ರಾಜ್ಯಪಾಲರ ನಿರ್ಧಾರಕ್ಕೆ ಕುಮಾರಸ್ವಾಮಿ ತಲೆದಂಡ ಆಗಲಿದೆ- ದಿನೇಶ್ ಗುಂಡೂರಾವ್
ಹುಬ್ಬಳ್ಳಿ, ಆಗಸ್ಟ್ 23: ರಾಜ್ಯಪಾಲರು ತೆಗೆದುಕೊಳ್ಳುವ ನಿರ್ಧಾರದಿಂದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಲೆದಂಡ ಆಗಲಿದೆ. ಇದು ಬಿಜೆಪಿಯವರು ಮಾಡಿದ ಹುನ್ನಾರವಾಗಿದೆ. ಬಿಜೆಪಿಯವರಿಗೆ ಜೆಡಿಎಸ್ ಮುಗಿಸಬೇಕು ಎನ್ನುವ ಚಿಂತನೆ ಬಹಳ ದಿನಗಳಿಂದ ಇತ್ತು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನಿಂದಲೂ ಬಿಜೆಪಿ ನಾಯಕರು ಜೆಡಿಎಸ್ ಮುಗಿಸಬೇಕು ಎನ್ನುವ ಹುನ್ನಾರ ಮಾಡಿದ್ದರು. ಇದೀಗ ಎಚ್.ಡಿ.ಕುಮಾರಸ್ವಾಮಿ ಅವರ ಹಳೇ ಪ್ರಕರಣವನ್ನು ಮುನ್ನೆಲೆಗೆ ತಂದವರೇ ಬಿಜೆಪಿಯವರು. ಗಣಿ ಇಲಾಖೆಯಲ್ಲಿ ಹಿಂದೆ ಹಗರಣವಾಗಿತ್ತು. ಇದೀಗ ಕೇಂದ್ರದಲ್ಲಿ ಗಣಿ ಸಚಿವರಾಗಿದ್ದಾರೆ. ಹೀಗಾಗಿ ರಾಜ್ಯಪಾಲರು ತೆಗೆದುಕೊಳ್ಳುವ ನಿರ್ಧಾರದಿಂದ ಕುಮಾರಸ್ವಾಮಿ ಅವರ ತಲೆದಂಡ ಆಗಲಿದೆ. ಇದೀಗ ಅವರ ಸಹಿ ಫೋರ್ಜರಿ ಎಂದು ಹೇಳಿತ್ತಿದ್ದು, ಇಷ್ಟು ದಿನ ಯಾಕೆ ದೂರು ಕೊಟ್ಟಿಲ್ಲ ಎಂದು ಪ್ರಶ್ನಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭ್ರಷ್ಟಾಚಾರದ ಕಿಂಗ್. ಇವರ ತಂದೆ ದೇಶ ಕಂಡ ದೊಡ್ಡ ಭ್ರಷ್ಟಾಚಾರಿ. ತಂದೆ ಮುಖ್ಯಮಂತ್ರಿಯಿದ್ದಾಗ ವಿಜಯೇಂದ್ರ ಅಧಿಕಾರ ಮಾಡುತ್ತಿದ್ದರು ಎಂದು ಅವರ ಸಚಿವರೇ ಹೇಳಿದ್ದಾರೆ. ಅಂದು ವಿಜಯೇಂದ್ರ ತೆರಿಗೆ ಎಂದೇ ನಿಗದಿಯಾಗಿತ್ತು. ಇವರು ನಮ್ಮ ಬಗ್ಗೆ, ನಮ್ಮ ಮುಖ್ಯಮಂತ್ರಿಯ ಬಗ್ಗೆ ಮಾತನಾಡುತ್ತಿರುವುದಕ್ಕೆ ನಾಚಿಕೆಯಾಗಬೇಕು. ಇಡೀ ಶಾಸಕರು ಮುಖ್ಯಮಂತ್ರಿ ಪರವಾಗಿ ನಿಂತಿದ್ದಾರೆ. ಬಿಜೆಪಿ ಒಡೆದ ಮನೆಯಾಗಿದೆ ಎಂದು ತಿರುಗೇಟು ನೀಡಿದರು.
ಕೊಳೆಯುತ್ತಾ ಬಿದ್ದಿರುವ ಪ್ರಕರಣಗಳ ಬಗ್ಗೆ ಯಾವುದೇ ಕ್ರಮ ಇಲ್ಲ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವ ಬಗ್ಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಶರವೇಗದಲ್ಲಿ ಪ್ರಾಸಿಕ್ಯೂಷನ್ ತನಿಖೆಗೆ ಅನುಮತಿ ನೀಡಿದ್ದಾರೆ. ಆದರೆ, ವರ್ಷ, ತಿಂಗಳುಗಳಿಂದ ಅವರ ಬಳಿ ಕೊಳೆಯುತ್ತಾ ಬಿದ್ದಿರುವ ಪ್ರಕರಣಗಳ ಬಗ್ಗೆ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ.
ರಾಜ್ಯದ ಮುಖ್ಯಸ್ಥ ಸ್ಥಾನದಲ್ಲಿರುವ ರಾಜ್ಯಪಾಲರೇ ರಾಜ್ಯದ ವಿರುದ್ಧ ಕೆಲಸ ಮಾಡುತ್ತಿದ್ದಾರೆ. ರಾಜ್ಯದ ಚುನಾಯಿತ ಸರ್ಕಾರಕ್ಕೆ ಕೆಲಸ ಮಾಡಲು ಬಿಡದೆ, ಯಾವುದೇ ಅಭಿವೃದ್ಧಿ ಕೆಲಸಕ್ಕೆ ಅವಕಾಶ ನೀಡದೆ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿರುವುದು ದುರಂತವೆ ಸರಿ ಎಂದು ರಾಜ್ಯಪಾಲರ ವಿರುದ್ಧ ಅಸಮಾಧಾನ ಹೊರಹಾಕಿದರು.












Click it and Unblock the Notifications