ಕರ್ನಾಟಕದಲ್ಲಿ ಬಿಜೆಪಿಗೆ ಹಿನ್ನಡೆ ಮುನ್ಸೂಚನೆ:ಮೋದಿ, ಯೋಗಿ ಅಖಾಡಕ್ಕೆ- ಒಂದೇ ದಿನ ರಾಜ್ಯಕ್ಕೆ ಲಗ್ಗೆ ಇಡಲಿದ್ದಾರೆ ಕೇಸರಿ ನಾಯಕರು
ನವದೆಹಲಿ, ಏಪ್ರಿಲ್ 17: ಭಾರತೀಯ ಜನತಾ ಪಕ್ಷದ ( BJP ) ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ( Narendra Modi ) ಮೇ 4 ರಂದು ಕರ್ನಾಟಕದ ಉಡುಪಿಗೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ಪಿಟಿಐಗೆ ತಿಳಿಸಿವೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಪ್ರಧಾನಿ ಜೊತೆ ಬರುವ ನಿರೀಕ್ಷೆಯಿದೆ. ವರದಿ ಪ್ರಕಾರ, ಪ್ರಧಾನಿ ಮೋದಿ ಭೇಟಿಗಾಗಿ ನಗರದಲ್ಲಿ ಅದ್ಧೂರಿ ಕಾರ್ಯಕ್ರಮವನ್ನು ಏರ್ಪಡಿಸಲಾಗುತ್ತದೆ ಎಂದು ಪಕ್ಷದ ಮೂಲಗಳು ಹೇಳಿವೆ.

ಕರಾವಳಿ ಕರ್ನಾಟಕದ ಉಡುಪಿಗೆ ಪ್ರಧಾನಿಯವರ ಭೇಟಿ ಚುನಾವಣೆಗೆ ಮುನ್ನ ಮಹತ್ವ ಪಡೆದುಕೊಂಡಿದೆ. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವು ಎಂಟು ವಿಧಾನಸಭಾ ಸ್ಥಾನಗಳನ್ನು ಹೊಂದಿದ್ದು, ಉಡುಪಿಯಲ್ಲಿ ನಾಲ್ಕು ಮತ್ತು ಚಿಕ್ಕಮಗಳೂರಿನಲ್ಲಿ ಐದು ಸ್ಥಾನಗಳನ್ನು ಹೊಂದಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಎಂಟು ಸ್ಥಾನಗಳ ಪೈಕಿ ಏಳನ್ನು ಬಿಜೆಪಿ ಗೆದ್ದಿತ್ತು.
ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆಗೆ ಮುನ್ನ ಕನಿಷ್ಠ 15-20 ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ. ಮೇ 10 ರಂದು ನಡೆಯಲಿರುವ ಮತದಾನಕ್ಕೂ ಮುನ್ನ ಪ್ರಧಾನಿ ಮೋದಿ ಅವರು ಕರ್ನಾಟಕದಲ್ಲಿ 15-20 ಸಾರ್ವಜನಿಕ ಸಭೆಯಗಳನ್ನು ನಡೆಸುತ್ತಾರೆ ಎಂದು ನಾವು ಭಾವಿಸುತ್ತೇವೆ ಎಂಬುದಾಗಿ ಬಿಜೆಪಿ ನಾಯಕರೊಬ್ಬರು ಎಎನ್ಐಗೆ ತಿಳಿಸಿದ್ದಾರೆ.
ಕರಾವಳಿ ಜಿಲ್ಲೆಯಲ್ಲಿ ಹಿಂದೂ ಮತಬ್ಯಾಂಕ್ ಕ್ರೋಡೀಕರಿಸುವ ನಿಟ್ಟಿನಲ್ಲಿ ಬಿಜೆಪಿ ಯೋಗಿ ಆದಿತ್ಯನಾಥ್ ಅವರನ್ನು ಅಖಾಡಕ್ಕೆ ಇಳಿಸಲಿದೆ ಎಂದು ಗೊತ್ತಾಗಿದೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಆದಿತ್ಯನಾಥ್ ಅವರು ಕರ್ನಾಟಕದಲ್ಲಿ ಪ್ರಚಾರ ಮಾಡಿದ್ದರು. ಕಳೆದ ವರ್ಷ ಉತ್ತರ ಪ್ರದೇಶದಲ್ಲಿ ಬಿಜೆಪಿಯನ್ನು ಮುನ್ನಡೆಸಿದ ನಂತರ ಎರಡನೇ ಬಾರಿ ಪಕ್ಷವನ್ನು ಅಧಿಕಾರಕ್ಕೆ ತರಲು, ಅವರು ರಾಜ್ಯ ಚುನಾವಣೆಗಳಲ್ಲಿ ಕೇಸರಿ ಪಕ್ಷದ ಸ್ಟಾರ್ ಪ್ರಚಾರಕರಲ್ಲಿ ಒಬ್ಬರಾಗಿ ಹೊರಹೊಮ್ಮಿದ್ದಾರೆ.

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹಿಂದುತ್ವದ ಪರ ಅಲೆ ಇರುವುದರಿಂದ ಬಿಜೆಪಿ ಯೋಗಿ ಅವರನ್ನು ಅಖಾಡಕ್ಕೆ ಇಳಿಸಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಹಿಂದುತ್ವದ ಪರ ಅಲೆ ಇದೆ. ಈ ಹಿನ್ನೆಲೆಯ ಯೋಗಿ ಆದಿತ್ಯನಾಥ್ ಅವರನ್ನು ಬಳಸಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ ತಂತ್ರ ರೂಪಿಸಿದೆ.
ಚುನಾವಣೆಗೂ ಮುನ್ನವೇ ಬಿಜೆಪಿ ಆಘಾತಗಳನ್ನು ಎದುರಿಸಿದೆ. ಉತ್ತರ ಕರ್ನಾಟಕ ಪ್ರಭಾವಿ ಲಿಂಗಾಯತ ಮುಖಂಡರನ್ನು ಕೇಸರಿ ಪಕ್ಷ ಕಳೆದುಕೊಂಡಿದೆ. ಬೆಳಗಾವಿ ಭಾಗದ ಪ್ರಬಲ ಲಿಂಗಾಯತ ನಾಯಕ, ಮಾಜಿ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ.
ಲಿಂಗಾಯತರ ಪ್ರಬಲ ನಾಯಕನೆಂದೇ ಗುರುತಿಸಿಕೊಂಡಿರುವ ಯಡಿಯೂರಪ್ಪನವರು ಚುನಾವಣಾ ರಾಜಕಾರಣದಿಂದ ನಿವೃತ್ತಿ ಘೋಷಿಸಿದ್ದಾರೆ. ಹಿರಿಯ ನಾಯಕ, ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪನವರು ಸಹ ಚುನಾವಣಾ ರಾಜಕಾರಣದಿಂದ ಹೊರನಡೆದಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಆಡಳಿತ ವಿರೋಧಿ ಅಲೆಯನ್ನೂ ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಪಕ್ಷವು ಮೋದಿ ಹಾಗೂ ಯೋಗಿ ಅವರ ವರ್ಚಸ್ಸನ್ನು ಬಳಸಿಕೊಳ್ಳುಲು ಮುಂದಾಗಿರಬಹುದು ಎಂಬ ಮಾತುಗಳು ಕೇಳಿಬಂದಿವೆ.
ಕರ್ನಾಟಕದಲ್ಲಿ ಮೇ 10 ರಂದು ಒಂದೇ ಹಂತದ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.












Click it and Unblock the Notifications