ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂಬುದಕ್ಕೆ ಕೇಂದ್ರ ನಾಯಕರ ನಿರಂತರ ರಾಜ್ಯ ಪ್ರವಾಸವೇ ಸಾಕ್ಷಿ: ಡಿ.ಕೆ. ಶಿವಕುಮಾರ್
ಬೆಂಗಳೂರು,ಏಪ್ರಿಲ್8: ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ರಾಜ್ಯದ ಜನ ತೀರ್ಮಾನಿಸಿದ್ದು, ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂದು ಅವರ ಪಕ್ಷದ ನಾಯಕರಿಗೇ ಅರಿವಾಗಿದೆ. ಇದೇ ಕಾರಣಕ್ಕೆ ಪದೇ ಪದೆ ಬಿಜೆಪಿ ಕೇಂದ್ರ ನಾಯಕರು ರಾಜ್ಯ ಪ್ರವಾಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ವ್ಯಂಗ್ಯವಾಡಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮೋದಿ ಅವರು ಈ ದೇಶದ ಪ್ರಧಾನಮಂತ್ರಿಗಳು. ಅವರು ಎಷ್ಟು ಬಾರಿಯಾದರೂ ರಾಜ್ಯಕ್ಕೆ ಭೇಟಿ ನೀಡಬಹುದು. ಆದರೆ ಕರ್ನಾಟಕದ ಚುನಾವಣೆ ಸಮಯದಲ್ಲಿ ಪಕ್ಷದ ಪ್ರಚಾರಕ್ಕೆ ಹೆಚ್ಚು ಆಗಮಿಸುತ್ತಿದ್ದು, ಅವರ ಪಕ್ಷ ರಾಜ್ಯದಲ್ಲಿ ಎಷ್ಟು ದುರ್ಬಲವಾಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಅವರು ಈ ರೀತಿ ಎಲ್ಲ ಪ್ರಯತ್ನ ಮಾಡುತ್ತಾ ಪರೋಕ್ಷವಾಗಿ ಸೋಲನ್ನು ಒಪ್ಪಿಕೊಳ್ಳುತ್ತಿದ್ದಾರೆ.

ರಾಜ್ಯದ ಜನರು ಪ್ರಜ್ಞಾವಂತರು. ಮೋದಿ ಅವರು ಎಷ್ಟು ಬಾರಿ ಬಂದರೂ ಜನ ಈಗಾಗಲೇ ಈ ಸರ್ಕಾರ ಕಿತ್ತೊಗೆಯಲು ತೀರ್ಮಾನ ಮಾಡಿದ್ದಾರೆ. ಬಿಜೆಪಿ ಪ್ರಚಾರಕ್ಕೆ ಜನ ಸೇರುತ್ತಿಲ್ಲ ಎಂದು ಚಿತ್ರ ನಟರನ್ನೂ ಪ್ರಚಾರಕ್ಕೆ ಕರೆಯುತ್ತಿದ್ದಾರೆ ಎಂದರು.
ಇತ್ತೀಚೆಗೆ ಆಟೋ ಚಾಲಕರನ್ನು ನಾನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಆಲಿಸಿದ್ದೆ. ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಯಿಂದ ಅವರ ಬದುಕಿನ ಮೇಲೆ ಬರೆ ಬಿದ್ದಿದೆ. ಚುನಾವಣೆ ಸಮಯದಲ್ಲಿ ಆಟೋ ಚಾಲಕರು ತಮಗೆ ಬೇಕಾದ ಪಕ್ಷದ ಅಭ್ಯರ್ಥಿ ಹಾಗೂ ಕಾರ್ಯಕ್ರಮಗಳನ್ನು ತಮ್ಮ ಆಟೋ ಮೇಲೆ ಹಾಕಿಕೊಂಡು ಪ್ರಚಾರ ಮಾಡುತ್ತಿದ್ದಾರೆ. ಬಹುತೇಕ ಆಟೋ ಚಾಲಕರು ಕಾಂಗ್ರೆಸ್ ಪಕ್ಷದ ಬಗ್ಗೆ ಪ್ರಚಾರ ಮಾಡುತ್ತಿದ್ದಾರೆ. ಆದರೆ ಇಂತಹ ಆಟೋ ಚಾಲಕರ ಮೇಲೆ 5 ಸಾವಿರ ದಂಡ ಹಾಕಲಾಗುತ್ತಿದೆ. ಆಟೋಗಳ ಮೇಲೆ ಪಕ್ಷದ ಪರ ಹಾಕಿಕೊಳ್ಳಬಾರದು ಎಂದು ಯಾವ ಕಾನೂನಿನಲ್ಲಿದೆ? ಪ್ರಶ್ನಿಸಿದರು.
ಆಯೋಗದವರು ಬೇಕಾದರೆ ಆಟೋ ಚಾಲಕರಿಗೆ ಬಾಯಿ ಮಾತಲ್ಲಿ ತಿಳುವಳಿಕೆ ಹೇಳಲಿ. ಆದರೆ ಮೂರ್ನಾಲ್ಕು ದಿನ ಆಟೋ ಮುಟ್ಟುಗೋಲು ಹಾಕಿಕೊಂಡು ದಂಡ ವಿಧಿಸುತ್ತಿರುವುದೇಕೆ? ರಾಜ್ಯದ ಎಲ್ಲ ಆಟೋ ಚಾಲಕರ ಪರವಾಗಿ ನಾವು ನಿಲ್ಲುತ್ತೇವೆ. ಯಾರಿಗೂ ತೊಂದರೆ ನೀಡದಂತೆ ಆಗ್ರಹಿಸುತ್ತೇನೆ. ಅವರನ್ನು ಬಳಸಿಕೊಳ್ಳುತ್ತಿರುವ ಬೇರೆ ಪಕ್ಷದವರು ಅವರ ರಕ್ಷಣೆಗೆ ಬರುತ್ತಿಲ್ಲ. ಆಟೋ ಚಾಲಕರು ಯಾವುದೇ ಪಕ್ಷದ ಪರವಾಗಿ ಬೇಕಾದರೂ ಪ್ರಚಾರ ಮಾಡಲಿ. ಅವರಿಗೆ ಈ ರೀತಿ ಕಿರುಕುಳ ನೀಡಿದರೆ ಅವರ ಪರವಾಗಿ ನಾವು ನಿಲ್ಲುತ್ತೇವೆ.

ಆಟೋ ಚಾಲಕರು ನಮ್ಮ ಸಮಾಜಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಧೈರ್ಯವಾಗಿರಬೇಕು. ತಮ್ಮ ಹಕ್ಕು, ವಿಚಾರವನ್ನು ಅವರು ವ್ಯಕ್ತಪಡಿಸುತ್ತಿದ್ದಾರೆ. ನಾನು ಪೊಲೀಸ್ ಆಯುಕ್ತರು ಹಾಗೂ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಇದಕ್ಕೆ ನಿರ್ಬಂಧ ಹೇರುವ ಕಾನೂನು ಇಲ್ಲ, ಹೀಗಾಗಿ ಆಟೋ ಚಾಲಕರಿಗೆ ಕಿರುಕುಳ ನೀಡಬಾರದು ಎಂದು ಆಗ್ರಹಿಸುತ್ತೇನೆ ಎಂದರು.
ಕಾಂಗ್ರೆಸ್ ಪಕ್ಷ ಸಮುದ್ರವಿದ್ದಂತೆ. ನೂರಾರು ಹೊಳೆ, ನದಿಗಳು ಸೇರುತ್ತವೆ. ಅನೇಕರಿಗೆ ತಾವು ನಾಯಕರಾಗಬೇಕು ಎಂದು ಆಸೆ ಹೊಂದಿರುತ್ತಾರೆ. ಹೀಗಾಗಿ ಕೆಲವರಿಗೆ ಬೇಸರವಾಗಿರುತ್ತದೆ. ಜೆಡಿಎಸ್ ನಿಂದ ಅನೇಕ ಹಾಲಿ ಶಾಸಕರು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ನಾಳೆ ಶಿವಲಿಂಗೇಗೌಡರೂ ಕೂಡ ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ತಿಳಿಸಿದರು.












Click it and Unblock the Notifications