ಉಡುಪಿ, ಹಾವೇರಿ, ಬೆಳಗಾವಿಯಲ್ಲಿ ಬಿಜೆಪಿ ಜನ ಸಂಕಲ್ಪ ಸಮಾವೇಶ
ಬೆಂಗಳೂರು, ನವೆಂಬರ್ 07; ಕರ್ನಾಟಕ ಬಿಜೆಪಿಯ ಜನ ಸಂಕಲ್ಪ ಯಾತ್ರೆ ಸೋಮವಾರದಿಂದ ಮತ್ತೆ ಆರಂಭವಾಗಿದೆ. ಈ ವಾರ ಉಡುಪಿ, ಗದಗ, ಬೆಳಗಾವಿಯಲ್ಲಿ ಜನ ಸಂಕಲ್ಪ ಯಾತ್ರೆ ಅಂಗವಾಗಿ ಸಮಾವೇಶ ನಡೆಯಲಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸಂಪುಟದ ಸಚಿವರು ಉಡುಪಿಯಲ್ಲಿ ಸೋಮವಾರ ನಡೆಯಲಿರುವ ಜನಸಂಕಲ್ಪ ಯಾತ್ರೆ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸೋಮವಾರ ಬೆಂಗಳೂರಿನಿಂದ ಹೊರಟ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನವೆಂಬರ್ 7 ಹಾಗೂ 8ರಂದು ಉಡುಪಿ ಜಿಲ್ಲೆಯ ಪ್ರವಾಸದಲ್ಲಿರುತ್ತಾರೆ. ಹೆಲಿಕಾಪ್ಟರ್ ಮೂಲಕ ಅವರು 10.30ಕ್ಕೆ ಆದಿ ಉಡುಪಿ ಹೆಲಿಪ್ಯಾಡ್ಗೆ ಆಗಮಿಸಿದರು.

ಮುಖ್ಯಮಂತ್ರಿಗಳ ಉಡುಪಿ ಪ್ರವಾಸ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ಜನಸಂಕಲ್ಪ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಮಧ್ಯಾಹ್ನ 1.50ಕ್ಕೆ ಉಡುಪಿಯ ಎಂ.ಜಿ.ಎಂ ಕಾಲೇಜಿನಲ್ಲಿ ಮಣಿಪಾಲ್ ಮೀಡಿಯಾ ನೆಟ್ವರ್ಕ್ ಲಿಮಿಟೆಡ್ ವತಿಯಿಂದ ಆಯೋಜಿಸಿರುವ ಕರಾವಳಿಯ ಹಿರಿಯ ಪತ್ರಿಕೋದ್ಯೋಗಿಗಳ ಜನ್ಮ ಶತಮಾನೋತ್ಸವೋತ್ತರ ಸಂಸ್ಮರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ.
ಮಧ್ಯಾಹ್ನ 3.45ಕ್ಕೆ ಕುಂದಾಪುರ ತಾಲೂಕು ಹೊಸಾಡು ಗ್ರಾಮದ ಮುಳ್ಳಿಕಟ್ಟೆಯಲ್ಲಿ ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ಆಯೋಜಿಸಲಾದ ಬೈಂದೂರು ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಸೋಮವಾರ ಉಡುಪಿಯಲ್ಲಿಯೇ ಮುಖ್ಯಮಂತ್ರಿಗಳು ವಾಸ್ತವ್ಯ ಹೂಡಲಿದ್ದಾರೆ. ನವೆಂಬರ್ 8ರಂದು ಬೆಳಗ್ಗೆ 9 ಗಂಟೆಗೆ ಆದಿ ಉಡುಪಿ ಹೆಲಿಪ್ಯಾಡ್ನಿಂದ ಶಿರಹಟ್ಟಿಗೆ ತೆರಳಲಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, "ಎರಡನೇ ಹಂತದ ಜನ ಸಂಕಲ್ಪ ಸಮಾವೇಶವನ್ನು ಸೋಮವಾರದಿಂದ ಆರಂಭಿಸಲಾಗುತ್ತದೆ. ಮೂರು ದಿನ ಕಾರ್ಯಕ್ರಮವಿದೆ. ಡಿಸೆಂಬರ್ ತನಕ ಯಾತ್ರೆ ಮುಂದುವರೆಯಲಿದೆ" ಎಂದು ಹೇಳಿದ್ದಾರೆ.
ಜನ ಸಂಕಲ್ಪ ಯಾತ್ರೆಯ ನಡುವೆಯೇ ನವೆಂಬರ್ 20 ರಂದು ಬಳ್ಳಾರಿಯಲ್ಲಿ ಎಸ್ಟಿ ಮೋರ್ಚಾ ಸಮಾವೇಶ ಆಯೋಜನೆ ಮಾಡಲಾಗಿದೆ. ನವೆಂಬರ್ 30ರಂದು ಮೈಸೂರಿನಲ್ಲಿ ಎಸ್ಸಿ ಮೋರ್ಚಾ ಸಮಾವೇಶ ನಡೆಯಲಿದೆ.

ನವೆಂಬರ್ 11ಕ್ಕೆ ಮೋದಿ ಭೇಟಿ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಯಡಿಯೂರಪ್ಪ ಬೆಂಗಳೂರಿಗೆ ಮೋದಿ ಆಗಮಿಸುವ ಮೊದಲು ಮೂರು ದಿನದ ಪ್ರವಾಸ ಮುಗಿಸಿ ವಾಪಸ್ ಆಗಲಿದ್ದಾರೆ.
11/11/2022ರ ಶುಕ್ರವಾರ ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸುತ್ತಿದ್ದು, 5 ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಕ್ಕೂ ಮೊದಲು ಜನ ಸಂಕಲ್ಪ ಸಮಾವೇಶ ಪೂರ್ಣಗೊಳಿಸಿ ಉಭಯ ನಾಯಕರು ಬೆಂಗಳೂರಿಗೆ ಬರಲಿದ್ದಾರೆ.
ಕರ್ನಾಟಕದ ಬಿಜೆಪಿ ಘಟಕ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಬೆಂಗಳೂರು ಭೇಟಿಯ ವೇಳೆ ಮೋದಿ ಸಮಾವೇಶವನ್ನು ಉದ್ದೇಶಿಸಿ ಸಹ ಮಾತನಾಡಲಿದ್ದಾರೆ.
ನರೇಂದ್ರ ಮೋದಿ ಪ್ರಮುಖವಾಗಿ ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಹಾಗೂ ಕೆಂಪೇಗೌಡ ಥೀಮ್ ಪಾರ್ಕ್ ಉದ್ಘಾಟನೆ ಮಾಡಲಿದ್ದಾರೆ. ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದಾರೆ.
ಜನ ಸಂಕಲ್ಪ ಯಾತ್ರೆ; ಕರ್ನಾಟಕ ಬಿಜೆಪಿ 2023ರ ವಿಧಾನಸಭೆ ಚುನಾವಣೆ ಸಿದ್ಧತೆ ಅಂಗವಾಗಿ ಜನ ಸಂಕಲ್ಪ ಯಾತ್ರೆ ಸಮಾವೇಶಗಳನ್ನು ಆಯೋಜನೆ ಮಾಡುತ್ತಿದೆ. ಒಟ್ಟು ಎರಡು ತಂಡಗಳಲ್ಲಿ ಬಿಜೆಪಿ ನಾಯಕರು ವಿಧಾನಸಭಾ ಕ್ಷೇತ್ರಗಳ ಪ್ರವಾಸ ಮಾಡುತ್ತಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಮೂರು ಕಡೆ ಜನ ಸಂಕಲ್ಪ ಸಮಾವೇಶಗಳು ನಡೆಯಲಿವೆ. ಸಚಿವ ಸ್ಥಾನ ಸಿಗದೇ ಅಸಮಾಧಾನಗೊಂಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆಯೇ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.












Click it and Unblock the Notifications