ಅಯೋಧ್ಯೆ ತೀರ್ಪನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳಲ್ಲ
ಬೆಂಗಳೂರು, ನವೆಂಬರ್ 09 : "ಇಡೀ ದೇಶವೇ ಅಯೋಧ್ಯೆ ತೀರ್ಪನ್ನು ಸ್ವಾಗತಿಸಿದೆ. ಬಿಜೆಪಿಗೆ ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ಅವಶ್ಯಕತೆ ಇಲ್ಲ" ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಶನಿವಾರ ಅಯೋಧ್ಯೆ ಭೂ ವಿವಾದದ ಕುರಿತು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಬೆಂಗಳೂರಿನಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷರು, "ಈ ತೀರ್ಪನ್ನು ಬಿಜೆಪಿ ಸ್ವಾಗತಿಸುತ್ತದೆ" ಎಂದರು.
"ಬಹಳ ವರ್ಷಗಳಿಂದ ಅಯೋಧ್ಯೆ ವಿವಾದ ಇತ್ತು. ಈ ವಿವಾದವನ್ನು ಬಗೆಹರಿಸಿದ ನ್ಯಾಯಾಂಗ ಮೇಲೆ ಗೌರವ ಹೆಚ್ಚಾಗಿದೆ. ಸತ್ಯ ಮೇವ ಜಯತೆ ಎನ್ನುವ ಮಾತು ಮತ್ತೊಮ್ಮೆ ನಿಜವಾಗಿದೆ" ಎಂದು ತಿಳಿಸಿದರು.

"ದೇಶದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ರಾಜ್ಯದಲ್ಲಿ ಎಲ್ಲರೂ ಶಾಂತಿಯಿಂದ ಇರಬೇಕು. ಬಿಜೆಪಿ ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದಿಲ್ಲ" ಎಂದು ರಾಜ್ಯಾಧ್ಯಕ್ಷರು ಸ್ಪಷ್ಟಪಡಿಸಿದರು.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಾಯ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನಿಕ ಪೀಠ ಶನಿವಾರ ಅಯೋಧ್ಯೆ ಭೂ ವಿವಾದದ ತೀರ್ಪು ನೀಡಿದೆ.
ಅಯೋಧ್ಯೆ ತೀರ್ಪಿನ ಹಿನ್ನಲೆಯಲ್ಲಿ ದೇಶಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಬಿಜೆಪಿ ಈ ತೀರ್ಪನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳಲಿದೆ ಎಂದು ಕೆಲವು ನಾಯಕರು ಆರೋಪ ಮಾಡುತ್ತಿದ್ದಾರೆ.












Click it and Unblock the Notifications