ್ಕೆ ಬಗ್ಗೆ ಎಚ್ಚರ ವಹಿಸಿರುವ ಪಕ್ಷದ ನಾಯಕತ್ವದ ವಿರುದ್ಧ ಸಿಡಿದು ನಿಂತಿದ್ದ ಕೆಲವು ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸುವ ಸಾಧ್ಯತೆ ಇದೆ. 20 ಕ್ಷೇತ್ರಗಳಲ್ಲಿ ಜಯಗಳಿಸುವ ಗುರಿ ಹೊಂದಿರುವ ಬಿಜೆಪಿ ಅಳೆದು ತೂಗಿ ಟಿಕೆಟ್ ಹಂಚಿಕೆ ಮಾಡಲು ನಿರ್ಧರಿಸಿದೆ.
ಬಿಜೆಪಿ ಮತ್ತು ಆರ್ ಎಸ್ಎಸ್ ನಾಯಕರು ಸೋಮವಾರ ರಾತ್ರಿ ನಡೆಸಿದ ರಹಸ್ಯ ಸಭೆಯ ನಂತರ, ರಾಯಚೂರು, ಬಳ್ಳಾರಿ, ತುಮಕೂರು, ಬೆಂಗಳೂರು ಉತ್ತರ, ಕೊಪ್ಪಳ ಮತ್ತು ಶಿವಮೊಗ್ಗ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯಲ್ಲಿ ಬದಲಾವಣೆ ಮಾಡಲು ನಿರ್ಧರಿಸಿದೆ. ಆದ್ದರಿಂದ ಈ ಕ್ಷೇತ್ರಗಳ ಹಾಲಿ ಸಂಸದರಿಗೆ ಟಿಕೆಟ್ ಕೈ ತಪ್ಪಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಪಕ್ಷದ ಹಿರಿಯ ನಾಯಕರ ಎಲ್.ಕೆ.ಅಡ್ವಾಣಿ ವಿರುದ್ಧವೇ ವಾಗ್ದಾಳಿ ನಡೆಸಿದ್ದ ತುಮಕೂರು ಸಂಸದ ಜಿ.ಎಸ್.ಬಸವರಾಜ್ ಅವರಿಗೆ ಈ ಬಾರಿ ಟಿಕೆಟ್ ಕೈ ತಪ್ಪುವುದು ಖಾತ್ರಿಯಾಗಿದೆ. ಮಾಜಿ ಸಚಿವ ಸೊಗಡು ಶಿವಣ್ಣ ಮತ್ತು ಶಾಸಕ ಸುರೇಶ್ ಗೌಡ ಹೆಸರು ತುಮಕೂರು ಕ್ಷೇತ್ರಕ್ಕೆ ಕೇಳಿ ಬರುತ್ತಿದೆ. ಆದರೆ, ಯಾರಿಗೆ ಟಿಕೆಟ್ ದೊರೆಯಲಿದೆ ಎಂಬುದು ನಿಗೂಢವಾಗಿದೆ. [ಬಸವರಾಜ್ ಸೇರ್ಪಡೆಗೆ ಬಿಜೆಪಿ ವಿರೋಧ]
ಬಿಜೆಪಿ ನಾಯಕತ್ವದ ವಿರುದ್ಧ ಸಿಡಿದು ಬಿಎಸ್ಆರ್ ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿರುವ ಬಳ್ಳಾರಿ ಸಂಸದೆ ಜೆ.ಶಾಂತ ಅವರಿಗೂ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ. ಆದರೆ, ಬಿ.ಶ್ರೀರಾಮುಲು ಅವರು ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿದರೆ, ಈ ಲೆಕ್ಕಾಚಾರದಲ್ಲಿ ಸ್ಪಲ್ಪ ಹೆಚ್ಚು ಕಡಿಮೆ ಆಗಲಿದೆ. ರಾಯಚೂರು ಸಂಸದ ಸಣ್ಣ ಫಕೀರಪ್ಪ ಅವರು ಸಹ ಬಿಜೆಪಿ ಟಿಕೆಟ್ ನಿಂದ ವಂಚಿತರಾಗುವ ಸಾಧ್ಯತೆ ಇದೆ. ಮಾಜಿ ಸಚಿವ ಶಿವನಗೌಡ ನಾಯಕ್ ಹೆಸರು ಕ್ಷೇತ್ರಕ್ಕೆ ಕೇಳಿಬರುತ್ತಿದೆ. [ಎಲ್ಲಾ ಸಂಸದರಿಗೂ ಟಿಕೆಟ್ ಕಷ್ಟ]
ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಹಾಲಿ ಸಂಸದ ಡಿ.ಬಿ.ಚಂದ್ರೇಗೌಡ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಆದರೆ, ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ, ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್, ಮಾಜಿ ಸಚಿವೆ ಶೋಭಾ ಕರಂದ್ಲಾಜೆ ಟಿಕೆಟ್ ಆಕಾಂಕ್ಷಿಗಳಾಗಿದ್ದು ಯಾರಿಗೆ ಟಿಕೆಟ್ ಎಂಬುದು ಕುತೂಹಲ ಮೂಡಿಸಿದೆ. [ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ]
ಶಿವಮೊಗ್ಗ ಕ್ಷೇತ್ರದ ಹಾಲಿ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಶಿವಮೊಗ್ಗದಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ, ಈ ಕುರಿತು ಅಂತಿಮ ತೀರ್ಮಾನವನ್ನು ಅವರು ಕೈಗೊಂಡಿಲ್ಲ. [ಶಿವಮೊಗ್ಗದಿಂದ ಯಡಿಯೂರಪ್ಪ ಸ್ಪರ್ಧೆ]
ಉಳಿದಂತೆ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಮಾಜಿ ಸಚಿವ ಬಿ.ಎನ್.ಬಚ್ಚೇಗೌಡ ಅವರ ಹೆಸರು ಪ್ರಬಲವಾಗಿ ಕೇಳಿಬರುತ್ತಿದೆ. ವಿಧಾನ ಪರಿಷತ್ ಸದಸ್ಯ ವೀರಯ್ಯ ಮತ್ತು ಮಾಜಿ ಸಚಿವ ಅರವಿಂದ ಲಿಂಬಾವಳಿ ಕೋಲಾರ ಕ್ಷೇತ್ರಕ್ಕಾಗಿ ಸ್ಪರ್ಧೆ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮಾಜಿ ಸಚಿವ ರಾಮಚಂದ್ರೇ ಗೌಡ, ಎಂ.ಕೃಷ್ಣಪ್ಪ, ಯುವಮೋರ್ಚಾ ಅಧ್ಯಕ್ಷ ಟಿ.ಮುನಿರಾಜು ಹೆಸರುಗಳು ಕೇಳಿಬರುತ್ತಿವೆ.
ಸದ್ಯ ಬಿಜೆಪಿ 13 ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸಿದ್ದು, ಜ.17ರಂದು ಬಿಜೆಪಿ ರಾಷ್ಟ್ರೀಯ ನಾಯಕರ ಸಭೆ ದೆಹಲಿಯಲ್ಲಿ ನಡೆಯಲಿದೆ. ಸಭೆಯಲ್ಲಿ ಚರ್ಚಿಸಿದ ಬಳಿಕ ಜ.20ರಂದು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲು ಬಿಜೆಪಿ ನಿರ್ಧರಿಸಿದೆ. ಉಳಿದ 15 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಜ.20ರ ನಂತರ ನಡೆಯಲಿದೆ.












Click it and Unblock the Notifications