Delhi Elections 2025: 'ಗ್ಯಾರಂಟಿಗಳ ಭ್ರಮೆಯಲ್ಲಿ ಎಎಪಿ, 27 ವರ್ಷಗಳ ನಂತರ ಬಿಜೆಪಿ ಅಧಿಕಾರಕ್ಕೆ'
ಬೆಂಗಳೂರು, ಫೆಬ್ರವರಿ 07: ದೆಹಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಏರುವ ವಿಶ್ವಾಸವಿದೆ. ದೆಹಲಿ ರಾಜ್ಯದ ಚುನಾವಣೆ ನಿನ್ನೆ ನಡೆದಿದೆ. 9-10 ಸಮೀಕ್ಷೆಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದಂತೆ 27 ವರ್ಷಗಳ ನಂತರ ದೆಹಲಿ ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ಗ್ಯಾರಂಟಿಗಳ ಭ್ರಮೆಯಲ್ಲಿದ್ದ ಆಮ್ ಆದ್ಮಿ ಪಾರ್ಟಿಗೆ ತಕ್ಕ ಪಾಠವನ್ನು ಆ ರಾಜ್ಯದ ಜನರು ಕಲಿಸುತ್ತಾರೆ. ಭ್ರಷ್ಟಾಚಾರದ ವಿರುದ್ಧ ಆಂದೋಲನ ಮಾಡಿ, ರಾಜ್ಯದ ಚುಕ್ಕಾಣಿ ಹಿಡಿದ ಆಮ್ ಆದ್ಮಿ ಪಾರ್ಟಿಗೆ ತಕ್ಕ ಉತ್ತರವನ್ನು ನೀಡಿದ್ದಾರೆ. ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುವ ವಿಶ್ವಾಸ ನಮಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಹೇಳಿದರು.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ವಿಜಯೇಂದ್ರ ಅವರು, ಕೇಂದ್ರದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಅತ್ಯುತ್ತಮ ಬಜೆಟ್ ಅನ್ನು ಮಂಡನೆ ಮಾಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರ ವಿಕಸಿತ ಭಾರತದ ಕನಸು ನನಸಾಗುವ ನಿಟ್ಟಿನಲ್ಲಿ ಅಭಿವೃದ್ಧಿಗೆ ಪೂರಕವಾದ, ಬಡವರು, ರೈತರು, ಯುವಕರು, ಮಹಿಳೆಯರ ಪರವಾಗಿ ಒಂದು ಅತ್ಯುತ್ತಮ ಬಜೆಟ್ ಅನ್ನು ನೀಡಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

12 ಲಕ್ಷದವರೆಗೆ ಆದಾಯ ತೆರಿಗೆ ಕಟ್ಟುವಂತಿಲ್ಲ ಎಂಬ ನಿರ್ಧಾರದಿಂದ ಮಧ್ಯಮ ವರ್ಗದವರಿಗೆ ಬಹಳಷ್ಟು ಅನುಕೂಲವಾಗಿದೆ; ಜನರ ಬಹುವರ್ಷಗಳ ನಿರೀಕ್ಷೆಗೆ ತಕ್ಕಂತೆ ಬಜೆಟ್ ಮಂಡಿಸಿದ್ದು, ಪ್ರತಿಯೊಬ್ಬರೂ ಸಂತಸ ಪಡುವ ವಿಚಾರ ಎಂದರು. ಸಿದ್ದರಾಮಯ್ಯನವರಿಂದ ಕೇಂದ್ರದ ಬಜೆಟ್ ಬಗ್ಗೆ ಒಳ್ಳೆಯ ಮಾತು ಕೇಳಲು ಸಾಧ್ಯವಿಲ್ಲ; ಸಹಜವಾಗಿ ಅವರು ಟೀಕೆಗಳನ್ನು ಮಾಡಿದ್ದಾರೆ. ಕರ್ನಾಟಕವೂ ಸೇರಿದಂತೆ ದೇಶದ ಪ್ರತಿಯೊಂದು ರಾಜ್ಯದಲ್ಲೂ ಸಹ ಈ ಬಜೆಟ್ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ ಎಂದು ನುಡಿದರು.
ಜನರ ರಕ್ಷಣೆಗೆ ಬರಬೇಕಾದ ರಾಜ್ಯ ಸರಕಾರವು ದೌರ್ಜನ್ಯ ಎಸಗುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ಸಂಜೆ 5 ಗಂಟೆತನಕ ಹೋಗಲು ಗ್ರೀನ್ ಸಿಗ್ನಲ್ ಕೊಟ್ಟಿದೆ. ಬೆಳಿಗ್ಗೆ 10ರಿಂದ 5ಗಂಟೆವರೆಗೆ ಹೋಗಿ ಎಂಬ ಮಾತನ್ನು ರಾಜ್ಯ ಸರಕಾರ ಹೇಳುತ್ತಿರುವುದು ದುರ್ದೈವ ಎಂದು ಟೀಕಿಸಿದರು. ಒಂದು ಕಡೆ ತಮ್ಮ ಗ್ಯಾರಂಟಿಗಳಿಂದ ರಾಜ್ಯದಲ್ಲಿ ಜನರು ಸಮೃದ್ಧರಾಗಿದ್ದಾರೆ. ಆಲ್ ಈಸ್ ವೆಲ್ ಎಂದು ಹೇಳಿಕೊಳ್ಳುತ್ತಾರೆ. ಮತ್ತೊಂದು ಕಡೆ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದೌರ್ಜನ್ಯ ಮತ್ತು ಭರಾಟೆಯಿಂದ ರಾಜ್ಯದಲ್ಲಿ ಬಡವರು, ಮಹಿಳೆಯರು, ಕೂಲಿ ಕಾರ್ಮಿಕರು ತತ್ತರಿಸಿ ಹೋಗಿದ್ದಾರೆ ಎಂದರು.
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ವ್ಯೂಹಕ್ಕೆ ಬಡವರು ಸಿಲುಕಿದ್ದಾರೆ. ರಾಜ್ಯ ಸರಕಾರವು ದೌರ್ಜನ್ಯಕ್ಕೆ ಅವಕಾಶ ಕೊಡುವುದನ್ನು ಬದಿಗಿಟ್ಟು ಮುಗ್ಧ ಬಡಜನರ- ರೈತರ ರಕ್ಷಣೆಗೆ ಧಾವಿಸಲು ಅವರು ಆಗ್ರಹಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಅಭಿವೃದ್ಧಿ ಅನುದಾನ ಇಲ್ಲದೇ ಶಾಸಕರು ಅಭಿವೃದ್ಧಿರಹಿತ ಕ್ಷೇತ್ರದೊಂದಿಗೆ ಕೈಕಟ್ಟಿ ಕುಳಿತಿರುವ ದಾರುಣ ಪರಿಸ್ಥಿತಿ ಇದೆ. ರೈತರ ಗೋಳು ಸರಕಾರ ಕೇಳುತ್ತಿಲ್ಲ; ಹಗಲು ದರೋಡೆ, ಕೊಲೆ, ಅತ್ಯಾಚಾರ ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಿದೆ. ಇದಲ್ಲದೇ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಚುನಾಯಿತ ಸರಕಾರ, ಮುಖ್ಯಮಂತ್ರಿಗಳು ಇದ್ದಾರಾ ಎಂದು ಜನರು ಪ್ರಶ್ನಿಸುವಂತಾಗಿದೆ. ಸರಕಾರ ರಾಜ್ಯದ ಅಭಿವೃದ್ಧಿ ಸೇರಿ ಎಲ್ಲವನ್ನೂ ಮರೆತಿದೆ. ಸರಕಾರದ ವಿರುದ್ಧ ಬೀದಿಗಿಳಿದು ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣ ಮಾಡಿಕೊಂಡಿದೆ ಎಂದು ಆಕ್ಷೇಪಿಸಿದರು.
ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಯ ಕುರಿತು ಬಹಳಷ್ಟು ಚರ್ಚೆ ಆಗುತ್ತಿದೆ. ಹಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಕ್ರೋ ಫೈನಾನ್ಸ್ ಹಾವಳಿ ಮತ್ತು ವಸೂಲಾತಿ ದೌರ್ಜನ್ಯದಿಂದ ಭಯಭೀತರಾಗಿ ಹಣ ಮರುಪಾವತಿ ಮಾಡಲು ಸಾಧ್ಯವಾಗದೆ ಪ್ರಾಣ ಕಳಕೊಳ್ಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.












Click it and Unblock the Notifications