ಬಿಜೆಪಿ ತೊರೆಯಲು ನಿರ್ಧರಿಸಿದ ಆನಂದ್ ಸಿಂಗ್
ಹೊಸಪೇಟೆ, ಜನವರಿ 26: ಬಳ್ಳಾರಿಯಲ್ಲಿ ಬಿಜೆಪಿ ತನ್ನ ಹಿಡಿತವನ್ನು ಕಳೆದುಕೊಳ್ಳುತ್ತಿದೆ ಬಿ. ಶ್ರೀರಾಮುಲು ಹಾಗೂ ಗಾಲಿ ಜನಾರ್ದನ ರೆಡ್ಡಿ ಆಪ್ತರು ರಾಜಕೀಯದಿಂದ ವಿಮುಖರಾಗುತ್ತಿದ್ದು, ಕೆಲವರು ಬೇರೆ ಪಕ್ಷದತ್ತ ಮುಖ ಮಾಡಿದ್ದಾರೆ ಎಂಬ ಸುದ್ದಿಗೆ ಮತ್ತೆ ಜೀವ ಬಂದಿದೆ.
ಹೊಸಪೇಟೆಯ ವಿಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಆನಂದ್ ಸಿಂಗ್ ಅವರು ಬಿಜೆಪಿ ತೊರೆಯುವುದು ಖಚಿತವಾಗಿದೆ.
ಕಾರ್ಮಿಕ ಸಚಿವ ಸಂತೋಷ್ ಲಾಡ್ ಜೊತೆ ಕಳೆದವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆನಂದ್ ಸಿಂಗ್ ಭೇಟಿ ಮಾಡಿದ್ದರು. ಕಾಂಗ್ರೆಸ್ ಸೇರಲಿದ್ದಾರೆಯೇ? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ.

ಗಣಿ ಉದ್ಯಮಿ ಪತ್ತಿಕೊಂಡ ಕಿಶೋರ್ 2018ರ ಚುನಾವಣೆಯಲ್ಲಿ ನಾನೇ ವಿಜಯನಗರ (ಹೊಸಪೇಟೆ) ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂದು ಕರಪತ್ರಗಳನ್ನು ಹಂಚುತ್ತಿದ್ದಾರೆ. ಜಿಲ್ಲಾ ಘಟಕದ ಪದಾಧಿಕಾರಿಗಳು ಇದಕ್ಕೆ ಬೆಂಬಲವಾಗಿ ನಿಂತಿದ್ದಾರೆ ಎಂಬುದು ಆನಂದ್ ಸಿಂಗ್ ಅವರ ಮುನಿಸಿಗೆ ಕಾರಣವಾಗಿದೆ.
ಗುರುವಾರ ಸಂಜೆ ತಮ್ಮ ನಿವಾಸದಲ್ಲಿ ಆನಂದ್ ಸಿಂಗ್ ಬೆಂಬಲಿಗರ ಸಭೆ ಕರೆದಿದ್ದರು. ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ಸಭೆಯಲ್ಲಿ ಆನಂದ್ ಸಿಂಗ್ ನಿರ್ಧಾರ ಪ್ರಕಟಿಸಿದ್ದಾರೆ. ಇದಕ್ಕೆ ಬೆಂಬಲಿಗರು ಕೂಡಾ ಸಮ್ಮತಿ ವ್ಯಕ್ತಪಡಿಸಿದ್ದಾರೆ.
ಜನವರಿ 27 ರಂದು ಸ್ಪೀಕರ್ ಗೆ ರಾಜೀನಾಮೆ ನೀಡುವುದಾಗಿ ಆನಂದ್ ಸಿಂಗ್ ಘೋಷಿಸಿದ್ದಾರೆ. ರಾಜೀನಾಮೆ ಸಲ್ಲಿಸಿದ ಬಳಿಕ ಯಾವ ಪಕ್ಷದ ಸೇರ್ಪಡೆಯಾಗುತ್ತಾರೆ ಎಂಬುದರ ಬಗ್ಗೆ ಅಂತಿಮ ತೀರ್ಮಾನಗೊಂಡಿಲ್ಲ. ಆದರೆ, ಈಗಾಗಲೇ ಕಾಂಗ್ರೆಸ್ ವರಿಷ್ಠರೊಂದಿಗೆ ಚರ್ಚಿಸಿ ಟಿಕೆಟ್ ಖಾತ್ರಿ ಮಾಡಿಕೊಂಡಿರುವ ಆನಂದ್ ಸಿಂಗ್ ಅವರು ಕಾಂಗ್ರೆಸ್ ಸೇರುವುದು ಬಹುತೇಕ ಖಚಿತವಾಗಿದೆ.












Click it and Unblock the Notifications