ಟಿಪ್ಪು ಜಯಂತಿ ಗಲಾಟೆ ಪ್ರಕರಣಗಳು ವಾಪಸ್: ಬೋಪಯ್ಯ ಮನವಿ
ಬೆಂಗಳೂರು, ಜುಲೈ 31: ಟಿಪ್ಪು ಜಯಂತಿ ಆಚರಣೆ ಸಂದರ್ಭದಲ್ಲಿ ನಡೆದ ಪ್ರತಿಭಟನೆಗಳನ್ನು ಆಧಾರವಾಗಿಟ್ಟುಕೊಂಡು ಕೊಡಗಿನಲ್ಲಿ ಅನೇಕರ ಮೇಲೆ ದಾಖಲಿಸಲಾದ ಪ್ರಕರಣಗಳನ್ನು ಹಿಂದಕ್ಕೆ ಪಡೆಯುವಂತೆ ವಿರಾಜಪೇಟೆ ಬಿಜೆಪಿ ಶಾಸಕ ಕೆ.ಜಿ. ಬೋಪಯ್ಯ ಅವರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಬೋಪಯ್ಯ, ಅಮಾಯಕರನ್ನು ಗುರಿಯನ್ನಾಗಿರಿಸಿಕೊಂಡು ಕೆಲವು ಮೊಕದ್ದಮೆಗಳನ್ನು ಹೂಡಲಾಗಿದೆ. ಹೀಗಾಗಿ ಸಚಿವ ಸಂಪುಟ ಸಭೆ ನಡೆಸಿ ಈ ಪ್ರಕರಣಗಳನ್ನು ಹಿಂದಕ್ಕೆ ಪಡೆಯಲು ಆದೇಶಿಸಬೇಕು ಎಂದು ಕೋರಿದ್ದಾರೆ.
ಇನ್ಮೇಲೆ ಟಿಪ್ಪು ಜಯಂತಿ ಇಲ್ಲ! ಬಿಜೆಪಿ ಸರ್ಕಾರದ ಮಹತ್ವದ ನಿರ್ಣಯ
2014ರಿಂದ 2019ರ ಅವಧಿಯಲ್ಲಿ ಟಿಪ್ಪು ಜಯಂತಿ ಆಚರಣೆ ಸಂದರ್ಭದಲ್ಲಿ ಮತ್ತು ಇನ್ನಿತರೆ ಸಂದರ್ಭಗಳಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಹಲವಾರು ಪ್ರತಿಭಟನೆಗಳು ನಡೆದಿವೆ. ಈ ಪ್ರತಿಭಟನೆಗಳನ್ನು ಹತ್ತಿಕ್ಕುವ ಪ್ರಯತ್ನವಾಗಿ ಯುವಕರೂ ಸೇರಿದಂತೆ ಕೊಡಗು ಜಿಲ್ಲೆಯ ನೂರಾರು ಜನರ ಮೇಲೆ ಹಾಗೂ ಕೆಲವು ಸಂಘಟನೆಗಳ ಪ್ರಮುಖರ ಮೇಲೆ ಕೊಡಗು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವು ಮೊಕದ್ದಮೆಗಳನ್ನು ಹೂಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಅಮಾಯಕರನ್ನೇ ಗುರಿಯನ್ನಾಗಿರಿಸಿಕೊಂಡು ಮೊಕದ್ದಮೆಗಳನ್ನು ಹೂಡಲಾಗಿದೆ. ಇದರಿಂದ ಇವರೆಲ್ಲರೂ ತುಂಬಾ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಆದ್ದರಿಂದ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಈ ಎಲ್ಲ ಪ್ರಕರಣಗಳ ಸಂಪೂರ್ಣ ಮಾಹಿತಿ ತರಿಸಿಕೊಂಡು, ಮೊಕದ್ದಮೆಗಳನ್ನು ಹಿಂಪಡೆಯಲು ಅನುಕೂಲವಾಗುವಂತೆ ಸಚಿವ ಸಂಪುಟ ಸಭೆಯ ಮುಂದೆ ಮಂಡಿಸಿ, ಪ್ರಕರಣಗಳನ್ನು ಹಿಂದಕ್ಕೆ ಪಡೆದುಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಅವರು ಕೋರಿದ್ದಾರೆ.