ರಾಜ್ಯದಲ್ಲಿ ಆಪರೇಷನ್ ಕಮಲ ಇಲ್ಲದೇ 130 ಸ್ಥಾನ ಗೆಲ್ಲುತ್ತೇವೆ : ಬಸನಗೌಡ ಪಾಟೀಲ್ ಯತ್ನಾಳ್
ಬೆಳಗಾವಿ, ಏಪ್ರಿಲ್ 1: ರಾಜ್ಯ ವಿಧಾನಸಭಾ ಚುನಾವಣಾ ರಣಕಣ ರಂಗೇರಿದೆ. ಇತ್ತ 2023 ರ ವಿಧಾನಸಭಾ ಚುನಾವಣೆಯನ್ನ ಪ್ರತಿಷ್ಠೆಯ ಕಣವನ್ನಾಗಿ ತೆಗೆದುಕೊಂಡಿರುವ ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರವನ್ನ ನಡೆಸುತ್ತಿವೆ. ಈ ಬಾರಿ ಅಧಿಕಾರದ ಗದ್ದುಗೆ ಏರಲು ರಾಜಕೀಯ ಪಕ್ಷಗಳು ಪ್ರಯತ್ನ ನಡೆಸುತ್ತಿದ್ದು, ಗೆಲ್ಲುವ ವಿಶ್ವಾಸವನ್ನ ವ್ಯಕ್ತಪಡಿಸುತ್ತಿವೆ.
ಈ ಕುರರಿತು ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಮಾಧ್ಯಮದವರೊಂದಿಗೆ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ರೀತಿಯ ಆಪರೇಷನ್ ಕಮಲ ಇಲ್ಲದೇ ಬಿಜೆಪಿ 130 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನೂ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಬಿಜೆಪಿ ಹೊಸ ಪ್ರಯೋಗದ ಕುರಿತು ಮಾತನಾಡಿ, ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಬಿಜೆಪಿ ಅನುಸರಿಸುತ್ತಿರುವ ಪ್ರಕ್ರಿಯೆ ದೇಶದಲ್ಲೇ ವಿಶಿಷ್ಟವಾಗಿದೆ. ಅಭ್ಯರ್ಥಿಗಳು ಈ ಹಿಂದೆ ಬೆಂಗಳೂರು ಅಥವಾ ದೆಹಲಿಯ ಹೈಕಮಾಂಡ್ ನಾಯಕರ ಬಳಿ ಟಿಕೆಟ್ಗಾಗಿ ಲಾಬಿ ನಡೆಸುತ್ತಿದ್ದರು ಆದರೆ ಈಗ ಬಿಜೆಪಿ ವೀಕ್ಷಕರು ಮತ್ತು ಪಕ್ಷದ ಪದಾಧಿಕಾರಿಗಳ ಸಹಾಯದಿಂದ ವಿವಿಧ ಅಭ್ಯರ್ಥಿಗಳ ಮಾಹಿತಿ ಸಂಗ್ರಹಿಸಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುತ್ತಿದೆ ಎಂದರು.
ಈಗಾಗಲೇ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಮೂರು ಸಂಭಾವ್ಯ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಬಿಜೆಪಿಯ ಜಿಲ್ಲಾ ಕೋರ್ ಕಮಿಟಿಗಳು ಸಭೆಗಳನ್ನು ನಡೆಸುತ್ತಿವೆ. ಪ್ರತಿ ಕ್ಷೇತ್ರದಿಂದ ಮೂರು ಅಭ್ಯರ್ಥಿಗಳ ಪಟ್ಟಿಯನ್ನು ಕಳುಹಿಸಲಾಗುವುದು, ನಂತರ ದೆಹಲಿಯಲ್ಲಿ ಪಕ್ಷದ ಉನ್ನತ ನಾಯಕತ್ವವು ಅರ್ಹತೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುತ್ತದೆ. ರಾಜ್ಯದಲ್ಲಿ ಟಿಕೆಟ್ ಹಂಚಿಕೆಯಲ್ಲಿ ಬಿಜೆಪಿಯೊಳಗೆ ಅಭ್ಯರ್ಥಿಗಳಿಗೆ ಯಾವುದೇ ಗೊಂದಲವಿಲ್ಲದೆ ಅಭ್ಯರ್ಥಿಯ ಆಯ್ಕೆಯನ್ನ ಹೈಕಮಾಂಡ್ ನಡೆಸುತ್ತದೆ ಎಂದು ಹೇಳಿದರು.

ಇನ್ನೂ ಈ ಬಾರಿ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನ ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಹೊಸ ಪ್ರಯೋಗವನ್ನ ನಡೆಸುತ್ತಿದೆ. ನಾಯಕರು ಆಕಾಂಕ್ಷಿಗಳ ಬಗ್ಗೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದಾರೆ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ನಾಯಕರ ತಂಡದಿಂದ ಆಂತರಿಕ ಸಮೀಕ್ಷೆಯನ್ನು ಸಹ ಮಾಡಲಾಗಿದೆ ಎಂದು ತಿಳಿಸಿದರು.
ಚುನಾವಣಾ ಪೂರ್ವ ಫಲಿತಾಂಶದ ಕುರಿತು ಮಾತನಾಡಿದ ಅವರು, ಈ ಹಿಂದೆ ಚುನಾವಣೆಗೆ ಹೋದ ಹೆಚ್ಚಿನ ರಾಜ್ಯಗಳಲ್ಲಿ ಸಮೀಕ್ಷೆಗಳು ನಿಜವಾಗಲಿಲ್ಲ ಎಂದು ವಿವಿಧ ಏಜೆನ್ಸಿಗಳು ನಡೆಸುತ್ತಿರುವ ಚುನಾವಣಾ ಪೂರ್ವ ಸಮೀಕ್ಷೆಗಳನ್ನು ತಳ್ಳಿಹಾಕಿದ್ದಾರೆ.
ರಾಜ್ಯದಲ್ಲಿ 150 ಸ್ಥಾನ ತಲುಪುವ ಗುರಿ ಹೊಂದಿದ್ದೇವೆ: ಸಂಸದ ಬಿ.ವೈ.ರಾಘವೇಂದ್ರ
ರಾಜ್ಯದಲ್ಲಿ 150 ಸ್ಥಾನ ಗೆಲ್ಲುವ ಗುರಿಯನ್ನ ಹೊಂದಿದ್ದೇವೆ ಎಂದು ಕೋಲಾರದಲ್ಲಿ ಬಿ.ವೈ ರಾಘವೇಂದ್ರ ಹೇಳಿದ್ದು, ಅಭ್ಯರ್ಥಿಗಳ ಆಯ್ಕೆಗಾಗಿ ಒಳ್ಳೆಯ ರೀತಿಯಲ್ಲಿ ತಾಲೂಕು ಮಟ್ಟದ ಸಭೆಗಳು ನಡೆಯುತ್ತಿವೆ. ಸದ್ಯ ಚುನಾವಣೆ ಘೋಷಣೆಯಾಗಿದ್ದು, ಒಳ್ಳೆಯ ವಾತಾವರಣ ಇದೆ. ಕೋಲಾರ ಜಿಲ್ಲೆಯ ಆರು ಕ್ಷೇತ್ರಗಳಲ್ಲಿ ಪೈಪೋಟಿ ಹೆಚ್ಚಿದೆ. ಈ ಬಾರಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತಿದ್ದೇವೆ ಎಂದು ಹೇಳಿದರು.
ಈ ಬಾರಿ ಚುನಾವಣೆಯಲ್ಲಿ ಕೋಲಾರ ಜಿಲ್ಲೆಯಿಂದ ಹೆಚ್ಚಿನ ಶಾಸಕರು ಆಯ್ಕೆಯಾಗುತ್ತಾರೆ. ನಾನು ಸಂಸದನಾಗಿ ಪಕ್ಷ ಕಟ್ಟುವ ಕೆಲಸ ಮಾಡಿತ್ತೇನೆ, ನಾನು ಸಂಸದನಾಗಿ ಆಯ್ಕೆಯಾಗುವಲ್ಲಿ ಶಿಕಾರಿಪುರ ಕ್ಷೇತ್ರದ ಜನ ಆಶೀರ್ವಾದ ಇದೆ. ವಿಜಯೇಂದ್ರ ಇಲ್ಲೇ ಸ್ಪರ್ಧಿಸಬೇಕೆಂದು ಜನರ ಒತ್ತಾಯವೂ ಇದೆ. ಇನ್ನೂ ಕಾಂಗ್ರೆಸ್ ಪಕ್ಷ ಯಾವುದೇ ನೈತಿಕತೆಯನ್ನು ಉಳಿಸಿಕೊಂಡಿಲ್ಲ, ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಆಗಿದೆ. ದೇಶವನ್ನು ಕಾಂಗ್ರೆಸ್ ನವರು ಹೇಗೆ ನಡೆಸಿಕೊಂಡಿದ್ದಾರೆ ಎಂದು ಗೊತ್ತಿದೆ. ಕಾಂಗ್ರೆಸ್ ಪಕ್ಷ ಜನರಿಂದ ಮರೆಯಾಗುತ್ತಿದೆ ಎಂದು ವ್ಯಂಗ್ಯವಾಡಿದರು.












Click it and Unblock the Notifications